ಚುನಾವಣಾ ಸಮೀಕ್ಷೆ; ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಸರಳ ಬಹುಮತ!
ಹೈದರಾಬಾದ್, ಸೆಪ್ಟೆಂಬರ್ 04; ತೆಲಂಗಾಣ ವಿಧಾನಸಭೆ ಚುನಾವಣೆಗೆ ವಿವಿಧ ಪಕ್ಷಗಳು ತಯಾರಿ ಆರಂಭಿಸಿವೆ. 119 ಸದಸ್ಯ ಬಲದ ವಿಧಾನಸಭೆಗೆ ಈ ವರ್ಷದ ಅಂತ್ಯದೊಳಗೆ ಚುನಾವಣೆ ನಡೆಯಲಿದೆ. ಸದ್ಯ ಬಿಆರ್ಎಸ್ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದೆ.
ಮುಂದಿನ ಚುನಾವಣೆಯಲ್ಲಿ ಬಿಆರ್ಎಸ್ ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ವಿವಿಧ ಪಕ್ಷಗಳು ತಂತ್ರ ರೂಪಿಸುತ್ತಿವೆ. ಕರ್ನಾಟಕದಲ್ಲಿ ಗೆದ್ದಿರುವ ಕಾಂಗ್ರೆಸ್ ತೆಲಂಗಾಣದಲ್ಲಿಯೂ ಪಕ್ಷದ ಬಾವುಟ ಹಾರಿಸಲು ಸಿದ್ಧವಾಗುತ್ತಿದೆ.

ತೆಲಂಗಾಣ ವಿಧಾನಸಭೆ ಚುನಾವಣೆಯ ಬಗ್ಗೆ ಚುನಾವಣಾ ಪೂರ್ವ ಸಮೀಕ್ಷೆಯೊಂದು ಪ್ರಕಟವಾಗಿದೆ. PollTracker ನಡೆಸಿರುವ ಸಮೀಕ್ಷೆಯ ವರದಿ ಪ್ರಕಾರ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ 35 ರಿಂದ 40 ಸೀಟುಗಳಲ್ಲಿ ಮಾತ್ರ ಗೆಲ್ಲಲಿದ್ದು, ಅಧಿಕಾರವನ್ನು ಕಳೆದುಕೊಳ್ಳಲಿದೆ.
ಸಮೀಕ್ಷೆಯ ವರದಿ; PollTracker ಜುಲೈ 1 ರಿಂದ ಸೆಪ್ಟೆಂಬರ್ 1ರ ತನಕ ತೆಲಂಗಾಣ ರಾಜ್ಯದಲ್ಲಿ ನಡೆಸಿದ ಸಮೀಕ್ಷೆಯ ವರದಿಯನ್ನು ಭಾನುವಾರ ಬಿಡುಗಡೆ ಮಾಡಿದೆ. 123580 ಮಾದರಿಗಳ ಸಂಗ್ರಹದ ಮೂಲಕ ಸಮೀಕ್ಷೆ ಮಾಡಲಾಗಿದೆ ಎಂದು ಹೇಳಿದೆ.
ಸಮೀಕ್ಷೆಯ ವರದಿ ಪ್ರಕಾರ ಬಿಆರ್ಎಸ್ 35-40, ಬಿಜೆಪಿ 3-5, ಕಾಂಗ್ರೆಸ್ 63-69, ಎಐಎಂಐಎಂ 2-5 ಮತ್ತು ಇತರರು 2-6 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 60. ಈ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಸರಳ ಬಹುಮತ ಪಡೆಯಲಿದೆ.
ಸಮೀಕ್ಷೆ ವರದಿಯ ಪ್ರಕಾರ ಬಿಆರ್ಎಸ್ ಪಕ್ಷ ಶೇ 34, ಬಿಜೆಪಿ ಶೇ 9, ಕಾಂಗ್ರೆಸ್ ಶೇ 42, ಎಐಎಂಐಎಂ ಶೇ 10 ಮತ್ತು ಇತರರು ಶೇ 5ರಷ್ಟು ಮತಗಳನ್ನು ಪಡೆಯಲಿದ್ದಾರೆ. ಮತಗಳಿಕೆಯಲ್ಲಿ ಸಹ ಕಾಂಗ್ರೆಸ್ ಪಕ್ಷವೇ ಮುಂದಿರುವುದು ಚುನಾವಣೆ ಬಗ್ಗೆ ಕುತೂಹಲವನ್ನು ಹುಟ್ಟುಹಾಕಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ತೆಲಂಗಾಣ ಕಾಂಗ್ರೆಸ್ನ ಮುಖ್ಯಸ್ಥ ರೇವಂತ್ ರೆಡ್ಡಿ ಜೊತೆ ಸರಣಿ ಸಭೆಗಳನ್ನು ನಡೆಸುವ ಮೂಲಕ ರಾಜ್ಯದಲ್ಲಿ ಚುನಾವಣಾ ಸಿದ್ಧತೆ ನಡೆಸುತ್ತಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಹ ತೆಲಂಗಾಣದ ಪಕ್ಷದ ನಾಯಕರಿಗೆ ಸಲಹೆಗಳನ್ನು ನೀಡುತ್ತಿದ್ದಾರೆ.
ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರು ಮಾಡುತ್ತಿದೆ. ಈ ನಡುವೆ ವೈ. ಎಸ್. ಶರ್ಮಿಳಾ ನೇತೃತ್ವದ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಲಾಗುತ್ತದೆ ಎಂಬ ಸುದ್ದಿಯೂ ಇದೆ. ವೈ. ಎಸ್. ಶರ್ಮಿಳಾ ಕಳೆದ ವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದರು.
ಬಿಜೆಪಿ, ಕಾಂಗ್ರೆಸ್, ವೈಎಸ್ಆರ್ ತೆಲಂಗಾಣ ಪಕ್ಷದ ಮುಖ್ಯ ಟಾರ್ಗೆಟ್ ಬಿಆರ್ಎಸ್ ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್. ರಾಷ್ಟ್ರಮಟ್ಟದಲ್ಲಿ ಪಕ್ಷವನ್ನು ಬೆಳೆಸುವ ಗುರಿ ಹೊಂದಿರುವ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಜೊತೆ ಸಮಾನ ಅಂತರ ಕಾಯ್ದುಕೊಂಡಿದ್ದಾರೆ. 2024ರ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ವಿರೋಧ ಪಕ್ಷಗಳು ಮಾಡಿಕೊಂಡಿರುವ I.N.D.I.A ಮೈತ್ರಿಕೂಟದಿಂದಲೂ ಅವರು ದೂರ ಉಳಿದಿದ್ದಾರೆ.
ಬಿಜೆಪಿ ದಕ್ಷಿಣ ಭಾರತದಲ್ಲಿ ಅಧಿಕಾರವಿದ್ದ ಕರ್ನಾಟಕವನ್ನು ಈಗಾಗಲೇ ಕಳೆದುಕೊಂಡಿದೆ. ಅದು ತೆಲಂಗಾಣದಲ್ಲಿ ಕೆ. ಚಂದ್ರಶೇಖರ್ ರಾವ್ ಅವರನ್ನು ಗುರಿಯಾಗಿಸಿಕೊಂಡಿದ್ದು, ರಾಜ್ಯದಲ್ಲಿ ಅಧಿಕಾರ ಹಿಡಿಯಲು ತಂತ್ರವನ್ನು ರೂಪಿಸುತ್ತಿದೆ. ಆದರೆ ಚುನಾವಣಾ ಪೂರ್ವ ಸಮೀಕ್ಷೆ ಪಕ್ಷ 3-5 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಹೇಳಿದೆ.
ವರದಿಗಳ ಪ್ರಕಾರ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ. ಸರ್ಕಾರ ಜನರ ಹಿತವನ್ನು ಕಡೆಗಣಿಸಿದೆ ಎಂಬುದು ಆರೋಪವಾಗಿದೆ. ಇದು ಚುನಾವಣೆಯಲ್ಲಿ ವಿರೋಧ ಪಕ್ಷಗಳಿಗೆ ಸಹಕಾರಿಯಾಗಲಿದೆಯೇ? ಕಾದು ನೋಡಬೇಕಿದೆ.












Click it and Unblock the Notifications