ಪುದುಚೆರಿಯಲ್ಲಿ ರಾಷ್ಟ್ರಪತಿ ಆಳ್ವಿಕೆ: ಕೇಂದ್ರ ಸಂಪುಟ ಅನುಮೋದನೆ
ನವದೆಹಲಿ, ಫೆಬ್ರವರಿ 24: ಪುದುಚೆರಿಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸಂಪುಟ ಅಂಗೀಕಾರ ನೀಡಿದೆ. ಪುದುಚೆರಿಯಲ್ಲಿ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪುದುಚೆರಿಯಲ್ಲಿ ವಿಧಾನಸಭೆ ಚುನಾವಣೆ ಸನ್ನಿಹಿತದಲ್ಲಿರುವಾಗಲೇ ಶಾಸಕರ ರಾಜೀನಾಮೆಯಿಂದ ಬಹುಮತ ಕಳೆದುಕೊಂಡ ಕಾಂಗ್ರೆಸ್ ಸರ್ಕಾರ ಪತನಗೊಂಡಿತ್ತು.
ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಸರ್ಕಾರ ರಚನೆಗೆ ಮುಂದಾಗಿರಲಿಲ್ಲ. ಹೀಗಾಗಿ ರಾಷ್ಟ್ರೊತಿ ಆಳ್ವಿಕೆ ಜಾರಿಗೆ ತರುವುದು ಸೂಕ್ತ ಎಂದು ಲೆಫ್ಟಿನೆಂಟ್ ಗವರ್ನರ್ ತಮಿಳ್ಸಾಯಿ ಸೌಂರರಾಜನ್ ಶಿಫಾರಸು ಮಾಡಿದ್ದರು.
ಪುದುಚೇರಿ ಚುನಾವಣೆ ಹೊಸ್ತಿಲಿನಲ್ಲೇ ಸರ್ಕಾರ ರಚಿಸಲ್ಲ ಎಂದ ಎಐಎಡಿಎಂಕೆ
'ಪುದುಚೆರಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ಸಲ್ಲಿಸಿದ್ದಾರೆ. ಸರ್ಕಾರ ರಚಿಸಲು ಯಾರೂ ಮುಂದೆ ಬಂದಿಲ್ಲ. ಹೀಗಾಗಿ 14ನೇ ವಿಧಾನಸಭೆಯನ್ನು ವಿಸರ್ಜನೆ ಮಾಡುವಂತೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸು ಮಾಡಿದ್ದರು. ಈಗ ನಮ್ಮ ಅಂಗೀಕಾರವನ್ನು ರಾಷ್ಟ್ರಪತಿಯವರಿಗೆ ಕಳುಹಿಸಲಾಗುವುದು. ಅವರ ಅನುಮೋದನೆ ಬಳಿಕ ವಿಧಾನಸಭೆ ವಿಸರ್ಜನೆಯಾಗಲಿದೆ' ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಸಂಪುಟ ಸಭೆ ಬಳಿಕ ತಿಳಿಸಿದರು.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಪುದುಚೆರಿಗೆ ಗುರುವಾರ ಭೇಟಿ ನೀಡಲಿದ್ದು, ಕಾಂಗ್ರೆಸ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ನಾರಾಯಣಸ್ವಾಮಿ ಸರ್ಕಾರದ ಪತನಕ್ಕೆ ಕೇಂದ್ರ ಸರ್ಕಾರವೇ ಕಾರಣ. ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.