ಉತ್ತರಾಖಂಡ ಬಿಜೆಪಿ ಬಿಕ್ಕಟ್ಟು; ಶನಿವಾರ ಮಹತ್ವದ ಸಭೆ
ಡೆಹರಾಡೂನ್, ಜುಲೈ 02; ಉತ್ತರಾಖಂಡ ಬಿಜೆಪಿಯಲ್ಲಿ ಹಲವು ಚಟುವಟಿಕೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಬದಲಾವಣೆ ಸುದ್ದಿಯೂ ಹಬ್ಬಿದ್ದು, ಶನಿವಾರ ಮಹತ್ವದ ಸಭೆಯನ್ನು ಸಹ ಕರೆಯಲಾಗಿದೆ.
ಸಂಸದರೂ ಆಗಿರುವ ಮುಖ್ಯಮಂತ್ರಿ ತೀರ್ಥಸಿಂಗ್ ರಾವತ್ ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿ ಮಾಡಿದರು. ರಾವತ್ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕಾದರೆ ಸೆಪ್ಟೆಂಬರ್ 10ರೊಳಗೆ ಶಾಸಕರಾಗಿ ಆಯ್ಕೆಯಾಗಬೇಕು.
ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಆದರೆ ಕೋವಿಡ್ ಕಾರಣದಿಂದಾಗಿ ಚುನಾವಣೆ ವಿಳಂಬವಾಗಿದೆ. ತೀರ್ಥಸಿಂಗ್ ರಾವತ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

ಉಪ ಚುನಾವಣೆ ವಿಳಂಬ ಆಗುವುದರಿಂದ ನಾಯಕತ್ವ ಬದಲಾವಣೆ ಮಾಡುವುದು ಅನಿವಾರ್ಯವಾಗಿದೆ. ಇದರಿಂದಾಗಿ ರಾಜ್ಯ ಬಿಜೆಪಿಯಲ್ಲಿ ಬಿಕ್ಕಟ್ಟು ಉಂಟಾಗಿದೆ. ಉಪ ಚುನಾವಣೆ ನಡೆಯದಿದ್ದರೆ ನಾಯಕತ್ವ ಬದಲಾವಣೆ ಮಾಡುವುದು ಬಿಜೆಪಿಗೆ ಅನಿವಾರ್ಯವಾಗಿದೆ.
ಕೇವಲ ನಾಲ್ಕು ತಿಂಗಳ ಹಿಂದೆ ತೀರ್ಥಸಿಂಗ್ ರಾವತ್ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಉತ್ತರಾಖಂಡ ವಿಧಾನಸಭೆ ಅವಧಿ ಮುಂದಿನ ವರ್ಷದ ಮಾರ್ಚ್ ತನಕ ಇದೆ. ಚುನಾವಣೆಯನ್ನು ಮುಂದಿಟ್ಟುಕೊಂಡು ನಾಯಕತ್ವ ಬದಲಾವಣೆ ಮಾಡುವ ಅನಿವಾರ್ಯತೆ ಬಿಜೆಪಿಗೆ ಎದುರಾಗಿದೆ.
ಮಹತ್ವದ ಸಭೆ; ಶನಿವಾರ ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಮದನ್ ಕೌಶಿಕ್ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಬೇರೆ ನಾಯಕನನ್ನು ಆಯ್ಕೆ ಮಾಡಲಾಗುತ್ತದೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಉತ್ತರಾಖಂಡ ರಾಜ್ಯದ ಬಿಜೆಪಿ ವೀಕ್ಷಕರಾಗಿದ್ದಾರೆ. ಶನಿವಾರ ರಾಜ್ಯಕ್ಕೆ ಅವರು ಆಗಮಿಸುತ್ತಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಗಂಗೋತ್ರಿ ಮತ್ತು ಹಲ್ದವಾನಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಆದರೆ ಕೋವಿಡ್ ಪರಿಸ್ಥಿತಿಯಲ್ಲಿ 6 ತಿಂಗಳು ಯಾವುದೇ ಚುನಾವಣೆ ನಡೆಸುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿತ್ತು. ಇದರಿಂದಾಗಿ ಮುಖ್ಯಮಂತ್ರಿಗಳಿಗೆ ಶಾಸಕರಾಗಿ ಆಯ್ಕೆಯಾಗಲು ಯಾವುದೇ ಅವಕಾಶವಿಲ್ಲ.












Click it and Unblock the Notifications