Eknath Shinde Big Relief: ಶಿವಸೇನೆ ಶಾಸಕರ ಅನರ್ಹತೆ ಪ್ರಕರಣ; ಶಿಂಧೆ ಸರ್ಕಾರಕ್ಕೆ ಬಿಗ್ ರಿಲೀಫ್ ನೀಡಿದ ಸುಪ್ರೀಂ
ಮಹಾರಾಷ್ಟ್ರದ 16 ಶಿವಸೇನೆ ಶಾಸಕರನ್ನು ಅನರ್ಹತೆ ಮಾಡಬೇಕೆಂದು ಕೋರಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ಗುರುವಾರ (ಮೇ 11) ತೀರ್ಪು ನೀಡಿದೆ.
ಮಹಾರಾಷ್ಟ್ರದ ಶಿವಸೇನೆಯಲ್ಲಿ ಬಂಡಾಯ ಎದ್ದಿದ್ದ 16 ಮಂದಿ ಶಾಸಕರನ್ನು ಅನರ್ಹಗೊಳಿಸಬೇಕೆಂದು ಉದ್ಧವ್ ಠಾಕ್ರೆ ಬಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನ್ಯಾಯಾಲದ ತೀರ್ಪಿನಿಂದ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ನೀಡಿದಂತಾಗಿದೆ.

ಇದೇ ವೇಳೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಬಿಜೆಪಿ ನಾಯಕ ಹಾಗೂ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರಿಗೂ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಸುಪ್ರೀಂ ಕೋರ್ಟ್ ತೀರ್ಪು
* ಕಳೆದ ವರ್ಷ ಜೂನ್ನಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಿದ್ದಕ್ಕಾಗಿ ಏಕನಾಥ್ ಶಿಂಧೆ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

* ಉದ್ಧವ್ ಠಾಕ್ರೆ ಅವರ ಸರ್ಕಾರವನ್ನು ಮರುಸ್ಥಾಪಿಸುವ ವಿನಂತಿಯನ್ನು ಸಹ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಏಕೆಂದರೆ ವಿಧಾನಸಭೆಯಲ್ಲಿ ಬಲಾಬಲ ಪರೀಕ್ಷೆಯನ್ನು ಎದುರಿಸುವ ಮೊದಲೇ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದರು.
* ಉದ್ಧವ್ ಠಾಕ್ರೆ ನೇತೃತ್ವದ ಮಹಾ ಅಘಾಡಿ ಮೈತ್ರಿ ಸರ್ಕಾರವನ್ನು ಉರುಳಿಸಿದ ಅಸೆಂಬ್ಲಿ ಫ್ಲೋರ್ ಟೆಸ್ಟ್ (ಬಹುಮತ ಸಾಬೀತು) ಕೂಡ ಕಾನೂನುಬದ್ಧವಾಗಿಲ್ಲ. ಉದ್ಧವ್ ಠಾಕ್ರೆ ಅವರು ಸದನದಲ್ಲಿ ಬಹುಮತವನ್ನು ಕಳೆದುಕೊಂಡಿದ್ದಾರೆ ಎಂಬ ತೀರ್ಮಾನಕ್ಕೆ ಬಂದ ರಾಜ್ಯಪಾಲ ಬಿ.ಎಸ್. ಕೋಶ್ಯಾರಿ ಅವರು ತಪ್ಪೆಸಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
* ಅಂತರ್ ಅಥವಾ ಪಕ್ಷದೊಳಗಿನ ವಿವಾದಗಳನ್ನು ಬಗೆಹರಿಸಲು ಫ್ಲೋರ್ ಟೆಸ್ಟ್ ಅನ್ನು ಮಾಧ್ಯಮವಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
* ವಿಪಕ್ಷದಲ್ಲಿದ್ದ ದೇವೇಂದ್ರ ಫಡ್ನವಿಸ್ ಮತ್ತು ಸ್ವತಂತ್ರ ಶಾಸಕರು ಅವಿಶ್ವಾಸ ನಿರ್ಣಯ ಮಂಡಿಸಲಿಲ್ಲ ಮತ್ತು ರಾಜ್ಯಪಾಲರ ವಿವೇಚನೆಯು ಕಾನೂನಿಗೆ ಅನುಗುಣವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
* ನಿಜವಾದ ಶಿವಸೇನೆ ಯಾರು ಎಂಬುದನ್ನು ಸ್ಪೀಕರ್ ಮತ್ತು ಚುನಾವಣಾ ಆಯೋಗ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಅನರ್ಹತೆಯ ಪ್ರಶ್ನೆಯನ್ನು ಸಹ ಸ್ಪೀಕರ್ ನಿರ್ಧರಿಸುತ್ತಾರೆ ಎಂದು ತಿಳಿಸಿದೆ.
ಒಂದು ವೇಳೆ ಏಕನಾಥ್ ಶಿಂಧೆ ಅವರನ್ನು ಅನರ್ಹಗೊಳಿಸಿದರೆ, ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು ಹಾಗೂ ಹಾಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರವನ್ನು ವಿಸರ್ಜಿಸಬೇಕಾಗುತ್ತದೆ.
ಶಿವಸೇನೆಯ 16 ಶಾಸಕರು ಅನರ್ಹಗೊಂಡರೆ ಮಹಾರಾಷ್ಟ್ರ ಮೈತ್ರಿ ಸರ್ಕಾರ ಪತನವಾಗನಹುದು ಎನ್ನಲಾಗುತ್ತಿದ್ದರೂ, ನಮ್ಮ ಬಳಿ ಬಹುಮತ ಸಾಬೀತು ಮಾಡಲು ಅಗತ್ಯ ಶಾಸಕರಿದ್ದಾರೆ ಎಂದು ಆಡಳಿತ ಪಕ್ಷಗಳ ನಾಯಕರು ಹೇಳಿದ್ದಾರೆ.
ಮೂಲ ಶಿವಸೇನೆಯಲ್ಲಿ ಉಂಟಾದ ಬಂಡಾಯದ ಬಳಿಕ ಪಕ್ಷವನ್ನು ತೊರೆದು ಬಿಜೆಪಿಯೊಂದಿಗೆ ಕೈಜೋಡಿಸಿದ ಏಕನಾಥ ಶಿಂಧೆ ಬಣದ 16 ಶಾಸಕರನ್ನು ಅನರ್ಹ ಮಾಡಬೇಕು ಎಂದು ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದು, ಆದರೆ ಇದಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಆಕ್ಷೇಪಿಸಿದ್ದರು.
ಸುಪ್ರೀಂ ತೀರ್ಪಿನ ಒಂದು ದಿನ ಮೊದಲು, ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಅವರು 288 ಸದಸ್ಯ ಬಲದ ವಿಧಾನಸಭೆಯಲ್ಲಿ ಆಡಳಿತಾರೂಢ ಶಿವಸೇನೆ-ಬಿಜೆಪಿ ಮೈತ್ರಿಕೂಟವು 184ಕ್ಕೂ ಹೆಚ್ಚು ಮತಗಳನ್ನು ಹೊಂದಿದೆ. ಅಗತ್ಯವಿದ್ದರೆ ಬಹುಮತವನ್ನು ಸಾಬೀತುಪಡಿಸುತ್ತೇವೆ ಎಂದು ತಿಳಿಸಿದ್ದರು.
ಇನ್ನು ಮಹಾರಾಷ್ಟ್ರ ಸರ್ಕಾರದಲ್ಲಿ ಉಂಟಾಗಿದ್ದ ಬಿಕ್ಕಟ್ಟಿನ ಕುರಿತು ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ, ಈ ಮೊದಲು ಮಾರ್ಚ್ 16ರಂದು ತೀರ್ಪನ್ನು ಕಾಯ್ದಿರಿಸಿತ್ತು. ತೀರ್ಪು ಗುರುವಾರ, ಮೇ 10ರಂದು ಪ್ರಕಟವಾಗಬೇಕಿತ್ತು, ಆದರೆ ಇದನ್ನು ಸದ್ಯ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ತೀರ್ಪು ನೀಡಿದೆ.












Click it and Unblock the Notifications