ಕೋಲ್ಕತ್ತಾದ ಸಂತ್ರಗಚಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಇಬ್ಬರು ಸಾವು
ಕೋಲ್ಕತ್ತಾ (ಪಶ್ಚಿಮ ಬಂಗಾಲ), ಅಕ್ಟೋಬರ್ 23: ಪಶ್ಚಿಮ ಬಂಗಾಲದ ಹೌರಾದಲ್ಲಿನ ಸಂತ್ರಗಚಿ ರೈಲು ನಿಲ್ದಾಣದಲ್ಲಿ ಮಂಗಳವಾರ ಸಂಜೆ ಕಾಲ್ತುಳಿತಕ್ಕೆ ಇಬ್ಬರು ಮೃತಪಟ್ಟು, ಹನ್ನೆರಡಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
"ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ರಾಜ್ಯ ಸರಕಾರದಿಂದ ಐದು ಲಕ್ಷ ರುಪಾಯಿ ನೀಡಲಾಗುವುದು. ಈ ಘಟನೆ ಬಗ್ಗೆ ತನಿಖೆ ನಡೆಸಲಾಗುವುದು" ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಸ್ಥಳೀಯ ತೃಣಮೂಲ ಕಾಂಗ್ರೆಸ್ ಶಾಸಕ ಜತು ಲಹಿರಿ ಮಾತನಾಡಿ, ಗಾಯಗೊಂಡವರಲ್ಲಿ ಇಬ್ಬರು ಮಕ್ಕಳು ಸಹ ಇದ್ದಾರೆ ಎಂದು ತಿಳಿಸಿದ್ದಾರೆ.

ಈ ಘಟನೆಯು ರಾತ್ರಿ 8 ಗಂಟೆ ಹೊತ್ತಿಗೆ ಸಂತ್ರಗಚಿ ರೈಲು ನಿಲ್ದಾಣದಲ್ಲಿ ಸಂಭವಿಸಿದೆ. ಈ ಸ್ಥಳವು ಹೌರಾದಿಂದ ನಾಲ್ಕು ಕಿಲೋಮೀಟರ್ ದೂರವಿದೆ.
ಎರಡು ರೈಲುಗಳು ಏಕಕಾಲದಲ್ಲಿ ನಿಲ್ದಾಣಕ್ಕೆ ಬರುತ್ತಿರುವುದಾಗಿ ಘೋಷಣೆ ಮಾಡಿದ್ದರಿಂದ ನೂಕಾಟವಾಗಿ, ಕಾಲ್ತುಳಿತ ಆಗಿದೆ.
ಪ್ರಯಾಣಿಕರ ಒತ್ತಡವನ್ನು ತಡೆದುಕೊಳ್ಳುವಷ್ಟು ರೈಲು ನಿಲ್ದಾಣದ ಸೇತುವೆಯು ದೊಡ್ಡದಾಗಿಲ್ಲ ಎಂದು ಮಮತಾ ಹೇಳಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಹೌರಾ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರೈಲು ನಿಲ್ದಾಣದಲ್ಲಿನ ಮೂಲ ಸೌಕರ್ಯ ವ್ಯವಸ್ಥೆ ಹಳೆಯದಾಗಿದ್ದು, ಅದನ್ನು ಮೇಲ್ದರ್ಜೆಗೆ ಏರಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.












Click it and Unblock the Notifications