ಕೇಂದ್ರ ಸಚಿವ ಸಂಪುಟ ಪುನರ್ ರಚನೆ: ರಾಘವ್ ಚಡ್ಡಾ ಇನ್ - ಧರ್ಮೇಂದ್ರ ಪ್ರಧಾನ್ ಔಟ್, ಸಂಪೂರ್ಣ ವಿವರ ಇಲ್ಲಿದೆ

ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಕರ್ನಾಟಕದಲ್ಲಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ತಿಂಗಳುಗಳೇ ಕಳೆಯುತ್ತಿದ್ದರೂ, ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. ಸಚಿವ ಸಂಪುಟ ವಿಸ್ತರಣೆಯ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಇದರ ನಡುವೆ ಕೇಂದ್ರ ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ಭರ್ಜರಿ ತಯಾರಿ ನಡೆದಿದೆ. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ನಂತರ, ಕೇಂದ್ರ ಸಚಿವ ಸಂಪುಟದಲ್ಲಿ ಪುನರ್ ರಚನೆ ಚರ್ಚೆ ಹೆಚ್ಚಾಗಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಕೇಂದ್ರ ಸಚಿವರಾಗಿದ್ದ ಜಾರ್ಜ್ ಕುರಿಯನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳು ಅಂಗೀಕರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಇನ್ನೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲವಾದರೂ, ಜುಲೈ ಮೂರನೇ ವಾರದಲ್ಲಿ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗುವ ಮೊದಲು ಬದಲಾವಣೆಗಳ ಸಾಧ್ಯತೆಯ ಬಗ್ಗೆ ರಾಜಕೀಯ ಚರ್ಚೆಗಳು ಹೆಚ್ಚಾಗಿದೆ. ಕುರಿಯನ್ ಅವರು ರಾಜೀನಾಮೆ ನೀಡಿರುವುದರಿಂದ ಒಂದು ಸಚಿವ ಸ್ಥಾನ ಖಾಲಿ ಇದೆ. ಅಲ್ಪಸಂಖ್ಯಾತ ವ್ಯವಹಾರಗಳ ಜೊತೆಗೆ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆ ರಾಜ್ಯ ಸಚಿವರಾಗಿದ್ದ ಕೇರಳದ ಭಾರತೀಯ ಜನತಾ ಪಕ್ಷದ ನಾಯಕ, ರಾಜ್ಯಸಭೆಯ ಅವಧಿ ಮುಗಿದ ನಂತರ ರಾಜೀನಾಮೆ ನೀಡಿದರು.

Union Cabinet

ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ರವನೀತ್ ಸಿಂಗ್ ಅವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಂವಿಧಾನದ ಪ್ರಕಾರ, ಅವರು ಸಂಸತ್ತಿನ ಯಾವುದೇ ಸದನದ ಸದಸ್ಯರಾಗದೇ ಇದ್ದರೂ ಆರು ತಿಂಗಳವರೆಗೆ ಕೇಂದ್ರ ಸಚಿವರಾಗಿ ಮುಂದುವರಿಯಬಹುದು. ಪಕ್ಷದ ಮೂಲಗಳ ಪ್ರಕಾರ, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯ ಮೇಲೆ ಸಂಪೂರ್ಣ ಗಮನ ಹರಿಸುವಂತೆ ಬಿಜೆಪಿ ಹೈಕಮಾಂಡ್ ನಾಯಕರು ರವನೀತ್ ಸಿಂಗ್ ಅವರಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಕಾರ್ಪೊರೇಟ್ ವ್ಯವಹಾರಗಳು ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವ ಹರ್ಷ್ ಮಲ್ಹೋತ್ರಾ ಅವರನ್ನು ಮೇ 28 ರಂದು ದೆಹಲಿ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಡಿಸೆಂಬರ್ 2025 ರಿಂದ ಪಕ್ಷದ ಉತ್ತರ ಪ್ರದೇಶ ಘಟಕದ ನೇತೃತ್ವದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಬಿಜೆಪಿಯು "ಒಬ್ಬ ವ್ಯಕ್ತಿ, ಒಂದು ಹುದ್ದೆ" ತತ್ವವನ್ನು ಅನುಸರಿಸುತ್ತದೆ. ಆದರೆ ಎರಡು ಹುದ್ದೆಯಲ್ಲಿ ಇರುವಾಗ ಒಂದನ್ನು ತ್ಯಜಿಸಲು ಯಾವುದೇ ನಿಗದಿತ ಗಡುವು ಇಲ್ಲ. ಆ ಸಂಪ್ರದಾಯಕ್ಕೆ ಅನುಗುಣವಾಗಿ, ಬಿಜೆಪಿಯ ಮಾಜಿ ಅಧ್ಯಕ್ಷರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರು ಕೇಂದ್ರ ಸಚಿವ ಸಂಪುಟಕ್ಕೆ ಸೇರಿದ ನಂತರ ಅಥವಾ ತಮ್ಮ ಅವಧಿಯನ್ನು ಪೂರ್ಣಗೊಳಿಸಿದ ನಂತರ ತಮ್ಮ ಹುದ್ದೆಗಳನ್ನು ತ್ಯಜಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಂತರ ನಿತಿನ್ ನಬಿನ್ ಕೂಡ ಬಿಹಾರ ಸಚಿವ ಸಂಪುಟದಿಂದ ಹೊರ ಬಂದಿದ್ದರು. ಮಲ್ಹೋತ್ರಾ ಮತ್ತು ಚೌಧರಿ ಅವರು ಸಹ ಇದೇ ಮಾರ್ಗವನ್ನು ಅನುಸರಿಸುವ ಸಾಧ್ಯತೆ ಇದೆ.

ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ

ಮುಂದಿನ ವರ್ಷ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ರಾಜ್ಯಗಳ ರಾಜಕೀಯ ನಾಯಕರನ್ನು ಗಮನದಲ್ಲಿ ಇರಿಸಿಕೊಂಡು ಅಥವಾ ರಾಜಕೀಯ ಸನ್ನಿವೇಶಕ್ಕೆ ಅನುಗುಣವಾಗಿ ಕೆಲವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆಯೂ ಇದೆ. ಮುಂದಿನ ವರ್ಷ ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ರಾಜ್ಯದ ಹೆಚ್ಚಿನ ಪ್ರತಿನಿಧಿಗಳು ಮೋದಿ ಸಚಿವಾಲಯದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

ಏತನ್ಮಧ್ಯೆ, ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಬಲವಾದ ಗೆಲುವು ರಾಜ್ಯಕ್ಕೆ ಸಚಿವಾಲಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕೇ ಎಂಬ ಬಗ್ಗೆ ಪಕ್ಷದೊಳಗೆ ಊಹಾಪೋಹಗಳನ್ನು ಹುಟ್ಟುಹಾಕಿದೆ. ಇಪ್ಪತ್ತು ಬಂಡಾಯ ತೃಣಮೂಲ ಕಾಂಗ್ರೆಸ್ ಸಂಸದರು ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾದೊಂದಿಗೆ ವಿಲೀನಗೊಳ್ಳುವುದಾಗಿ ಘೋಷಿಸಿದ್ದಾರೆ ಮತ್ತು ಆಡಳಿತಾರೂಢ ಬಿಜೆಪಿ (ಎನ್‌ಡಿಎ ಮೈತ್ರಿಗೆ) ಬೆಂಬಲ ಘೋಷಿಸಿದ್ದಾರೆ. ಅವರಲ್ಲಿ ಕೆಲವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.

ಯಾರಿಗೆ ಸಿಗಲಿದೆ ಸಚಿವ ಸ್ಥಾನ ?

ಈ ವರ್ಷದ ಆರಂಭದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಆಮ್ ಆದ್ಮಿ ಪಕ್ಷದ ಮಾಜಿ ರಾಜ್ಯಸಭಾ ಸದಸ್ಯರಾದ ರಾಘವ್ ಚಡ್ಡಾ ಮತ್ತು ಅಶೋಕ್ ಮಿತ್ತಲ್ ಅವರಿಗೆ ಸಚಿವ ಸಂಪುಟ ಸಭೆಯಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ಪಂಜಾಬ್‌ನ ಹಿರಿಯ ಬಿಜೆಪಿ ಸಂಘಟನಾ ನಾಯಕ ತರುಣ್ ಚುಗ್ ಅವರ ಹೆಸರೂ ಸಹ ಕೇಳಿ ಬಂದಿದೆ.

ಉದ್ಧವ್ ಠಾಕ್ರೆ ಬಣದ ಆರು ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆಯಾದ ನಂತರ ಶಿವಸೇನೆ (ಏಕನಾಥ್ ಶಿಂಧೆ ಬಣ) ತನ್ನ ಚೌಕಾಸಿ ಆಯ್ಕೆಯನ್ನು ಬಲಪಡಿಸಿಕೊಂಡಿದೆ. ಮಹಾರಾಷ್ಟ್ರದ ಶ್ರೀಕಾಂತ್ ಶಿಂಧೆ ಅವರ ಹೆಸರು ಸಂಭಾವ್ಯ ಪಟ್ಟಿಯಲ್ಲಿ ಇದೆ. ಶ್ರೀಕಾಂತ್ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಮಗ.

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೀಟ್-ಯುಜಿ ಪತ್ರಿಕೆ ಸೋರಿಕೆ ವಿವಾದ ಮತ್ತು ಸಿಬಿಎಸ್‌ಇ ಆನ್-ಸ್ಕ್ರೀನ್ ಅಂಕಪಟ್ಟಿ ವಿವಾದದ ಬಗ್ಗೆ ತೀವ್ರ ಟೀಕೆ ಎದುರಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ ಕೂಡ ಅವರ ರಾಜೀನಾಮೆಗೆ ಒತ್ತಾಯಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶಿಕ್ಷಣ ಸಚಿವಾಲಯಕ್ಕೆ ವರ್ಗಾಯಿಸಬಹುದು ಮತ್ತು ಪ್ರಸ್ತುತ ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ-2 ಆಗಿರುವ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಹಣಕಾಸು ಸಚಿವರನ್ನಾಗಿ ಸೇರಿಸಬಹುದು ಎಂದೂ ಹೇಳಲಾಗಿದೆ.

ಹರ್ದೀಪ್ ಸಿಂಗ್ ಪುರಿ ಮತ್ತು ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಇತರ ಹಿರಿಯ ಸಚಿವರು ಸಹ ಬದಲಾಗುವ ಸಾಧ್ಯತೆ ಇದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿರುವ ಪುರಿ ಅವರ ಉತ್ತರ ಪ್ರದೇಶದ ರಾಜ್ಯಸಭಾ ಅವಧಿ ನವೆಂಬರ್‌ನಲ್ಲಿ ಕೊನೆಗೊಳ್ಳುತ್ತದೆ. ಖಟ್ಟರ್ ಅವರು ವಸತಿ ಮತ್ತು ನಗರ ವ್ಯವಹಾರಗಳ ಜೊತೆಗೆ ವಿದ್ಯುತ್ ಖಾತೆಗಳನ್ನು ಹೊಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+