Hate Speech: ದ್ವೇಷ ಭಾಷಣಕ್ಕೆ ಸ್ವಯಂ ಪ್ರೇರಿತ ದೂರು ದಾಖಲಿಸಲು ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ, ಏಪ್ರಿಲ್. 28: ದ್ವೇಷ ಭಾಷಣ ಪ್ರಕರಣಗಳ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಪೊಲೀಸರಿಗೆ ಸೂಚಿಸಿರುವ 2022 ರ ಆದೇಶದ ವ್ಯಾಪ್ತಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಸ್ತರಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಆದೇಶವನ್ನು ವಿಸ್ತರಿಸಿ ಮಹತ್ವದ ಸೂಚನೆ ನೀಡಿದೆ.
ಈ ಪ್ರಕರಣಗಳ ಬಗ್ಗೆ ಯಾವುದೇ ದೂರು ನೀಡದಿದ್ದರೂ ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. ಪ್ರಕರಣಗಳನ್ನು ದಾಖಲಿಸಲು ವಿಳಂಬ ಮಾಡಿದರೆ ನ್ಯಾಯಾಲಯದ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಾಲಯ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.

ದ್ವೇಷ ಭಾಷಣ ಗಂಭೀರ ಅಪರಾಧ ಎಂದು ಹೇಳಿರುವ ಸುಪ್ರೀಂ ಕೋರ್ಟ್, ದ್ವೇಷಭಾಷಣವು "ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿದೆ" ಎಂದು ಆತಂಕ ವ್ಯಕ್ತಪಡಿಸಿದೆ. ದ್ವೇಷ ಭಾಷಣ ಅಪರಾಧಗಳ ಕುರಿತ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ದ್ವೇಷ ಭಾಷಣಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಪೀಠವು ಈ ಹಿಂದೆ ಮಹಾರಾಷ್ಟ್ರ ರಾಜ್ಯದಿಂದ ಪ್ರತಿಕ್ರಿಯೆ ಕೇಳಿತ್ತು.
"ದ್ವೇಷ ಭಾಷಣ ಮಾಡುವವರು ವಿರುದ್ಧ ಧರ್ಮವನ್ನು ಲೆಕ್ಕಿಸದೆ ಅಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು. ಹೀಗೆ ಮಾಡುವುದರಿಂದ ಸಂವಿಧಾನದ ಮುನ್ನುಡಿಯಲ್ಲಿ ಹೇಳಲಾಗಿರುವ ಭಾರತದ ಜಾತ್ಯತೀತ ಸ್ವರೂಪವನ್ನು ಸಂರಕ್ಷಿಸಲಾಗುತ್ತದೆ" ಎಂದು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಪೀಠವು ಸ್ಪಷ್ಟಪಡಿಸಿದೆ.
ಪ್ರತಿ ರಾಜ್ಯಕ್ಕೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಅರ್ಜಿದಾರರು ಶಿಫಾರಸು ಮಾಡಿದ್ದು, ಪ್ರತಿ ಜಿಲ್ಲೆಗೆ ಒಬ್ಬರನ್ನು ಪೀಠ ಸೂಚಿಸಿದೆ. ಸಾಮಾಜಿಕ ಮಾಧ್ಯಮದಿಂದ ದ್ವೇಷ ಭಾಷಣವನ್ನು ತೆಗೆದುಹಾಕಲು ಕಾರ್ಯವಿಧಾನವನ್ನು ರೂಪಿಸುವ ಅಗತ್ಯವಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದ್ವೇಷ ಭಾಷಣ ಮಾಡಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ನ್ಯಾಯಮೂರ್ತಿ ಕೆಎಂ ಜೋಸೆಫ್ ಅವರು, ಎಫ್ಐಆರ್ಗೆ ಅನುಮತಿ ಅಗತ್ಯ ಎಂದು ಮ್ಯಾಜಿಸ್ಟ್ರೇಟ್ ಅಭಿಪ್ರಾಯಪಟ್ಟಿದ್ದಾರೆ ಮತ್ತು ಹೈಕೋರ್ಟ್ ಸೆಕ್ಷನ್ 156(3) ಅನ್ನು ಒಮ್ಮೆ ನೋಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ ಎಂದು ಪೀಠ ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 12 ರಂದು ಸುಪ್ರೀಂ ಕೋರ್ಟ್ ನಡೆಸಲಿದೆ.












Click it and Unblock the Notifications