CM Vijay: ಕರೂರು ಕಾಲ್ತುಳಿತ ಪ್ರಕರಣ: ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಣೆಯ ಘೋಷಣೆ
ಚೆನ್ನೈ, ಜುಲೈ 09: ತಮಿಳುನಾಡು ಸಿಎಂ ಸಿ.ಜೋಸೆಫ್ ವಿಜಯ್ ಅವರು ಶುಕ್ರವಾರ (ಜುಲೈ 10) ಕರೂರ್ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಕರೂರ್ ಕಾಲ್ತುಳಿತದಲ್ಲಿ ಮೃತಪಟ್ಟ 41 ಜನರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಬಳಿಕ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳ ವಿತರಣೆ ಹಾಗೂ ಪ್ರಮುಖ ಕಲ್ಯಾಣ ಯೋಜನೆಗಳನ್ನು ಘೋಷಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಿಎಂ ವಿಜಯ್ ಅವರು ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಮಾನದ ಮೂಲಕ ತಿರುಚಿರಾಪಳ್ಳಿಗೆ ಹೊರಡಲಿದ್ದು, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಕರೂರ್ಗೆ ಪ್ರಯಾಣಿಸಲಿದ್ದಾರೆ. ಕರೂರ್-ಸೇಲಂ ಬೈಪಾಸ್ ರಸ್ತೆಯಲ್ಲಿರುವ ಅಟ್ಲಾಸ್ ಕಲೈಯರಂಗ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ ಅವರು ಸ್ವಲ್ಪ ಸಮಯದ ವಿಶ್ರಾಂತಿಗಾಗಿ ಸರ್ಕಾರಿ ಪ್ರವಾಸಿ ಮಂದಿರಕ್ಕೆ ತೆರಳಲಿದ್ದಾರೆ.

ಸಿಎಂ ವಿಜಯ್ ಅವರ ಕಾರ್ಯಕ್ರಮಗಳು
ವಿಜಯ್ ಅವರು ಕರೂರ್ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳ 32 ಜನರಿಗೆ ಅನುಕಂಪದ ಆಧಾರದ ಮೇಲಿನ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ನೆರವನ್ನು ನೀಡಲಿದ್ದಾರೆ. ಜೊತೆಗೆ ಇದೇ ವೇಳೆ ಅಂದಾಜು 1,700 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪನೆಯಾಗಲಿರುವ ಖಾಸಗಿ ಚರ್ಮರಹಿತ ಪಾದರಕ್ಷೆ ತಯಾರಿಕಾ ಕಾರ್ಖಾನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಬೃಹತ್ ಯೋಜನೆಯಿಂದ ಸುಮಾರು 13,500 ಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.
ಭದ್ರತಾ ವ್ಯವಸ್ಥೆ ಹೇಗಿರಲಿದೆ?
ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಕರೂರ್ನಾದ್ಯಂತ ಸುಮಾರು 6,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅವರು ಪ್ರಯಾಣಿಸುವ ಮಾರ್ಗ ಮತ್ತು ಕಾರ್ಯಕ್ರಮ ನಡೆಯುವ ಎಲ್ಲಾ ಸ್ಥಳಗಳಲ್ಲಿ ಭಾರಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.
ಕರೂರ್ ಕಾಲ್ತುಳಿತ ದುರಂತದಲ್ಲಿ 41 ಮಂದಿ ಸಾವು
ವೇಲುಚಾಮಿಪುರಂನಲ್ಲಿ ನಡೆದ ಟಿವಿಕೆ ಪಕ್ಷದ ಪ್ರಚಾರದ ಕಾರ್ಯಕ್ರಮವೊಂದರ ಸಂದರ್ಭದಲ್ಲಿ 2025ರ ಸೆಪ್ಟೆಂಬರ್ 27ರಂದು ಈ ಕರೂರ್ ಕಾಲ್ತುಳಿತ ಸಂಭವಿಸಿತ್ತು. ಈ ವೇಳೆ 41 ಜನರು ಸಾವನ್ನಪ್ಪಿದ್ದರು. ಅಲ್ಲದೆ, ಹಲವರು ಗಾಯಗೊಂಡಿದ್ದರು. ಇನ್ನೂ ಶುಕ್ರವಾರ ನಿಗದಿತ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ ನಂತರ ಮುಖ್ಯಮಂತ್ರಿಯವರು ತಿರುಚ್ಚಿರಾಪಳ್ಳಿ ವಿಮಾನ ನಿಲ್ದಾಣಕ್ಕೆ ಹಿಂತಿರುಗಿ ಅಲ್ಲಿಂದ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications