Heat Stroke- ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದುರಂತ: ಬಿಸಿಲಿನ ತಾಪಕ್ಕೆ 11 ಜನ ಬಲಿ, 24 ಜನ ಅಸ್ವಸ್ಥ
ಮುಂಬೈ ಏಪ್ರಿಲ್ 17: ಮಹಾರಾಷ್ಟ್ರದ ನವಿ ಮುಂಬೈನ ಖಾರ್ಘರ್ನಲ್ಲಿ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಸಮಾರಂಭದ ವೇಳೆ 11 ಮಂದಿ ಬಿಸಿಲ ತಾಪಕ್ಕೆ ಬಲಿಯಾಗಿದ್ದಾರೆ.
24 ಮಂದಿ ಚಿಕಿತ್ಸೆ ಪಡೆಯುತ್ತಿದ್ದು ಇವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಜೊತೆಗೆ ಆಸ್ಪತ್ರೆಗೆ ದಾಖಲಾದವರಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ.
ನವಿ ಮುಂಬೈನ ಬೃಹತ್ ಮೈದಾನದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸಾಮಾಜಿಕ ಕಾರ್ಯಕರ್ತರ ಅನುಯಾಯಿಗಳು ಆಗಮಿಸಿದ್ದರು. ಭಾನುವಾರ ಬೆಳಗ್ಗೆ 11.30ಕ್ಕೆ ಆರಂಭವಾದ ಪ್ರಶಸ್ತಿ ಪ್ರದಾನ ಸಮಾರಂಭ ಮಧ್ಯಾಹ್ನ 1ರವರೆಗೆ ನಡೆಯಿತು. ಈ ಮೆಗಾ ಈವೆಂಟ್ನಲ್ಲಿ 120 ಜನರು ಸೇರಿದ್ದರು. ಮಹಾರಾಷ್ಟ್ರದಲ್ಲಿ ಭಾನುವಾರ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಈ ವೇಳೆ ಸಮಾಜ ಸೇವಕ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ನೀಡಲಾಯಿತು. ಈ ಸಂದರ್ಭದಲ್ಲಿ ಜನರ ಆರೋಗ್ಯ ಹದಗೆಟ್ಟಿದೆ. ಶಾಖದ ಹೊಡೆತದಿಂದ ಎಲ್ಲರೂ ಏಕಾಏಕಿ ತೀವ್ರ ಅಸ್ವಸ್ಥರಾಗಿದ್ದಾರೆ. ತಕ್ಷಣ ಹೀಟ್ ಸ್ಟ್ರೋಕ್ ನಿಂದ ಬಳಲುತ್ತಿರುವವರನ್ನು ಖಾರ್ಘರ್ ನ ಟಾಟಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮಹಾರಾಷ್ಟ್ರ ಸರ್ಕಾರ ಸ್ಥಾಪಿಸಿದ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಗೃಹ ಸಚಿವ ಅಮಿತ್ ಶಾ ಪ್ರದಾನ ಮಾಡಿದರು. ಹೀಗಾಗಿ ಸ್ಥಳದಲ್ಲಿ ಅಧಿಕ ಸಂಖ್ಯೆಯಲ್ಲಿ ಜನ ನೆರೆದಿದ್ದರು. ಶಿಂಧೆ ಮತ್ತು ಫಡ್ನವಿಸ್ ಸಹ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು.
Maharashtra | At least seven people dead while 24 are under treatment after suffering from heatstroke during Maharashtra Bhushan Award ceremony in Navi Mumbai's Kharghar. Deceasesd's families to be given Rs 5 lakhs while we are ensuring proper treatment for those admitted: CM… pic.twitter.com/xDzFuGsIp3
— ANI (@ANI) April 16, 2023
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕೂಡ ಆಸ್ಪತ್ರೆಗೆ ತೆರಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. 'ಸುಮಾರು 50 ಜನರು ಶಾಖ-ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ದಾಖಲಾಗಿದ್ದರು. ಇವರಲ್ಲಿ ಹಲವರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಇನ್ನು ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಏಕನಾಥ್ ಶಿಂಧೆ, ನವಿ ಮುಂಬೈನ ಖಾರ್ಘರ್ನಲ್ಲಿ ನಡೆದ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲ ತಾಪದಿಂದ ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.
ಶಾಖ-ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿರುವವರ ಚಿಕಿತ್ಸೆಗಾಗಿ ಸರ್ಕಾರವು ಹಣವನ್ನು ನೀಡುತ್ತದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಟ್ವೀಟ್ ಮಾಡಿದ್ದಾರೆ.
"ಇಂದು ಬೆಳಿಗ್ಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದ ಕೆಲವು ಸದಸ್ಯರು ಶಾಖದ ಹೊಡೆತದಿಂದ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಸಂಗತಿಯಾಗಿದೆ... ಅವರ ಕುಟುಂಬಗಳ ದುಃಖವನ್ನು ನಾವು ಹಂಚಿಕೊಳ್ಳುತ್ತೇವೆ" ಎಂದು ಫಡ್ನವಿಸ್ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದ ಹಲವು ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಪಾದರಸ 40 ಡಿಗ್ರಿಗಿಂತ ಹೆಚ್ಚು ಕಂಡುಬಂದಿದೆ. ಈ ಪ್ರಮಾಣದ ತಾಪಮಾನವನ್ನು ಏಪ್ರಿಲ್ ಎರಡನೇ ವಾರದಲ್ಲಿ ಮಾತ್ರ ಗಮನಿಸಲಾಗಿದೆ. ಇದರಿಂದಾಗಿ ಆತಂಕಗಳು ವ್ಯಕ್ತವಾಗುತ್ತಿದ್ದು, ಬಿಸಿಗಾಳಿ ಹೆಚ್ಚಾಗಿದೆ. ಬಿಸಿಲಿನ ಝಳದಿಂದ ಜಾಗರೂಕರಾಗಿರಲು ಜನರಿಗೆ ಸೂಚಿಸಲಾಗಿದೆ. ಮುಂದಿನ ಐದು ದಿನಗಳಲ್ಲಿ ದೇಶದ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ 3-5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.












Click it and Unblock the Notifications