ಐತಿಹಾಸಿಕ ಕ್ಷಣ; ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಮೂವರು ಮಹಿಳೆಯರು
ನವದೆಹಲಿ, ಆಗಸ್ಟ್ 31: ಇದೇ ಮೊದಲ ಬಾರಿಗೆ ಮೂವರು ಮಹಿಳಾ ನ್ಯಾಯಮೂರ್ತಿಗಳು ಏಕಕಾಲದಲ್ಲಿ ಸುಪ್ರೀಂ ಕೋರ್ಟ್ಗೆ ಪದೋನ್ನತಿ ಪಡೆದು ಪ್ರಮಾಣ ವಚನ ಸ್ವೀಕರಿಸಿರುವುದು ಇತಿಹಾಸ ಸೃಷ್ಟಿಸಿದೆ.
ವಿವಿಧ ಹೈಕೋರ್ಟ್ಗಳ ನ್ಯಾಯಮೂರ್ತಿಗಳು, ಮುಖ್ಯ ನ್ಯಾಯಮೂರ್ತಿಗಳು ಹಾಗೂ ಹಿರಿಯ ವಕೀಲರೊಬ್ಬರು ಸೇರಿದಂತೆ ಒಂಬತ್ತು ಮಂದಿಗೆ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಪದೋನ್ನತಿಗೆ ಕೆಲ ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿತ್ತು.
ಶಿಫಾರಸಿಗೆ ಕೇಂದ್ರ ಅನುಮೋದನೆ ನೀಡಿದ್ದು, ಮಂಗಳವಾರ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕವಾದ 9 ಮಂದಿ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕರ್ನಾಟಕದ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದು, ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನಿಸಿಕೊಂಡಿದ್ದಾರೆ.

ಹಾಲಿ ಸಿಜೆಐ ಎನ್. ವಿ ರಮಣ ಅವರು ನೂತನ ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಒಂಬತ್ತರಲ್ಲಿ ಮೂವರು ಮಹಿಳಾ ನ್ಯಾಯಮೂರ್ತಿಗಳಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಭಾರತಕ್ಕೆ ಐತಿಹಾಸಿಕ ಕ್ಷಣವಾಗಿದೆ.
ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ (ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ), ಬಿ.ವಿ. ನಾಗರತ್ನ (ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ) ಹಾಗೂ ಬೇಲಾ ಎಂ ತ್ರಿವೇದಿ (ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ) ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಮೂವರು ಮಹಿಳೆಯರ ಕಿರುಪರಿಚಯ ಇಲ್ಲಿದೆ...

ನ್ಯಾಯಮೂರ್ತಿ. ಬಿ.ವಿ. ನಾಗರತ್ನ
ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಇ.ಎಸ್. ವೆಂಕಟರಾಮಯ್ಯ ಅವರ ಪುತ್ರಿ ನಾಗರತ್ನ ಅವರು 1987ರ ಅಕ್ಟೋಬರ್ 28ರಂದು ಬೆಂಗಳೂರಿನಲ್ಲಿ ವಕೀಲ ವೃತ್ತಿ ಆರಂಭಿಸಿದರು. ಫೆಬ್ರವರಿ 18, 2008ರಲ್ಲಿ ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2010ರ ಫೆಬ್ರವರಿ 7ರಂದು ಅವರನ್ನು ಖಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಯಿತು.
2009ರಲ್ಲಿ ನಡೆದ ವಕೀಲರ ಪ್ರತಿಭಟನೆ ವೇಳೆ ಅವರನ್ನು ಬಲವಂತವಾಗಿ ಬಂಧಿಸಿದ್ದು ಗಮನ ಸೆಳೆದಿತ್ತು.

ಹಿಮಾ ಕೊಹ್ಲಿ
ಹಿಮಾ ಕೊಹ್ಲಿ ಅವರು ನವದೆಹಲಿಯವರು 2006ರ ಮೇ 2019ರಂದು ದೆಹಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2007ರಲ್ಲಿ ಖಾಯಂ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 2021ರ ಜನವರಿಯಲ್ಲಿ ತೆಲಂಗಾಣ ಹೈಕೋರ್ಟ್ ಪ್ರಪ್ರಥಮ ಹಾಗೂ ಏಕೈಕ ಮಹಿಳಾ ಮುಖ್ಯ ನ್ಯಾಯಮೂರ್ತಿಯಾದರು. ಇದೀಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದಿದ್ದಾರೆ.

ಬೇಲಾ ತ್ರಿವೇದಿ
ಬೇಲಾ ಅವರು 2011ರ ಫೆಬ್ರವರಿ 17ರಂದು ಗುಜರಾತ್ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಗುಜರಾತ್ ಹೈಕೋರ್ಟ್ಗೆ ಪದೋನ್ನತಿಗೊಂಡರು. 2011ರಲ್ಲಿ ರಾಜಸ್ಥಾನ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ವರ್ಗಾವಣೆಯಾದರು. 2016ರಲ್ಲಿ ಗುಜರಾತ್ ಹೈಕೋರ್ಟ್ ಖಾಯಂ ನ್ಯಾಯಮೂರ್ತಿಯಾದವರು.
ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾದ ಅಭಯಶ್ರೀನಿವಾಸ ಓಕಾ, ಗುಜರಾತ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ವಿಕ್ರಂನಾಥ್, ಸಿಕ್ಕಿಂ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜಿತೇಂದ್ರಕುಮಾರ್ ಮಹೇಶ್ವರಿ, ತೆಲಂಗಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಹಿಮಾಕೋಹ್ಲಿ, ಕೇರಳ ಹೈಕೋರ್ಟ್ನ ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ಮದ್ರಾಸ್ ಹೈಕೋರ್ಟ್ನ ನ್ಯಾಯಮೂರ್ತಿ ಎಂ.ಎಂ. ಸುಂದರೇಶ್, ಗುಜರಾತ್ ಹೈಕೋರ್ಟ್ನ ಬೇಲಾ ಎಂ. ತ್ರಿವೇದಿ ಮತ್ತು ಹಿರಿಯ ವಕೀಲ ಹಾಗೂ ಮಾಜಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ ಇವರುಗಳು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯನ್ನಾಗಿಸುವ ಕೊಲಿಜಿಯಂ 9 ಮಂದಿ ನ್ಯಾಯಾಧೀಶರ ನೇಮಕಾತಿ ಕುರಿತಂತೆ ನೀಡಿದ್ದ ಶಿಫಾರಸ್ಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. ಈ ನೇಮಕಾತಿ ಆದೇಶಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದರು.












Click it and Unblock the Notifications