Breaking News: ಟ್ರಕ್ ಹರಿದು ಪ್ರತಿಭಟನಾ ಸ್ಥಳದಲ್ಲೇ 3 ರೈತ ಮಹಿಳೆಯರು ಸಾವು
ನವದೆಹಲಿ, ಅಕ್ಟೋಬರ್ 28: ಉತ್ತರ ಪ್ರದೇಶ ಲಖೀಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕಾರು ಹರಿಸಿದ ಘಟನೆ ಮಾಸುವ ಮೊದಲೇ ಅಂಥದ್ದೇ ಮತ್ತೊಂದು ಘಟನೆ ಗುರುವಾರ ಹರಿಯಾಣ-ದೆಹಲಿ ಗಡಿಯಲ್ಲಿ ವರದಿಯಾಗಿದೆ.
ಕೇಂದ್ರ ಸರ್ಕಾರದ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಆಟೋರಿಕ್ಷಾಕ್ಕಾಗಿ ಕಾದು ಕುಳಿತ ಮಹಿಳೆಯರ ಮೇಲೆ ಟ್ರಕ್ ಹರಿದುಕೊಂಡು ಹೋಗಿದೆ. ಡಿವೈಡರ್ ಮೇಲೆ ಕುಳಿತ ಮೂವರ ಮೇಲೆ ಟ್ರಕ್ ಹರಿದ ಪರಿಣಾಮ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳದಲ್ಲೇ ಟ್ರಕ್ ಅನ್ನು ಬಿಟ್ಟು ಚಾಲಕ ಓಡಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ರಕ್ ಅಪಘಾತ ಸಂಭವಿಸಿದ ಸ್ಥಳದಲ್ಲೇ ಇಬ್ಬರು ಮಹಿಳೆರು ಪ್ರಾಣ ಬಿಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡ ಒಬ್ಬ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆ ಮಹಿಳೆಯೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪಂಜಾಬ್ ಮೂಲದ ಮಹಿಳೆಯರು:
ಪ್ರಾಥಮಿಕ ವರದಿಗಳ ಪ್ರಕಾರ, ಟ್ರಕ್ ಅಪಘಾತದಲ್ಲಿ ಮೃತಪಟ್ಟಿರುವ ಮಹಿಳೆಯರು ಪಂಜಾಬ್ನ ಮಾನ್ಸಾ ಜಿಲ್ಲೆಗೆ ಸೇರಿದವರು ಎಂದು ತಿಳಿದು ಬಂದಿದೆ. ಕಳೆದ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಪ್ರತಿಭಟನಾಕಾರ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ಪಡೆ ವಾಹನ ಹರಿದು ಹೋಗಿತ್ತು. ಈ ಘಟನೆಯಲ್ಲಿ ನಾಲ್ವರು ರೈತರು ಒಬ್ಬ ಪತ್ರಕರ್ತ ಸೇರಿದಂತೆ ಒಟ್ಟು ಎಂಟು ಮಂದಿ ಪ್ರಾಣ ಬಿಟ್ಟಿದ್ದರು. ಇನ್ನು ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾರನ್ನು ಬಂಧಿಸಲಾಗಿದೆ.
ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟ:
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 2020ರ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ.