ಉತ್ತರಾಖಂಡದಲ್ಲಿ ಭಾರೀ ಮಳೆ: ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ ಭೂಕುಸಿತ ಮತ್ತು ಹಠಾತ್ ಪ್ರವಾಹಗಳು
ಡೆಹೆರಾಡೂನ್, ಜುಲೈ. 18: ಉತ್ತರಾಖಂಡದಲ್ಲಿ ಕಳೆದ ಮೂರು ದಿನಗಳಲ್ಲಿ ಭಾರೀ ಮಳೆಯಾಗಿದ್ದು, ಭೂಕುಸಿತ ಮತ್ತು ಹಠಾತ್ ಪ್ರವಾಹಗಳು ಜನಜೀವನವನ್ನು ಅಸ್ತವ್ಯಸ್ತಗೊಳಿಸಿವೆ ಮತ್ತು ಹಲವು ಮನೆಗಳಿಗೆ ಹಾನಿಯಾಗಿದ್ದು, ಈವರೆಗೆ 27 ಜನರನ್ನು ಬಲಿ ತೆಗೆದುಕೊಂಡಿದೆ. ಇತ್ತ, ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಋಷಿಕೇಶ-ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯ ಹಳ್ಳಿಯೊಂದರಲ್ಲಿ ಹೋಟೆಲ್ ಕೊಚ್ಚಿ ಹೋಗಿದ್ದು, ಇಬ್ಬರು ಯುವಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೀಕರ ಪರಿಸ್ಥಿತಿಗೆ ಪ್ರತಿಕ್ರಿಯೆಯಾಗಿ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ವಿಪತ್ತು ನಿಯಂತ್ರಣ ಕೊಠಡಿಗೆ ಭೇಟಿ ನೀಡಿದ್ದಾರೆ. ರಾಜ್ಯದಲ್ಲಿ ಉಂಟಾದ ಹಾನಿಯ ಪ್ರಮಾಣವನ್ನು ನಿರ್ಣಯಿಸಲು ಮತ್ತು ನಡೆಯುತ್ತಿರುವ ಪರಿಹಾರ ಪ್ರಯತ್ನಗಳನ್ನು ಪರಿಶೀಲಿಸಿದ್ದಾರೆ. ಭೇಟಿ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೇವೆಗಳ ಮರುಸ್ಥಾಪನೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದ್ದಾರೆ.

ಭಾರೀ ಮಳೆಯಿಂದಾಗಿ ತೀವ್ರ ಅಡಚಣೆ ಉಂಟಾಗಿದ್ದು, ರಾಜ್ಯದಾದ್ಯಂತ 195 ರಸ್ತೆಗಳನ್ನು ಮುಚ್ಚಲಾಗಿದೆ. ಚಾರ್ ಧಾಮ್ ಯಾತ್ರೆ ಕೈಗೊಂಡ 160ಕ್ಕೂ ಹೆಚ್ಚು ಭಕ್ತರು ಮಳೆ ಸಂಬಂಧಿತ ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. "ನಿರ್ಬಂಧಿತ ರಸ್ತೆಗಳನ್ನು ತೆರೆಯಲು ಮತ್ತು ಪೀಡಿತ ಪ್ರದೇಶಗಳಲ್ಲಿ ಸಹಜ ಸ್ಥಿತಿಗೆ ಮರಳಲು ಪ್ರಯತ್ನಗಳು ನಡೆಯುತ್ತಿವೆ" ಎಂದು ಉತ್ತರಾಖಂಡದ ವಿಪತ್ತು ನಿರ್ವಹಣಾ ಕಾರ್ಯದರ್ಶಿ ರಂಜಿತ್ ಸಿನ್ಹಾ ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಲಕ್ಸಾರ್, ಖಾನ್ಪುರ, ರೂರ್ಕಿ, ಭಗವಾನ್ಪುರ ಮತ್ತು ಹರಿದ್ವಾರ ತಹಸಿಲ್ಗಳ 71 ಹಳ್ಳಿಗಳಲ್ಲಿ ಪ್ರವಾಹದಂತಹ ಪರಿಸ್ಥಿತಿಯಲ್ಲಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಸೇನೆ ಮತ್ತು ರಾಜ್ಯ ಪೊಲೀಸರ ಸಹಾಯದಿಂದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ.

"ಕೋಟಿ, ಮಸ್ಸೂರಿ, ಡೆಹ್ರಾಡೂನ್ನ ಬ್ಲಾಕ್ ಮತ್ತು ಹರಿದ್ವಾರ ಜಿಲ್ಲೆಗಳ ಲಕ್ಸಾರ್ ತಾಲೂಕುಗಳಲ್ಲಿ ನಿರಂತರ ಮಳೆಯಿಂದಾಗಿ, ತಗ್ಗು ಪ್ರದೇಶಗಳು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತಗಳು ಸಂಭವಿಸುವ ಸಾಧ್ಯತೆಯಿದೆ. ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ. ನದಿ ದಡದ ಬಳಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸೂಚಿಸಿದೆ" ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಹರಿದ್ವಾರದಲ್ಲಿ 3756 ಕುಟುಂಬಗಳು ಸಂಕಷ್ಟಕ್ಕೆ ಈಡಾಗಿದ್ದು, ಐದು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಪ್ರಸ್ತುತ ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಉತ್ತರಕಾಶಿ 17 ರಸ್ತೆಗಳನ್ನು ಮುಚ್ಚಲಾಗಿದೆ. ರುದ್ರಪ್ರಯಾಗದಲ್ಲಿ 19 ರಸ್ತೆಗಳನ್ನು ನಿರ್ಬಂಧಿಸಲಾಗಿದೆ ಮತ್ತು ತೆರವು ಕಾರ್ಯಾಚರಣೆಗಳು ನಡೆಯುತ್ತಿವೆ. ಡೆಹ್ರಾಡೂನ್ನಲ್ಲಿ ಇನ್ನೂ 39 ರಸ್ತೆಗಳನ್ನು ಮುಚ್ಚಲಾಗಿದ್ದು, ಅವುಗಳನ್ನು ಮತ್ತೆ ತೆರೆಯಲು ಪ್ರಯತ್ನಿಸಲಾಗುತ್ತಿದೆ. ತೆಹ್ರಿ, ಉಧಮ್ ಸಿಂಗ್ ನಗರ, ಪೌರಿ, ಚಮೋಲಿ, ನೈನಿತಾಲ್, ಚಂಪಾವತ್ ಮತ್ತು ಪಿಥೋರಗಢದಂತಹ ಇತರ ಜಿಲ್ಲೆಗಳಲ್ಲಿ ಇದೇ ರೀತಿಯ ಪರಿಸ್ಥಿತಿಯಿದೆ.

ಹರಿದ್ವಾರ ಪ್ರವಾಹ
ಹರಿದ್ವಾರ ಪ್ರವಾಹದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾಗಿದೆ. ಲಕ್ಸಾರ್ ಪಟ್ಟಣದಲ್ಲಿ ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಪಟ್ಟಣದಲ್ಲಿ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಇಲ್ಲವಾಗಿದ್ದು, ಮಾರುಕಟ್ಟೆ ಪ್ರದೇಶಗಳೂ ಜಲಾವೃತವಾಗಿವೆ. ಎನ್ಡಿಆರ್ಎಫ್ ತಂಡಗಳು ಸಜ್ಜಾಗಿವೆ.
ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಹರಿದ್ವಾರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಧೀರಜ್ ಸಿಂಗ್ ಅವರಿಗೆ ಭೀಮಗೋಡ ಬ್ಯಾರೇಜ್ನ ಗೇಟ್ ನಂ 10 ಅನ್ನು ಶೀಘ್ರವಾಗಿ ದುರಸ್ತಿ ಮಾಡುವಂತೆ ಸೂಚಿಸಿದೆ. ಇತ್ತ, ನೈರುತ್ಯ ಮಾನ್ಸೂನ್ನ ಮತ್ತೊಂದು ಸಕ್ರಿಯ ಹಂತವು ಈ ವಾರ ಪ್ರಾರಂಭವಾಗುವ ನಿರೀಕ್ಷೆಯಿರುವುದರಿಂದ ಹವಾಮಾನ ಇಲಾಖೆ ಜುಲೈ 21 ರವರೆಗೆ ಹಲವಾರು ರಾಜ್ಯಗಳಿಗೆ ಮಳೆ ಎಚ್ಚರಿಕೆಯನ್ನು ನೀಡಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಮಹಾರಾಷ್ಟ್ರ, ಒಡಿಶಾ, ಗುಜರಾತ್, ಮಧ್ಯಪ್ರದೇಶ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.












Click it and Unblock the Notifications