ಕೃಷಿ ಕಾನೂನುಗಳ ರದ್ದತಿಗೆ ನಾಳೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ನವದೆಹಲಿ, ನವೆಂಬರ್ 23: ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಭರವಸೆಯನ್ನು ತ್ವರಿತವಾಗಿ ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದು ಕೇಂದ್ರ ಸಚಿವ ಸಂಪುಟವು ರದ್ದತಿಗಾಗಿ ಮಸೂದೆಯನ್ನು ಕೈಗೆತ್ತಿಕೊಳ್ಳಲು ಸಿದ್ಧವಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ನವದೆಹಲಿಯ ಪ್ರಧಾನಿಯವರ ಲೋಕ ಕಲ್ಯಾಣ್ ಮಾರ್ಗ್ ನಿವಾಸದಲ್ಲಿ ಬುಧವಾರ ಸಭೆ ಸೇರಲಿದೆ. ಮೂಲಗಳು ಪ್ರಕಾರ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂದಕ್ಕೆ ತರಲು ಕೇವಲ ಒಂದು ಸಮಗ್ರ "ರದ್ದತಿ ಮಸೂದೆ" ತರಬಹುದು ಎಂದು ತಿಳಿಸಿವೆ. ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಜೊತೆ ಸಮಾಲೋಚನೆ ನಡೆಸಿದ ನಂತರ ಕೇಂದ್ರ ಕೃಷಿ ಸಚಿವಾಲಯವು ಈ ಮಸೂದೆಯನ್ನು ಅಂತಿಮಗೊಳಿಸಿದೆ ಎಂದು ಹೇಳಲಾಗಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಮೊದಲು ಲೋಕಸಭೆಯಲ್ಲಿ ರದ್ದತಿ ಮಸೂದೆಯನ್ನು ಮಂಡಿಸಬಹುದು ಎಂದು ಮೂಲಗಳು ತಿಳಿಸಿವೆ. ರದ್ದತಿ ಮಸೂದೆಯು ಕಳೆದ ವರ್ಷ ಕಾನೂನಾಗಿ ಅಂಗೀಕರಿಸಲ್ಪಟ್ಟ ಮೂರು ಮಸೂದೆಗಳನ್ನು ಹಿಂತೆಗೆದುಕೊಳ್ಳುವ ಗುರಿಯನ್ನು ಹೊಂದಿದೆ.
ವಿವಾದಿತ ಕೃಷಿ ಕಾಯ್ದೆಗಳಷ್ಟೇ ರೈತರ ಸಮಸ್ಯೆ ಆಗಿರುವುದಿಲ್ಲ. ಇವುಗಳನ್ನು ರದ್ದುಗೊಳಿಸುವುದರ ಜೊತಗೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕು. ರೈತರೊಂದಿಗೆ ಚರ್ಚಿಸುವುದಕ್ಕೆ ಕೇಂದ್ರ ಸರ್ಕಾರದಿಂದ ನಿಯೋಗವನ್ನು ಕಳುಹಿಸಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿದೆ.

ಜೊತೆಗೆ ಕೇಂದ್ರ ಸರ್ಕಾರಕ್ಕೆ ರೈತರಿಂದ ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಮೂರು ಕೃಷಿ ಕಾನೂನುಗಳನ್ನು ಶೀಘ್ರವಾಗಿ ಹಿಂಪಡೆಯಬೇಕು. ಸಮಗ್ರ ಉತ್ಪಾದನಾ ವೆಚ್ಚದ ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗಧಿ ಮಾಡಬೇಕು. ವಿದ್ಯುತ್ ಬಿಲ್ ರದ್ದಾಗಬೇಕು ಮತ್ತು ವಾಯು ಮಾಲಿನ್ಯದ ಮೇಲೆ ರೈತರ ವಿರುದ್ಧ ಇರುವ ಪ್ರಕರಣಗಳನ್ನು ಹಿಂಪಡೆಯಬೇಕು. ಮಾತ್ರವಲ್ಲದೆ ಲಖಿಂಪುರ ಖೇರಿ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಮತ್ತು ಸೆಕ್ಷನ್ 120 ಬಿ ಆರೋಪಿ ಅಜಯ್ ಮಿಶ್ರಾ ಟೆನಿ ಇನ್ನೂ ಸ್ವತಂತ್ರವಾಗಿ ತಿರುಗಾಡುತ್ತಿದ್ದಾರೆ. ನಿಮ್ಮ ಸಂಪುಟದಲ್ಲೇ ಸಚಿವರಾಗಿಯೂ ಉಳಿದಿದ್ದಾರೆ. ಅವರು ನಿಮ್ಮೊಂದಿಗೆ ಮತ್ತು ಇತರ ಹಿರಿಯ ಸಚಿವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ. ಅವರನ್ನು ವಜಾಗೊಳಿಸಬೇಕು ಮತ್ತು ಬಂಧಿಸಬೇಕು ಎಂದು ತಿಳಿಸಿದ್ದಾರೆ.
ಇನ್ನೂ ದೆಹಲಿ, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಈ ಚಳವಳಿಯ ಸಂದರ್ಭದಲ್ಲಿ (ಜೂನ್ 2020 ರಿಂದ ಇಲ್ಲಿಯವರೆಗೆ) ನೂರಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ಪ್ರತಿಭಟನಾಕಾರ ರೈತರ ವಿರುದ್ಧ ತಕ್ಷಣದ ಕ್ರಮವನ್ನು ಹಿಂಪಡೆಯುವುದು. ಈ ಕೃಷಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಇದುವರೆಗೆ ಸುಮಾರು 700 ರೈತರು ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಬೆಂಬಲ ನೀಡಬೇಕು. ಹುತಾತ್ಮ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಲು ಸಿಂಘು ಗಡಿಯಲ್ಲಿ ಭೂಮಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಯಲ್ಲಿ ಪಂಜಾಬ್, ಪಶ್ಚಿಮ ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶುಕ್ರವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ದೇಶದ ಕ್ಷಮೆಯಾಚಿಸಿದರು, ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರು.

ಆದರೆ ರೈತರು ಇಲ್ಲಿಗೆ ಹೋರಾಟವನ್ನು ಕೈ ಬಿಡುವುದಿಲ್ಲ. ಕೃಷಿ ಕಾನೂನು ರದ್ದತಿ ಬಗ್ಗೆ ಸಂಸತ್ತಿನಲ್ಲಿ ಮಂಡಿಸಬೇಕು. ಅಲ್ಲಿವರೆಗೂ ತಾವು ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ. ಇನ್ನೂ ಮೋದಿಯವರ ವಿವಾದಾತ್ಮಕ ಕಾನೂನುಗಳ ರದ್ದತಿಯನ್ನು ವಿಪಕ್ಷಗಳು ಸಾ್ವಾಗತಿಸಿದ್ದು ಇದು ಮುಂಬರುವ ಚುನಾವಣಾ ಗಿಮಿಕ್ ಎಂದು ಕರೆದಿದ್ದಾರೆ.












Click it and Unblock the Notifications