26/11 ರಂದು ಮತ್ತೊಂದು ದಾಳಿಗೆ ಜೈಷ್ ಉಗ್ರರಿಂದ ಸಂಚು: ಮೋದಿ
ನವದೆಹಲಿ, ನವೆಂಬರ್ 20: ಮುಂಬೈ ದಾಳಿಯ ದಿನದಂದೇ ಮತ್ತೊಂದು ದೊಡ್ಡ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದರು ಎಂಬುದು ತಿಳಿದುಬಂದಿದ್ದು, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಭದ್ರತಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.
ಈ ಕುರಿತು ಸ್ವತಃ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದು, ಜಮ್ಮು ಕಾಶ್ಮೀರದ ನಾಗ್ರೋಟಾದಲ್ಲಿ ಗುರುವಾರ ಭಾರತೀಯ ಸೇನೆಯ ಯೋಧರಿಂದ ಹತ್ಯಗೀಡಾದ ನಾಲ್ವರು ಜೈಷ್-ಎ-ಮೊಹಮ್ಮದ್ ಸಂಘಟನೆಯ ಉಗ್ರರು ಭಾರೀ ಪ್ರಮಾಣದ ದಾಳಿ ನಡೆಸಲು ಸಂಚು ರೂಪಿಸಿದ್ದರು.
26/11 ಮುಂಬೈ ದಾಳಿಯ ಉಗ್ರ ಕಸಬ್ ಗೂ ಬೆಂಗಳೂರಿಗೂ ನಂಟು!
ಎರಡು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ನಾಲ್ವರನ್ನು ಹೊಡೆದುರಿಳಿಸಲಾಗಿದೆ.
ಜೈಷ್ ಎ ಮೊಹಮ್ಮದ್ ಉಗ್ರರ ಹತ್ಯೆ ಕುರಿತು ಮೋದಿ ಉನ್ನತ ಮಟ್ಟದ ಭದ್ರತಾ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ.
ಈ ವೇಳೆ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳು ಪತ್ತೆಯಾಗಿವೆ. ಇದರಿಂದ ದೊಡ್ಡ ಹಾನಿ ಮತ್ತು ವಿನಾಶದ ಪ್ರಯತ್ನವನ್ನು ಮತ್ತೊಮ್ಮೆ ವಿಫಲಗೊಳಿಸಿದಂತಾಗಿದೆ ಎಂದು ತಿಳಿಸಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, ನಮ್ಮ ಭದ್ರತಾ ಪಡೆ ಮತ್ತೊಮ್ಮೆ ಅತ್ಯಂತ ಧೈರ್ಯ ಹಾಗೂ ವೃತ್ತಿಪರತೆಯನ್ನು ಪ್ರದರ್ಶಿಸಿದ್ದಕ್ಕೆ ಧನ್ಯವಾದಗಳು. ಜಮ್ಮು ಖಾಶ್ಮೀರದಲ್ಲಿ ತಳಮಟ್ಟದ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಗುರಿಯಾಗಿಸಿಕೊಂಡು ಎಸಗುತ್ತಿದ್ದ ದೃಷ್ಕೃತ್ಯವನ್ನು ಹತ್ತಿಕ್ಕಿದಂತಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆದ ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಿ ಕಾರ್ಯದರ್ಶಿ ಹಾಗೂ ಗುಪ್ತಚರ ದಳದ ಉನ್ನತ ಅಧಿಕಾರಿಗಳು ನಾಗ್ರೋಟಾ ಎನ್ಕೌಂಟರ್ ಬಗ್ಗೆ ಚರ್ಚೆ ನಡೆಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಮುಂಬರುವ ಜಿಲ್ಲಾ ಅಭಿವೃದ್ಧಿ ಮಂಡಳಿಯ ಚುನಾವಣೆಯನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಜಮ್ಮು ಕಾಶ್ಮೀರದಲ್ಲಿನ ತಳಮಟ್ಟದ ಪ್ರಜಾಪ್ರಭುತ್ವವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದಿದ್ದಾರೆ.