ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಸುಪ್ರೀಂನಲ್ಲಿ ಮಹತ್ವದ ವಿಚಾರಣೆ
ನವದೆಹಲಿ, ಜುಲೈ 11: ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ- ಬಾಬ್ರಿ ಮಸೀದಿ ಆಸ್ತಿ ಹಕ್ಕು ಪ್ರಕರಣದಲ್ಲಿ ಮಧ್ಯಸ್ಥಿಕೆ ಸಮಿತಿ ಹೆಚ್ಚಿನ ಪ್ರಗತಿ ಸಾಧಿಸಿಲ್ಲ ಎಂದು ಸುಪ್ರೀಂಕೋರ್ಟಿಗೆ ಅರ್ಜಿದಾರರು ತಿಳಿಸಿದ ಬಳಿಕ ಇಂದು(ಜುಲೈ 11) ಮಹತ್ವದ ವಿಚಾರಣೆ ನಡೆಯಲಿದೆ. ಸಂಧಾನಕಾರರ ಪ್ರಗತಿ ಬಗ್ಗೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ನೇತೃತ್ವದ ನ್ಯಾಯಪೀಠವು ನಿರ್ಣಯ ಕೈಗೊಳ್ಳಲಿದೆ.
ಈ ಪ್ರಕರಣವನ್ನು ಮಾತುಕತೆಯ ಮೂಲಕ ಆಗಸ್ಟ್ 15ರೊಳಗೆ ಪರಿಹಾರ ಕಂಡುಕೊಳ್ಳುವಂತೆ ಸುಪ್ರೀಂಕೋರ್ಟ್ ನ್ಯಾಯಪೀಠವು ಮಧ್ಯಸ್ಥಿಕೆ ಸಂಧಾನಕಾರರಿಗೆ ಸೂಚಿಸಲಾಗಿತ್ತು. ಆದರೆ, ಸಂಧಾನ ಪ್ರಕ್ರಿಯೆ ವಿಳಂಬವಾಗಿರುದ್ದು, ಸರಿಯಾದ ಮಾರ್ಗದಲ್ಲಿ ಸಾಗುತ್ತಿಲ್ಲ, ಕೋರ್ಟ್ ಮೂಲಕವೇ ನ್ಯಾಯ ಪಡೆಯುವುದೊಂದೇ ಪರಿಹಾರ ಎಂದು ಅರ್ಜಿದಾರ ಗೋಪಾಲ್ ಸಿಂಗ್ ವಿಶಾರದ್ ಹೇಳಿದ್ದಾರೆ.
25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್
ಜಸ್ಟೀಸ್ ಬೊಬ್ಡೆ ಅವರಲ್ಲದೆ, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠವು, ಸಂಧಾನ ಪ್ರಗತಿ ಬಗ್ಗೆ ತಿಳಿಸಲು ಅರ್ಜಿದಾರರಿಗೆ ಸೂಚಿಸಿತ್ತು.
ನ್ಯಾ.ಇಬ್ರಾಹಿಂ ಖಾಲಿಫುಲ್ಲಾ, ಶ್ರೀ ರವಿಶಂಕರ್ ಗುರೂಜಿ, ಶ್ರೀರಾಮ್ ಪಂಚು ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿದ್ದು, ಸಂಧಾನ ಪ್ರಕ್ರಿಯೆಯನ್ನು 4 ವಾರದೊಳಗೆ ಆರಂಭಿಸಿ, 8 ತಿಂಗಳೊಳಗೆ ಮುಗಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು. ಆದರೆ, ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ ಆಗಸ್ಟ್ 15ರ ತನಕ ಅವಕಾಶ ನೀಡಲಾಗಿದೆ.
'ಮಂದಿರ, ಮಸೀದಿ ಇತಿಹಾಸ ಬದಲಾಯಿಸಲು ಆಗಲ್ಲ, ಈಗಿನ ವಿವಾದ ಮುಖ್ಯ'
1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.
ಸುಪ್ರೀಂ ನೇಮಿಸಿರುವ ಮೂವರು ಸಂಧಾನಕಾರರು ಯಾರು?
2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ. 2010ರ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ 14ಕ್ಕೂ ಅಧಿಕ ಮೇಲ್ಮನವಿಯನ್ನು ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿದೆ.