ಪ್ರತಿ ವರ್ಷ 2 ಕೋಟಿ ಉದ್ಯೋಗ ಭರವಸೆ ಏನಾಯ್ತು: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ
ನವದೆಹಲಿ, ಫೆಬ್ರವರಿ 2: ರಾಷ್ಟ್ರಪತಿಗಳ ಬಜೆಟ್ ಅಧಿವೇಶನ ಭಾಷಣದ ಮೇಲೆ ರಾಜ್ಯಸಭೆಯಲ್ಲಿ ಮಾತನಾಡಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ದೇಶದಲ್ಲಿ ವ್ಯಾಪಕ ನಿರುದ್ಯೋಗ ಬಿಕ್ಕಟ್ಟು ಉಂಟಾಗಿದೆ ಎಂದು ಹೇಳಿದ ಮಲ್ಲಿಕಾರ್ಜುನ ಖರ್ಗೆ, ಪ್ರತಿ ವರ್ಷ 2 ಕೋಟಿ ಉದ್ಯೋಗಗಳನ್ನು ಒದಗಿಸುವ ಭರವಸೆಯನ್ನು ಈಡೇರಿಸಲು ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ನೀವು ಇಷ್ಟೊತ್ತಿಗಾಗಲೇ ದೇಶದಲ್ಲಿ 15 ಕೋಟಿ ಉದ್ಯೋಗಗಳನ್ನು ಒದಗಿಸಬೇಕಿತ್ತು. ಆದರೆ ನೀವು ನಿಜವಾಗಿಯೂ ಎಷ್ಟು ಉದ್ಯೋಗಗಳನ್ನು ಒದಗಿಸಿದ್ದೀರಿ? ಈ ವರ್ಷದ ಬಜೆಟ್ ಮುಂದಿನ 5 ವರ್ಷಗಳಲ್ಲಿ ಕೇವಲ 60 ಲಕ್ಷ ಉದ್ಯೋಗಗಳನ್ನು ನೀಡುತ್ತದೆ ಎಂದು ಹೇಳಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಲು, ಉದ್ಯೋಗಗಳನ್ನು ಒದಗಿಸಲು ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿಯನ್ನು ತಲುಪಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ.
ಅಖಿಲ ಭಾರತ ಸೇವಾ ಕೇಡರ್ ನಿಯಮಗಳಲ್ಲಿನ ಪ್ರಸ್ತಾವಿತ ಬದಲಾವಣೆಗಳು ಮತ್ತು ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ರಾಜ್ಯಗಳಲ್ಲಿ ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಮೀ ವಿಸ್ತರಿಸುವ ನಿರ್ಧಾರವನ್ನು ಅವರು ವಿರೋಧಿಸಿದ್ದು, ಕೇಂದ್ರವು ರಾಜ್ಯಗಳ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ. ಇದು ದೇಶದ ಫೆಡರಲ್ ರಚನೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ಆರೋಪಿಸಿದರು.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಬಗ್ಗೆ ಮಾತನಾಡಿದ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಸೇರಿದಂತೆ ವಿವಿಧ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರದಲ್ಲಿ ಒಂಬತ್ತು ಲಕ್ಷ ಹುದ್ದೆಗಳು ಖಾಲಿ ಇವೆ. ರೈಲ್ವೆಯಲ್ಲಿ ಶೇ.15, ರಕ್ಷಣೆಯಲ್ಲಿ ಶೇ.40 ಮತ್ತು ಗೃಹ ವ್ಯವಹಾರಗಳಲ್ಲಿ ಶೇ.12 ಹುದ್ದೆಗಳು ಖಾಲಿ ಇವೆ. ಇಂದು ನಗರ ಪ್ರದೇಶಗಳಲ್ಲಿ ನಿರುದ್ಯೋಗ ದರ ಶೇ.9 ಮತ್ತು ಗ್ರಾಮೀಣ ಪ್ರದೇಶದಲ್ಲಿ ಶೇ 7.2 ಆಗಿದೆ ಎಂದು ಖರ್ಗೆ ಹೇಳಿದ್ದಾರೆ.
ಒಂದು ಗಂಟೆಗೂ ಹೆಚ್ಚು ಕಾಲ ಮೇಲ್ಮನೆ (ರಾಜ್ಯಸಭೆ)ಯಲ್ಲಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ದೈನಂದಿನ ಆಹಾರ ಪದಾರ್ಥಗಳಂತಹ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ತೃಣಮೂಲ ಕಾಂಗ್ರೆಸ್ ಸಂಸದ ಸುಖೇಂದು ಶೇಖರ್ ರೇ ಅವರು ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು "ಫತ್ವಾ" ಹೊರಡಿಸಿದೆ, ಇದು ನಿರಂಕುಶ ಮತ್ತು ರಾಜ್ಯಗಳ ಕಾರ್ಯಾಂಗದ ಅಧಿಕಾರವನ್ನು ಕೇಂದ್ರೀಕರಿಸುವ ಮುಸುಕಿನ ಪ್ರಯತ್ನವಾಗಿದೆ. ಈ ನಿರ್ಧಾರವನ್ನು ಒಂಬತ್ತು ಮುಖ್ಯಮಂತ್ರಿಗಳು, 100 ನಿವೃತ್ತ IAS, IFS ಅಧಿಕಾರಿಗಳು ವಿರೋಧಿಸಿದ್ದಾರೆ ಎಂದಿದ್ದಾರೆ.
"ಗೃಹ ಸಚಿವಾಲಯವು ಇತ್ತೀಚೆಗೆ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ರಾಜ್ಯಗಳಲ್ಲಿ ಸಂಬಂಧಿಸಿದ ರಾಜ್ಯಗಳೊಂದಿಗೆ ಯಾವುದೇ ಚರ್ಚೆ ನಡೆಸದೆ ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 15 ಕಿಲೋಮೀಟರ್ಗಳಿಂದ 50 ಕಿಲೋಮೀಟರ್ಗಳಿಗೆ ವಿಸ್ತರಿಸಿದೆ. ಕೇಂದ್ರ ಸರ್ಕಾರದ ಈ ಏಕಪಕ್ಷೀಯ ನಿರ್ಧಾರವು ಅಂತರರಾಷ್ಟ್ರೀಯ ಗಡಿಗಳನ್ನು ಹೊಂದಿರುವ ಚುನಾಯಿತ ರಾಜ್ಯ ಸರ್ಕಾರಗಳ ಮೇಲೆ ದಬ್ಬಾಳಿಕೆ ಮಾಡುವ ಪ್ರಯತ್ನವಾಗಿದೆ ಎಂದು ರೇ ಆರೋಪಿಸಿದ್ದಾರೆ.
Recommended Video