ಗೌರಿ ಲಂಕೇಶ್ ಮಾದರಿಯಲ್ಲಿ ಉತ್ತರ ಪ್ರದೇಶದಲ್ಲಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ
ಬೆಂಗಳೂರು, ನವೆಂಬರ್ 30: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾದರಿಯಲ್ಲೇ ಉತ್ತರ ಪ್ರದೇಶದಲ್ಲಿ ಪತ್ರಕರ್ತರೊಬ್ಬರ ಬರ್ಬರ ಹತ್ಯೆ ನಡೆದಿದೆ.
ಕಾನ್ಪುರದಲ್ಲಿ ಬಿಲ್ಹೌರ್ ನಲ್ಲಿ ಪತ್ರಕರ್ತ ನವೀನ್ ಶ್ರೀವಾಸ್ತವ ಎಂಬವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬೈಕಿನಲ್ಲಿ ಬಂದ 3-4 ಜನರು ಅಪರಿಚಿತರು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ.

"ತಮ್ಮ ಬಟ್ಟೆ ಅಂಗಡಿಯಲ್ಲಿ ನವೀನ್ ಶ್ರೀವಾಸ್ತವ್ ಕುಳಿತುಕೊಂಡಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಆಗಂತುಕರು ಅವರತ್ತ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ," ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಕ್ಷಣ ನವೀನ್ ಶ್ರೀವಾಸ್ತವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಮಾರಣಾಂತಿಕ ಗಾಯದಿಂದ ಅವರು ಅಸುನೀಗಿದ್ದಾರೆ.
ತನಿಖೆಗೆ ಸೂಚನೆ
ಈಗಾಗಲೇ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಸ್ಥಳೀಯ ಪೊಲೀಸರ ತಂಡಗಳನ್ನು ರಚಿಸಿ ತನಿಖೆ ನಡೆಸಲು ಸೂಚಿಸಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಗಮನ ಹರಿಸಿ ತಕ್ಷಣ ತನಿಖೆಯ ಮೇಲುಸ್ತುವಾರಿ ನೋಡಿಕೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ.
ಗೌರಿ ಮಾದರಿಯಲ್ಲಿ ಹತ್ಯೆ
ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ರನ್ನು ಬೆಂಗಳೂರಿನಲ್ಲಿ ಹತ್ಯೆ ಮಾಡಲಾಗಿತ್ತು. ರಾಜರಾಜೇಶ್ವರಿ ನಗರದಲ್ಲಿರುವ ಮನೆಯ ಮುಂದೆ ನಿಂತಿದ್ದ ಗೌರಿ ಲಂಕೇಶ್ ಅವರ ಮೇಲೆ ರಾತ್ರಿ ಸುಮಾರು 8.30 ರ ವೇಳೆಗೆ ಅಪರಿಚಿತರು ಗುಂಡು ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದರು.












Click it and Unblock the Notifications