"ನಾವು ಅಧಿಕಾರಕ್ಕೆ ಬಂದ್ರೆ ಪ್ರತಿ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ"
ನವದೆಹಲಿ,ಅಕ್ಟೋಬರ್ 09: ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಮುಹೂರ್ತ ಫಿಕ್ಸ್ ಮಾಡಿದೆ. ನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಎನ್ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ನಡುವೆ ನೇರ ಹಣಾಹಣಿಗೆ ಚುನಾವಣಾ ಕಣ ಸಜ್ಜಾಗಿದೆ. ಈ ಬೆನ್ನಲ್ಲೇ ಎನ್ಡಿಎ ಮತ್ತು ಇಂಡಿಯಾ ಒಕ್ಕೂಟದಲ್ಲಿ ಸೀಟು ಹಂಚಿಕೆ ಲೆಕ್ಕಚಾರ ಶುರುವಾಗಿದ್ರೆ, ಇತ್ತ ಅಧಿಕಾರದ ಚುಕ್ಕಾಣಿ ಹಿಡಿಯಲು ಭರ್ಜರಿ ಗ್ಯಾರಂಟಿಯನ್ನ ರಾಜಕೀಯ ಪಕ್ಷಗಳು ನೀಡುತ್ತಿವೆ.
ಹೌದು, ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದರೆ, ಪ್ರತಿ ಕುಟುಂಬಕ್ಕೆ ಒಬ್ಬರಿಗೆ ಸರ್ಕಾರಿ ನೌಕರಿ ನೀಡಲು ಕಾಯ್ದೆ ಜಾರಿಗೆ ತರುವುದಾಗಿ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ. ಇನ್ನೂ ನಾವು ಅಧಿಕಾರಕ್ಕೆ ಬಂದ 20 ದಿನಗಳಲ್ಲಿ ಕಾಯ್ದೆ ತಂದು, 20 ತಿಂಗಳಲ್ಲಿ ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ. ಅಲ್ಲದೇ ಕಳೆದ 20 ವರ್ಷಗಳಲ್ಲಿ ಎನ್ಡಿಎ ಸರ್ಕಾರ ಯುವಕರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಆರೋಪಿಸಿದ್ದಾರೆ.

ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಗೆ ಗೇಮ್ ಚೇಂಜರ್ ಆಗಿ ಪರಿಣಮಿಸಬಹುದಾದ ಪ್ರಮುಖ ಚುನಾವಣಾ ಭರವಸೆಯನ್ನ ತೇಜಸ್ವಿ ಯಾದವ್ ಅವರು ನೀಡಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ಬಿಹಾರದ ಪ್ರತಿ ಮನೆಯಿಂದ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ತೇಜಸ್ವಿ ಯಾದವ್ ಗುರುವಾರ ಘೋಷಿಸಿದ್ದಾರೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿ ಕುಟುಂಬಕ್ಕೂ ಸರ್ಕಾರಿ ಉದ್ಯೋಗವಿರುವ ವ್ಯಕ್ತಿ ಇರುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ. ಸರ್ಕಾರ ರಚಿಸಿದ 20 ದಿನಗಳಲ್ಲಿ ನಾವು ಅದಕ್ಕಾಗಿ ಹೊಸ ಕಾಯ್ದೆಯನ್ನು ಮಾಡುತ್ತೇವೆ ಮತ್ತು 20 ತಿಂಗಳಲ್ಲಿ ಒಂದೇ ಒಂದು ಮನೆಯೂ ಸರ್ಕಾರಿ ಉದ್ಯೋಗವಿಲ್ಲದೆ ಇರುವುದಿಲ್ಲ ಎಂದು ತೇಜಸ್ವಿ ಯಾದವ್ ಹೇಳಿದರು.
ಹಿಂದಿನ ವಿಧಾನಸಭಾ ಚುನಾವಣೆಯಲ್ಲೂ ಸರ್ಕಾರಿ ನೌಕರಿಗಳ ಭರವಸೆ ನೀಡಿದ್ದೆ ಎಂದಿರುವ ತೇಜಸ್ವಿ ಯಾದವ್, ತಾವು ಅಧಿಕಾರದಲ್ಲಿದ್ದ ಕಡಿಮೆ ಅವಧಿಯಲ್ಲಿ ಐದು ಲಕ್ಷ ಉದ್ಯೋಗಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ. ಐದು ವರ್ಷಗಳ ಅವಧಿ ಸಿಕ್ಕಿದ್ದರೆ ಏನಾಗುತ್ತಿತ್ತು ಊಹಿಸಿಕೊಳ್ಳಿ ಎಂದು ಅವರು ಹೇಳಿದ್ದಾರೆ. ತೇಜಸ್ವಿ ಯಾದವ್ ಅವರು ಇಂಡಿಯಾ ಬ್ಲಾಕ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಆದರೆ, ವಿಪಕ್ಷಗಳು ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.












Click it and Unblock the Notifications