Telangana: ಅತಂತ್ರ ಸ್ಥಿತಿ ನಿರ್ಮಾಣವಾದರೆ... BRS+BJP+AIMIM= ತೆಲಂಗಾಣ ಸರ್ಕಾರ?
ಹೈದರಾಬಾದ್, ಡಿಸೆಂಬರ್ 03: ತೀವ್ರ ಕುತೂಹಲ ಮೂಡಿಸಿರುವ ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. 119 ಸ್ಥಾನಗಳಿಗೆ ನಡೆದಿರುವ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಆರ್ಎಸ್ ನಡುವಿನ ನೇರ ಹಣಾಹಣಿಗೆ ಸಾಕ್ಷಿಯಾಗಿದೆ. ಈಗಿರುವ ಟ್ರೆಂಡ್ ಪ್ರಕಾರ, ಕಾಂಗ್ರೆಸ್ ಮುನ್ನೆಡೆ ಸಾಧಿಸಿದೆ. ಆದರೆ, ಕಾಂಗ್ರೆಸ್ ಪಕ್ಷವು ಪೂರ್ಣ ಬಹುಮತ ಪಡೆಯದಿದ್ದರೆ, ಮುಂದೇನಾಗಬಹುದು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.
ಮ್ಯಾಜಿಕ್ ಸಂಖ್ಯೆಗಿಂತ ಸ್ವಲ್ಪ ಮುಂದಿರುವ ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಆಡಳಿತಾರೂಢ ಭಾರತೀಯ ರಾಷ್ಟ್ರ ಸಮಿತಿ (ಬಿಆರ್ಎಸ್) ಎರಡನೆಯ ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿದೆ. 119 ಸ್ಥಾನಗಳ ತೆಲಂಗಾಣ ವಿಧಾನಸಭೆಯಲ್ಲಿ ಬಹುಮತವನ್ನು ಹೊಂದಲು 60ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಸಾಧಿಸಬೇಕು.

ಮುನ್ನೆಡೆ ಸಾಧಿಸಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈಗಾಗಲೇ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಅವರ ನಿವಾಸದ ಹೊರಗೆ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ಬಿಆರ್ಎಸ್ ಪಕ್ಷಕ್ಕೆ ಮುಖಭಂಗವಾಗಿರುವುದಂತೂ ಸತ್ಯ.
ಹೈದರಾಬಾದ್ನಲ್ಲಿ ಬೀಡುಬಿಟ್ಟಿರುವ ಡಿಕೆಶಿ
ಕೆಆರ್ಎಸ್ ನೇತೃತ್ವದ ಬಿಆರ್ಎಸ್ ಪಕ್ಷವು ಕಾಂಗ್ರೆಸ್ ಅಭ್ಯರ್ಥಿಗಳನ್ನು ಖರೀದಿ ಮಾಡಲು ಹೊರಟಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರವೇ ಹೈದರಾಬಾದ್ಗೆ ಡಿಕೆಶಿ ತೆರಳಿದ್ದಾರೆ. ಗೆಲುವು ಸಾಧಿಸುವ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಎಕ್ಸಿಟ್ ಪೋಲ್ಗಳು ಕಾಂಗ್ರೆಸ್ಗೆ ಪರವಾಗಿದ್ದರೂ, ತೆಲಂಗಾಣ ಗೆಲುವಿನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ದೃಢವಾದ ನಂಬಿಕೆ ಇಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆಗಳು ಹೆಚ್ಚಿವೆ ಎಂಬ ಮಾತುಗಳು ಕೇಳಿಬಂದಿವೆ.

ಸಮೀಕ್ಷೆಗಳು ಹೇಳಿದ್ದೇನು?
ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್ಗೆ 60 ರಿಂದ 70 ಸ್ಥಾನಗಳು ದೊರೆಯಲಿವೆ ಎಂದು ಹೇಳಿವೆ. ಈ ಹಿನ್ನೆಲೆಯಲ್ಲಿ ಕುದುರೆ ವ್ಯಾಪಾರ ನಡೆಯುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಅತಂತ್ರ ಸ್ಥಿತಿ ನಿರ್ಮಾಣವಾದರೆ ಏನಾಗಬಹುದು?
ಒಂದು ವೇಳೆ, ತೆಲಂಗಾಣದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಮುಂದೆ ಏನಾಗಬಹುದು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ ಬಹುಮತ ಸಿಗದೇ ಹೋದರೆ, ಬಿಆರ್ಎಸ್ ಪಕ್ಷಕ್ಕೆ ಬಿಜೆಪಿ, ಎಐಎಂಐಎಂ ಪಕ್ಷಗಳು ಬೆಂಬಲ ನೀಡಬಹುದು ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಇದು ಕಾಂಗ್ರೆಸ್ ನುಂಗಲಾಗದ ತುತ್ತಾಗಿಯೂ ಪರಿಣಮಿಸಬಹುದು.












Click it and Unblock the Notifications