"ರೈತರನ್ನು ಬೆದರಿಸಬೇಡಿ": ವಾಜಪೇಯಿ ವಿಡಿಯೋ ಮೂಲಕ ಬಿಜೆಪಿಗೆ ವರುಣ್ ಗಾಂಧಿ ತಿರುಗುಬಾಣ!?
ನವದೆಹಲಿ, ಅಕ್ಟೋಬರ್ 14: ಭಾರತೀಯ ಜನತಾ ಪಕ್ಷದ ಫೈರ್ ಬ್ರ್ಯಾಂಡ್ ಎಂದು ಕರೆಸಿಕೊಳ್ಳುತ್ತಿದ್ದ ವರುಣ್ ಗಾಂಧಿ ಮೂಲೆಗುಂಪು ಆಗುತ್ತಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ. ಕಳೆದ ವಾರವಷ್ಟೇ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ವರುಣ್ ಗಾಂಧಿ ಮತ್ತು ಅವರ ತಾಯಿ ಮನೇಕಾ ಗಾಂಧಿಯವರನ್ನು ಕೈಬಿಡಲಾಗಿದೆ. ಇದರ ಬೆನ್ನಲ್ಲೇ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವರುಣ್ ಗಾಂಧಿ ತಿರುಗುಬಾಣ ಬಿಟ್ಟಿದ್ದಾರೆ.
ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿರುವ ವರುಣ್ ಗಾಂಧಿ, ರೈತರ ಕಣ್ಣು ಕೆಂಪಾಗಿಸಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಆ ಮೂಲಕ ರೈತರ ವಿಷಯದಲ್ಲಿ ತಮ್ಮ ನಿಲುವು ಬದಲಿಸುವ ಪ್ರಶ್ನೆಯೇ ಇಲ್ಲ ಎಂಬ ಸಂದೇಶವನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಿಂದ ಮನೇಕಾ, ವರುಣ್ ಗಾಂಧಿ ಹೆಸರು ಔಟ್!
ಕೇಂದ್ರ ಸರ್ಕಾರಕ್ಕೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಪಕ್ಷದ ಶ್ರೇಷ್ಠ ನಾಯಕ ಮತ್ತು ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ತಮ್ಮ ಹೋರಾಟದ ದಿನಗಳಲ್ಲಿ ರೈತರ ಬಗ್ಗೆ ಮಾತನಾಡಿರುವ ವಿಡಿಯೋ ತುಣುಕುವೊಂದನ್ನು ಟ್ವೀಟ್ ಮಾಡಿದ್ದಾರೆ. ಟ್ವೀಟ್ ಮೇಲ್ಭಾಗದಲ್ಲಿ "ವಿಶಾಲ ಹೃದಯದ ನಾಯಕನ ಬುದ್ಧಿವಂತ ಮಾತುಗಳು..." ಎಂದು ಬರೆದುಕೊಂಡಿದ್ದಾರೆ. ಬಿಜೆಪಿಯಲ್ಲೇ ಇದ್ದುಕೊಂಡು ಕೇಂದ್ರ ಸರ್ಕಾರ ಮತ್ತು ಯುಪಿ ಸರ್ಕಾರಕ್ಕೆ ಚುರುಕು ಮುಟ್ಟಿಸುತ್ತಿರುವ ವರುಣ್ ಗಾಂಧಿ ಹಾಗೂ ರೈತರ ಕುರಿತಾದ ಅವರ ನಿಲುವು ಹೇಗಿದೆ ಎಂಬುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ಓದಿ.
|
ರೈತರ ಬಗ್ಗೆ ವಾಜಪೇಯಿಯವರು ಆಡಿರುವ ಮಾತು
ಭಾರತದಲ್ಲಿ ಕ್ರಾಂತಿಕಾರಿ ಹೋರಾಟ ನಡೆಸುತ್ತಿದ್ದ ಕಾಲದಲ್ಲಿ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ರೈತರ ಕುರಿತಾಗಿ ಮಾತನಾಡಿರುವ ವಿಡಿಯೋ ತುಣುಕುವೊಂದನ್ನು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ "ರೈತರನ್ನು ಬೆದರಿಸುವ ಸರ್ಕಾರಕ್ಕೆ ಎಚ್ಚರಿಕೆ ನೀಡಿ. ನಮ್ಮನ್ನು ಹೆದರಿಸಲು ಪ್ರಯತ್ನಿಸಬೇಡಿ. ರೈತರು ಹೆದರುವುದಿಲ್ಲ. ನಾವು ರೈತರ ಚಳವಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಬಯಸುವುದಿಲ್ಲ," ಎಂದು ವಾಜಪೇಯಿ ಹೇಳಿದ್ದಾರೆ. ಅಲ್ಲದೇ "ನಾವು ಅವರ ನಿಜವಾದ ಬೇಡಿಕೆಗಳನ್ನು ಬೆಂಬಲಿಸುತ್ತೇವೆ, ಮತ್ತು ಸರ್ಕಾರವು ನಮ್ಮನ್ನು ಹೆದರಿಸಲು ಅಥವಾ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳಲು ಅಥವಾ ರೈತರ ಶಾಂತಿಯುತ ಹೋರಾಟವನ್ನು ಕಡೆಗಣಿಸಲು ಪ್ರಯತ್ನಿಸಿದರೆ, ನಾವು ಕೂಡ ಚಳುವಳಿಯ ಭಾಗವಾಗುತ್ತೇವೆ" ಎಂದು ವಾಜಪೇಯಿಯವರು ಹೇಳಿದ್ದಾರೆ.
ರೈತರ ಹಿಂಸಾಚಾರದ ಬಗ್ಗೆ ಮಾತನಾಡಿದ ವರುಣ್ ಗಾಂಧಿ
ಉತ್ತರ ಪ್ರದೇಶ ಲಖೀಂಪುರ್ ಖೇರಿಯಲ್ಲಿ ನಡೆದ ರೈತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರೈತರ ಪರವಾಗಿ ಮಾತನಾಡಿದ ಏಕೈಕ ಬಿಜೆಪಿ ನಾಯಕ ಎಂದರೆ ಅದು ವರುಣ್ ಗಾಂಧಿ. ರೈತರಿಗೆ ಬೆಂಬಲವಾಗಿ ಮಾತನಾಡಿದ್ದು ಅಲ್ಲದೇ, ಮೃತ ರೈತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು. ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಿಗೆ ವರುಣ್ ಗಾಂಧಿ ಪತ್ರ ಬರೆದಿದ್ದರು.
|
ಕೊಲೆ ಎಂಬ ಟ್ಯಾಗ್ ಬಳಸಿ ವಿಡಿಯೋ ಟ್ವೀಟ್
ಕಳೆದ ಅಕ್ಟೋಬರ್ 3ರಂದು ಲಖೀಂಪುರ್ ಜಿಲ್ಲೆಯ ಖೇರಿಯಲ್ಲಿ ಕಪ್ಪು ಎಸ್ಯುವಿಯನ್ನು ಹಿಂದಿನಿಂದ ಶಾಂತಿಯುತ ಪ್ರತಿಭಟನಾಕಾರರ ಗುಂಪಿನ ಮೇಲೆ ಹರಿಸಿದ ವೀಡಿಯೊವನ್ನು ಟ್ವೀಟ್ ಮಾಡಿದ್ದು, ಅದನ್ನು "ಕೊಲೆ" ಎಂದು ಟ್ಯಾಗ್ ಮಾಡಿದ್ದರು. "ಮನ ಕಲುಕುವಂತೆ ಮಾಡಲು" ಈ ವೀಡಿಯೊ ಸಾಕು ಎಂದು ಹೇಳಿದ್ದರು.
ವರುಣ್ ಗಾಂಧಿ, ಮನೇಕಾ ಗಾಂಧಿಗೆ ಗೇಟ್ ಪಾಸ್
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬಿಜೆಪಿ ನಾಯಕ ವರುಣ್ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದರು. ತದನಂತರ ಲಖೀಂಪುರ್ ಖೇರಿಯಲ್ಲಿ ನಡೆದ ರೈತರ ಮೇಲಿನ ಹಿಂಸಾಚಾರದ ವಿಷಯದಲ್ಲೂ ಕೇಂದ್ರ ಸರ್ಕಾರ ಮತ್ತು ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಅಜಯ್ ಮಿಶ್ರಾ ವಿರುದ್ಧ ವರುಣ್ ಗಾಂಧಿ ಪರೋಕ್ಷ ವಾಗ್ದಾಳಿ ನಡೆಸಿದ್ದರು. ಈ ಬೆಳವಣಿಗೆಗಳ ಮಧ್ಯೆ ಕಳೆದ ವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ 80 ಸದಸ್ಯರ ಸಮಿತಿಯಿಂದ ವರುಣ್ ಗಾಂಧಿ ಹಾಗೂ ಅವರ ತಾಯಿ ಮನೇಕಾ ಗಾಂಧಿಯವರನ್ನು ತೆಗೆದು ಹಾಕಲಾಗಿತ್ತು.
ಕೇಂದ್ರದ ಕೃಷಿ ಕಾಯ್ದೆ ವಿರುದ್ಧದ ಹೋರಾಟಕ್ಕೆ ಬೆಂಬಲ
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಸುದೀರ್ಘ ಅವಧಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 2020ರ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿಯ ಮೂರು ಗಡಿಗಳಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ನಾಯಕ ವರುಣ್ ಗಾಂಧಿ ಕೂಡ ಬೆಂಬಲ ವ್ಯಕ್ತಪಡಿಸಿದ್ದರು.