ತಮಿಳರ ಮತ ಸೆಳೆಯಲು ಕಾಂಗ್ರೆಸ್ ತಂತ್ರ,: ಅಖಾಡಕ್ಕೆ ಸ್ಟಾಲಿನ್, ಕನಿಮೋಳಿ ಎಂಟ್ರಿ- ಇನ್ಸೈಡ್ ಸ್ಟೋರಿ
ಚೆನ್ನೈ, ಏಪ್ರಿಲ್ 18: ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಡಿಎಂಕೆ ನಾಯಕಿ ಕನಿಮೊಳಿ ಅವರು ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಒಂದು ವೇಳೆ ಡಿಎಂಕೆ ಅಧ್ಯಕ್ಷರೂ ಆಗಿರುವ ಸಿಎಂ ಎಂಕೆ ಸ್ಟಾಲಿನ್ ಅವರು ಕಾಂಗ್ರೆಸ್ ಪರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಿದರೆ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ನಡೆಯುತ್ತಿರುವ ಪ್ರಯತ್ನಗಳಲ್ಲಿ ಒಂದು ದೊಡ್ಡ ಹೆಜ್ಜೆಯನ್ನು ಗುರುತಿಸಬಹುದಾಗಿದೆ.

ಕರ್ನಾಟಕದಲ್ಲಿ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಇದಲ್ಲದೆ ಮೂಲಗಳ ಪ್ರಕಾರ, ಗ್ರ್ಯಾಂಡ್ ಓಲ್ಡ್ ಪಾರ್ಟಿ ಎಂದೇ ಕರೆಸಿಕೊಳ್ಳುವ ಕಾಂಗ್ರೆಸ್ ಹಲವಾರು ಪ್ರಮುಖ ಡಿಎಂಕೆ ನಾಯಕರೊಂದಿಗೆ ಸಂಪರ್ಕದಲ್ಲಿದ್ದು, ಅವರು ದಕ್ಷಿಣ ರಾಜ್ಯದಲ್ಲಿ ಮೇ 10 ರ ಚುನಾವಣೆಗೆ ಪ್ರಚಾರ ಮಾಡಲು ಬಯಸುತ್ತಾರೆ ಎನ್ನಲಾಗಿದೆ.
ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದಲ್ಲಿ ಶೇ.5ರಷ್ಟು ತಮಿಳರಿದ್ದಾರೆ. ಬೆಂಗಳೂರು, ಮೈಸೂರು, ಕೋಲಾರ ಚಾಮರಾಜನಗರ, ಹುಬ್ಬಳ್ಳಿ ಮತ್ತು ಶಿವಮೊಗ್ಗದಲ್ಲಿ ತಮಿಳು ಮತದಾರರು ಗಣನೀಯ ಸಂಖ್ಯೆಯಲ್ಲಿದ್ದಾರೆ. ದ್ರಾವಿಡ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಸಿಎಂ ಎಂಕೆ ಸ್ಟಾಲಿನ್ ಮತ್ತು ಡಿಎಂಕೆ ಸಹವರ್ತಿ ಕನಿಮೊಳಿ ಅವರು ಉತ್ತಮ ಪ್ರಚಾರಕರಾಗಬಹುದು ಮತ್ತು ರಾಜ್ಯದಲ್ಲಿ ತಮಿಳರನ್ನು ಓಲೈಸಲು ಪಕ್ಷಕ್ಕೆ ಸಹಾಯ ಮಾಡಬಹುದು ಎಂದು ಕಾಂಗ್ರೆಸ್ ನಂಬಿದೆ.
ಎಎನ್ಐ ಜೊತೆ ಮಾತನಾಡಿದ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ನಾಸಿರ್ ಹುಸೇನ್, ಕಾಂಗ್ರೆಸ್ ಹಲವು ವಿರೋಧ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸುತ್ತಿದೆ, ಅವರಲ್ಲಿ ಕೆಲವರು ಕರ್ನಾಟಕದಲ್ಲಿ ಪ್ರಚಾರ ಮಾಡಬಹುದು ಎಂದು ತಿಳಿಸಿದ್ದಾರೆ.
ವಾರದ ಹಿಂದೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರಿದ್ದರು. ಬಿಜೆಪಿಯಿಂದ ವಿಧಾನಸಭಾ ಚುನಾವಣೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಅವರ ರಾಜಕೀಯ ಬದಲಾವಣೆಯಾಗಿದೆ. ರಾಜ್ಯದಲ್ಲಿ ಮೇ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಏಪ್ರಿಲ್ 20ಕ್ಕೆ ಕೊನೆಗೊಳ್ಳಲಿದೆ.












Click it and Unblock the Notifications