ತಮಿಳುನಾಡಲ್ಲಿ ಉರುಳಿ ಬಿದ್ದ ಬಸ್; 8 ಪ್ರವಾಸಿಗರು ಸಾವು
ಚೆನ್ನೈ, ಅಕ್ಟೋಬರ್ 01; ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ 55 ಪ್ರವಾಸಿಗರು ಇದ್ದ ಬಸ್ ಕಣಿವೆಗೆ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ 8 ಪ್ರವಾಸಿಗರು ಮೃತಪಟ್ಟಿದ್ದು, ಹಲವು ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಘೋಷಣೆ ಮಾಡಿದ್ದಾರೆ.
ನೀಲಗಿರಿ ಬೆಟ್ಟದ ವ್ಯಾಪ್ತಿಯಲ್ಲಿ ಬರುವ ಕೂನೂರು ಬಳಿಯ ಘಾಟ್ನಲ್ಲಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಕಣಿವೆಗೆ ಉರುಳಿ ಬಿದ್ದಿದೆ. ಪ್ರವಾಸಿ ಬಸ್ನಲ್ಲಿ 55 ಪ್ರಯಾಣಿಕರು ಇದ್ದರು. ಹೆಡ್ಪಿನ್ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಬಸ್ ಪಲ್ಟಿಯಾಗಿ ಕಣಿಗೆ ಉರುಳಿದೆ. ಹಗ್ಗವನ್ನು ಬಳಸಿ ಕಣಿವೆಯಲ್ಲಿ ಸಿಲುಕಿರುವ ಪ್ರವಾಸಿಗರನ್ನು ಮೇಲಕ್ಕೆ ಕರೆತರಲಾಗುತ್ತಿದೆ.
ಪೊಲೀಸ್ ವರಿಷ್ಠಾಧಿಕಾರಿ ಕೆ. ಪ್ರಭಾಕರ್ ಘಟನೆ ಬಗ್ಗೆ ಮಾಹಿತಿ ನೀಡಿದ್ದು, "ಪ್ರಾಥಮಿಕ ಮಾಹಿತಿಯಂತೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಣಿವೆಗೆ ಉರುಳಿದೆ ಎಂದು ಅಂದಾಜಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ" ಎಂದು ಹೇಳಿದ್ದಾರೆ.
ಪರಿಹಾರ ಘೋಷಣೆ ಮಾಡಿದ ಸಿಎಂ; ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ, ಸಾಮಾನ್ಯವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ನೀಲಗಿರಿ ಜಿಲ್ಲಾಡಳಿತ ಪ್ರವಾಸಿ ಬಸ್ ಅಪಘಾತದ ಬಗ್ಗೆ ಮಾಹಿತಿ ನೀಡಲು ಸಹಾಯವಾಣಿ ಸ್ಥಾಪನೆ ಮಾಡಿದೆ. ಜನರು 1077, 0423-2450034 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆಯಬಹುದಾಗಿದೆ ಎಂದು ಹೇಳಿದೆ.
ಅಪಘಾತದ ಬಗ್ಗೆ ನೀಲಗಿರಿ ಜಿಲ್ಲಾಧಿಕಾರಿ ಅರುಣ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. "ಬಸ್ನಲ್ಲಿ ಸುಮಾರು 60 ಜನರಿದ್ದರು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. 8 ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ಘೋಷಣೆ ಮಾಡಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಹೇಳಿದ್ದಾರೆ.
ಈ ರಸ್ತೆ ಅಪಘಾತದಲ್ಲಿ ಮೃತಪಟ್ಟವರಲ್ಲಿ ಮೂವರು ಮಹಿಳೆಯರು. ಐವರು ಪುರುಷರು ಎಂದು ಕೂನೂರು ಸರ್ಕಾರಿ ಆಸ್ಪತ್ರೆಯ ಜಂಟಿ ನಿರ್ದೇಶಕ ಪಳನಿ ಸ್ವಾಮಿ ಹೇಳಿದ್ದಾರೆ. ಸರ್ಕಾರ ಗಾಯಾಳುಗಳು ಚಿಕಿತ್ಸೆಗೆ ಅಗತ್ಯ ಸೂಚನೆಯನ್ನು ನೀಡಿದೆ ಎಂದು ತಿಳಿಸಿದ್ದಾರೆ.
ತಮಿಳುನಾಡು ರಾಜ್ಯಪಾಲ ಆರ್. ಎನ್. ರವಿ ಸಹ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟರ ಕುಟುಂಬಕ್ಕೆ ಸಾಂತ್ವನ ತಿಳಿಸುತ್ತೇನೆ. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ ಈ ಪ್ರವಾಸಿ ಬಸ್ ಊಟಿಯಿಂದ ಮೆಟ್ಟುಪಾಳ್ಯಂಗೆ ಸಂಚಾರ ನಡೆಸುತ್ತಿತ್ತು. ಘಟನೆಗೆ ಕಾರಣ ಏನು? ಎಂದು ಪೊಲೀಸರು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.












Click it and Unblock the Notifications