ತಮಿಳುನಾಡಿನಲ್ಲಿ ಮುಂದುವರೆದ ಮಳೆ: ರಸ್ತೆಗಳು ಜಲಾವೃತ, 27 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಚೆನ್ನೈ ನವೆಂಬರ್ 12: ಇಂದಿಗೂ ತಮಿಳುನಾಡಿನಲ್ಲಿ ಮಳೆಯ ಅರ್ಭಟ ಜೋರಾಗಿದ್ದು 27 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿದ ಪರಿಣಾಮ ಕೆಲವೆಡೆ ಜಲಾವೃತವಾಗಿದೆ.
ಇದರಿಂದಾಗಿ ಚೆನ್ನೈ, ಚೆಂಗಲ್ಪೇಟ್, ಕಾಂಚೀಪುರಂ, ತಿರುವಳ್ಳೂರು ಮತ್ತು ವಿಲ್ಲುಪುರಂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರಭಾವದಿಂದ ಚೆನ್ನೈನ ಹಲವಾರು ಭಾಗಗಳು ಮತ್ತು ನೆರೆಯ ಜಿಲ್ಲೆಗಳಾದ ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪೇಟ್ನಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಇತ್ತೀಚಿನ ಮುನ್ಸೂಚನೆಯ ಪ್ರಕಾರ ನೀಲಗಿರಿ, ಕೊಯಮತ್ತೂರು, ತಿರುಪ್ಪೂರ್, ಕಡಲೂರು, ಈರೋಡ್, ವಿಲ್ಲುಪುರಂ, ಕಾಂಚೀಪುರಂ, ಚೆಂಗಲ್ಪಟ್ಟು, ತಿರುವಳ್ಳೂರು, ಚೆನ್ನೈ, ಮಧುರೈ, ಕನ್ಯಾಕುಮಾರಿ ಸೇರಿದಂತೆ ಹಲವು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಶುಕ್ರವಾರ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ಬುಲೆಟಿನ್ನಲ್ಲಿ ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಮುಂದುವರಿದಿದೆ ಮತ್ತು ಮುಂದಿನ 24 ಗಂಟೆಗಳಲ್ಲಿ ಇದು ಹೆಚ್ಚು ಗುರುತಿಸಲ್ಪಡುವ ಸಾಧ್ಯತೆಯಿದೆ ಎಂದು ಹೇಳಿದೆ.
ಇದು ನವೆಂಬರ್ 12 ರ ಬೆಳಗಿನ ಜಾವದವರೆಗೆ ವಾಯುವ್ಯ ದಿಕ್ಕಿನಲ್ಲಿ ತಮಿಳುನಾಡು-ಪುದುಚೇರಿ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.
ನೆರೆಯ ಪುದುಚೇರಿಯಲ್ಲಿ ಗುರುವಾರ ರಾತ್ರಿಯಿಂದ ಹೆಚ್ಚು ಮಳೆಯಾಗಿದೆ. ಇದರ ಬೆನ್ನಲ್ಲೆ ಶುಕ್ರವಾರ ಮತ್ತು ಶನಿವಾರ ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಪ್ರಾದೇಶಿಕ ಸರ್ಕಾರ ರಜೆ ಘೋಷಿಸಿದೆ. ನವೆಂಬರ್ 12 ರ ಶನಿವಾರದವರೆಗೆ ಕೇರಳ ಮತ್ತು ಆಂಧ್ರಪ್ರದೇಶ ಸೇರಿದಂತೆ ದಕ್ಷಿಣದ ವಿವಿಧ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.