ಉತ್ತರಾಖಂಡ್ ತಪೋವನದಲ್ಲಿ ರಕ್ಷಣಾ ಕಾರ್ಯಕ್ಕೆ 'ಬಂಡೆ' ಅಡ್ಡಿ
ಡೆಹ್ರಾಡೂನ್, ಫೆಬ್ರವರಿ.10: ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮಪಾತದಲ್ಲಿ ಸಿಲುಕಿರುವ ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದೆ. ಇದುವರೆಗೂ 32 ಮಂದಿ ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ 197 ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕೃತವಾಗಿ ತಿಳಿದು ಬಂದಿದೆ.
ಹಿಮಪಾತದಿಂದಾಗಿ ಅಲಕ್ ನಂದ್ ನದಿಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ನೀರಿನ ಪ್ರಮಾಣ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಎನ್ ಟಿಪಿಸಿ 480 ಮೆಗಾ ವ್ಯಾಟ್ ತಪೋವನ-ವಿಷ್ಣುಗಢ್ ಹೈಡ್ರೋ ಪವರ್ ಪ್ರಾಜೆಕ್ಟ್ ಮತ್ತು 13.2 ಮೆಗಾ ವ್ಯಾಟ್ ನ ರಿಷಿಗಂಗಾ ಹೈಡಲ್ ಪ್ರಾಜೆಕ್ಟ್ ಗೆ ಹಾನಿಯಾಗಿದೆ. ಈ ಪ್ರದೇಶದಲ್ಲಿನ ಹಲವು ಮನೆಗಳು ಕೊಚ್ಚಿ ಹೋಗಿರುವುದು ವರದಿಯಾಗಿದೆ.
ಉತ್ತರಾಖಂಡ್ ಕಥೆ: ಹಿಮನದಿ ಸ್ಫೋಟ ಎಂದರೇನು, ಹೇಗೆ ಸಂಭವಿಸುತ್ತೆ?
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ರಾಜ್ಯ ವಿಪತ್ತು ನಿರ್ವಹಣಾ ತಂಡ, ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಮತ್ತು ಭಾರತೀಯ ಸೇನಾ ಪಡೆಯ 600ಕ್ಕೂ ಹೆಚ್ಚು ಸಿಬ್ಬಂದಿಯು ಚಮೋಲಿ ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.
ಉತ್ತರಾಖಂಡ್ ಗ್ರಾಮಗಳಿಗೆ ಸಂಪರ್ಕ ಕಡಿತ:
ಹಿಮಪಾತ ಮತ್ತು ಪ್ರವಾಹ ಪರಿಸ್ಥಿತಿಯಿಂದಾಗಿ ಉತ್ತರಾಖಂಡ್ ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ರೇನಿ ಪಲ್ಲಿ, ಪಾಂಗ್, ಲಟಾ, ಸುರೈತೋಟಾ, ಸುಕಿ, ಭಲ್ಗೋನ್, ತೋಲ್ಮಾ, ಫಾಗ್ರಸು, ಲೊಂಗ್ ಸೇಗ್ದಿ, ಗಹಾರ್, ಭಂಗ್ಯೂಲ್, ಜುವಾಗ್ವಾಡ್, ಜುಗ್ಜು ಸೇರಿದಂತೆ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಗ್ರಾಮಸ್ಥರಿಗೆ ಅಗತ್ಯ ಆಹಾರ ಮತ್ತು ಔಷಧಿಯನ್ನು ತಲುಪಿಸಿದ ಇಂಡೋ ಟಿಬೆಟಿಯನ್ ಗಡಿ ಪೊಲೀಸರಿಗೆ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಧನ್ಯವಾದ ಅರ್ಪಿಸಿದ್ದಾರೆ.