ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಡಿಮ್ಯಾಂಡ್ ಇಲ್ಲಿ ಇಲ್ಲ, ಕಾರಣವೇನು ?
ಕಳೆದ ಎರಡು ವರ್ಷಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಹೊಸ ಪ್ರಯೋಗವೊಂದನ್ನು ಶುರು ಮಾಡಿದೆ. ಅದೇ ಗ್ಯಾರಂಟಿ ಯೋಜನೆ. ಹೌದು, ದೇಶದಲ್ಲಿ ಕಾಂಗ್ರೆಸ್ ಇನ್ನೇನು ಯಾವುದೇ ರಾಜ್ಯದಲ್ಲೂ ಅಧಿಕಾರಕ್ಕೆ ಬರುವುದಕ್ಕೆ ಸಾಧ್ಯವೇ ಇಲ್ಲ. ಕಾಂಗ್ರೆಸ್ ಸೋತು ಸುಣ್ಣವಾಗಿದೆ ಎನ್ನುವ ಪರಿಸ್ಥಿತಿ ಎದುರಾಗಿತ್ತು. ಅಲ್ಲದೇ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಗುಡುಗಿದ್ದರು. ಅದಕ್ಕೆ ತಕ್ಕಂತೆ ಕಾಂಗ್ರೆಸ್ ಸಹ ಪ್ರಮುಖ ಹಾಗೂ ನಿರ್ಣಾಯಕ ಚುನಾವಣೆಗಳಲ್ಲಿ ಸೋಲುತ್ತಲ್ಲೇ ಬಂತು. ಆ ಸಮಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದಿದ್ದೇ ಗ್ಯಾರಂಟಿ ಯೋಜನೆಗಳು. ಹೊಸ ಮಾದರಿಯ ಗ್ಯಾರಂಟಿ ಯೋಜನೆಗಳು ಜನರನ್ನು ಆಕರ್ಷಿಸಿದ್ದವು. ಆದರೆ, ಅದೇ ಗ್ಯಾರಂಟಿ ಯೋಜನೆಗಳನ್ನು ಜನ ಈಗ ಬೇಡ ಅಂತಿದ್ದಾರೆ.
ಹೌದು ಕಾಂಗ್ರೆಸ್ ಪಕ್ಷವು ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರ ರಾಜಕೀಯದಲ್ಲಿ ಹೊಸ ಮಾದರಿಯ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿತ್ತು. ಈ ಯೋಜನೆಯು ಲಕ್ಷಾಂತರ ಜನರನ್ನು ಈಗಾಗಲೇ ತಲುಪಿದೆ ಸಹ. ಆದರೆ, ಕಾಂಗ್ರೆಸ್ನ ಗ್ಯಾರಂಟಿ ಯೋಜನೆಗಳು ಸಹ ಆ ಪಕ್ಷದ ಕೈ ಹಿಡಿಯುತ್ತಿಲ್ಲ. ಇದು ಕಾಂಗ್ರೆಸ್ ಪಕ್ಷದಲ್ಲಿ ತಳಮಳವನ್ನು ಸೃಷ್ಟಿ ಮಾಡಿದೆ. ಈಚೆಗೆ ನಡೆದ ಮೂರು ವಿಧಾನಸಭೆ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ನಿಜ. ಆದರೆ, ಇದೇ ಸಂದರ್ಭದಲ್ಲಿ ದೇಶದಲ್ಲಿ ನಡೆದ ಪ್ರಮುಖ ಎರಡು ರಾಜ್ಯಗಳ ಚುನಾವಣೆಯಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ದಕ್ಷಿಣ ಭಾರತದಂತೆ ಉತ್ತರ ಭಾರತದಲ್ಲೂ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಪರಿಚಯಿಸಿದೆ. ಆದರೆ, ಇಲ್ಲಿ ಯಶಸ್ವಿಯಾದ ಯೋಜನೆಗಳು ಅಲ್ಲಿ ಸಕ್ಸಸ್ ಆಗುತ್ತಿಲ್ಲ.

ದಕ್ಷಿಣ ಭಾರತದ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಪ್ರಮುಖ ಪಾತ್ರ ವಹಿಸಿದ್ದವು.
ಹರಿಯಾಣ & ಮಹಾರಾಷ್ಟ್ರದಲ್ಲಿ ವರ್ಕ್ ಆಗಿಲ್ಲ: ಕಾಂಗ್ರೆಸ್ ಪಕ್ಷವು ದೇಶದ ವಿವಿಧ ರಾಜ್ಯಗಳಲ್ಲಿ ಅದರಲ್ಲೂ ಪ್ರಮುಖವಾಗಿ ಉತ್ತರ ಭಾರತದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸುತ್ತಿದೆ. ಆದರೆ, ಈ ಯೋಜನೆಗಳನ್ನು ಅಲ್ಲಿನ ಜನ ಮುಕ್ತ ಮನಸ್ಸಿನಿಂದ ಸ್ವೀಕರಿಸುತ್ತಿಲ್ಲ. ಹಿಮಾಚಲ ಪ್ರದೇಶವನ್ನು ಹೊರತುಪಡಿಸಿ ಉಳಿದ ಉತ್ತರ ಭಾರತದ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದುಕ್ಕೆ ಕಾಂಗ್ರೆಸ್ಗೆ ಸಾಧ್ಯವಾಗಿಲ್ಲ. ಇನ್ನು ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಇರುವ ಹಣಕಾಸಿನ ಕೊರತೆ ಇದೆ. ಈ ಯೋಜನೆಯನ್ನು ನಿಭಾಯಿಸುವುದಕ್ಕೆ ಕಾಂಗ್ರೆಸ್ನಿಂದ ಸಾಧ್ಯವಾಗುತ್ತಿಲ್ಲ ಇದು ಕಾಂಗ್ರೆಸ್ ಪಕ್ಷದ ಬಗ್ಗೆ ಜನರಲ್ಲಿ ತಪ್ಪು ಸಂದೇಶವನ್ನು ನೀಡುತ್ತಿದೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದ್ದವು. ಇನ್ನು ಕಾಂಗ್ರೆಸ್ ಪಕ್ಷವು ಎಲ್ಲಾ ರಾಜ್ಯಗಳಲ್ಲೂ ಒಂದೇ ಮಾದರಿಯ ಗ್ಯಾರಂಟಿ ಯೋಜನೆಯನ್ನು ಪರಿಚಯಿಸುತ್ತಿಲ್ಲ. ದೇಶದ ವಿವಿಧ ರಾಜ್ಯದಲ್ಲಿ ಆಯಾ ರಾಜ್ಯದ ಜನರ ಅಗತ್ಯಕ್ಕೆ ಅನುಸಾರವಾಗಿ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸುತ್ತಿದೆ. ಅದೇ ರೀತಿಯೇ ಹರಿಯಾಣ ಹಾಗೂ ಮಹಾರಾಷ್ಟ್ರದಲ್ಲೂ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿತ್ತು. ಕರ್ನಾಟಕದಲ್ಲಿ ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ಗೃಹಲಕ್ಷ್ಮೀ ಮಾದರಿ ಯೋಜನೆಯನ್ನು ಮಹಾರಾಷ್ಟ್ರದಲ್ಲೂ ಪರಿಚಯಿಸಲಾಗಿತ್ತು. ಆದರೆ, ಅಲ್ಲಿ ಮತದಾರರು ಈ ಯೋಜನೆಗಳನ್ನು ಒಪ್ಪಿಕೊಂಡಿಲ್ಲ.

ಕಾಂಗ್ರೆಸ್ ಹಾಗೂ ಮಹಾ ವಿಕಾಸ್ ಅಘಾಡಿ ಮೈತ್ರಿ ಪಕ್ಷಗಳು ಇಲ್ಲಿ ಕಳೆದ ಬಾರಿ ವಿಧಾನಸಭೆ ಚುನಾವಣೆಗಿಂತಲೂ ಕಳಪೆ ಸಾಧನೆ ಮಾಡಿವೆ. ಇಲ್ಲಿ ಕಾಂಗ್ರೆಸ್ ಪರಿಚಯಿಸಿದ್ದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನ ಉತ್ಸಾಹ ತೋರಿಸಿಲ್ಲ.
ಮಹಾರಾಷ್ಟ್ರದಲ್ಲಿ ಮುಂದಿನ ಮುಖ್ಯಮಂತ್ರಿ ಚರ್ಚೆ
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಂದು ರಾಜೀನಾಮೆ ಕೊಡುವ ಸಾಧ್ಯತೆ ಇದ್ದು, ಮಹಾರಾಷ್ಟ್ರದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ಗಂಭೀರ ಚರ್ಚೆಗಳು ಪ್ರಾರಂಭವಾಗಿವೆ. ಬಿಜೆಪಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ, ಹಾಲಿ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.












Click it and Unblock the Notifications