Mahakumbh Mela 2025: ಕುಂಭ ಮೇಳದಲ್ಲಿ ಸ್ನಾನ ಮಾಡುವ ಮಹಿಳೆಯರ ವೀಡಿಯೋ ಮಾರಾಟ: ಪೊಲೀಸ್ ಭದ್ರತೆ ಹೆಚ್ಚಳ
ಲಕ್ನೋ ಫೆಬ್ರವರಿ 21: ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಈವರೆಗೂ ಸರಿಸುಮಾರು 57 ಕೋಟಿ ಜನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಫೆಬ್ರವರಿ 26ರವರೆಗೆ ಮಹಾ ಕುಂಭ ಮೇಳ ನಡೆಯಲಿದ್ದು, ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂತಹ ಪವಿತ್ರ ಧಾರ್ಮಿಕ ಕ್ಷೇತ್ರದಲ್ಲಿ ಮನುಕುಲ ತಲೆ ತಗ್ಗಿಸುವ ಆಪಾದನೆಯೊಂದು ಕೇಳಿ ಬಂದಿದೆ. ಮಹಾ ಕುಂಭ ಮೇಳದಲ್ಲಿ ಮಹಿಳೆಯರ ಸ್ನಾನದ ವೀಡಿಯೊಗಳು ಮಾರಾಟಕ್ಕಿವೆ ಎನ್ನುವ ಆರೋಪ ಮಾಡಲಾಗಿದೆ.
ಹೌದು.... ಮಹಾ ಕುಂಭ ಮೇಳದಲ್ಲಿ ಕೋಟ್ಯಾಂತರ ಭಕ್ತರು ಸ್ನಾನ ಮಾಡಿ ಪಾವನರಾಗುತ್ತಿದ್ದಾರೆ. ಈವರೆಗೆ 57 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ ಎನ್ನುವ ಮಾಹಿತಿ ಇದೆ. ಪ್ರತಿನಿತ್ಯ ಲಕ್ಷಾಂತರ ಭಕ್ತರು ಮಹಾಕುಂಭ ಮೇಳಕ್ಕೆ ಭೇಟಿ ನೀಡುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ಭಕ್ತಿ ತೋರಿಸುತ್ತಿದ್ದಾರೆ. ಆದರೆ ಕಿಡಿಗೇಡಿಗಳು ಮಹಿಳೆಯರ ಸ್ನಾನದ ವಿಡಿಯೋಗಳನ್ನು ಸೆರೆ ಹಿಡಿದು ಮಾರಾಟ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹೀಗಾಗಿ ಸ್ನಾನದ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕುಂಭ ಮೇಳದಲ್ಲಿ ಸ್ನಾನ ಮಾಡುವ ಮಹಿಳೆಯರ ವಿಡಿಯೋ ಮಾರಾಟ
ಮಹಾ ಕುಂಭದಲ್ಲಿ ಮಹಿಳಾ ಯಾತ್ರಿಕರು ಸ್ನಾನ ಮಾಡುತ್ತಿರುವ ಆಕ್ಷೇಪಾರ್ಹ ವೀಡಿಯೊಗಳನ್ನು ಪೋಸ್ಟ್ ಮಾಡಿ ಮಾರಾಟ ಮಾಡಿದ ಆರೋಪದ ಮೇಲೆ ಎರಡು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಪ್ರಶಾಂತ್ ಕುಮಾರ್ ಅವರ ನಿರ್ದೇಶನದ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಕುಂಭಮೇಳದಲ್ಲಿ ಮಹಿಳೆಯರು ಸ್ನಾನ ಮಾಡುವ ಮತ್ತು ಬಟ್ಟೆ ಬದಲಾಯಿಸುವ ವೀಡಿಯೊಗಳನ್ನು ಸೆರೆ ಹಿಡಿದು ಕೆಲವು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಹೀಗೆ ಭಕ್ತರರ ಗೌಪ್ಯತೆ ಮತ್ತು ಘನತೆಗೆ ಧಕ್ಕೆ ತರುವಂತಹ ಕಿಡಿಗೇಡಿಗಳಿಗೆ ಪಾಠ ಕಲಿಸಲು ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ತಂಡ ಈ ವಿಡಿಯೋ ಹಾಗೂ ಫೋಟೋಗಳನ್ನು ಪತ್ತೆಹಚ್ಚಿದ್ದು, ಕೊತ್ವಾಲಿ ಕುಂಭಮೇಳ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಫೆಬ್ರವರಿ 17ರಂದು ಮಹಿಳಾ ಯಾತ್ರಿಕರ ಅನುಚಿತ ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಇನ್ಸ್ಟಾಗ್ರಾಮ್ ಖಾತೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ತಪ್ಪಿಕಸ್ಥರ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಗಿದೆ.
ಖಾತೆ ನಿರ್ವಾಹಕರನ್ನು ಗುರುತಿಸಲು ಇನ್ಸ್ಟಾಗ್ರಾಮ್ ಅನ್ನು ಹೊಂದಿರುವ ಮತ್ತು ನಿರ್ವಹಿಸುವ ತಂತ್ರಜ್ಞಾನ ಸಮೂಹವಾದ ಮೆಟಾದಿಂದ ಮಾಹಿತಿ ಕೋರಲಾಗಿದೆ. ವಿವರಗಳನ್ನು ಸ್ವೀಕರಿಸಿದ ನಂತರ ಬಂಧನ ಸೇರಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಅಲ್ಲದೆ ಮಹಾ ಕುಂಭ ಮೇಳಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪೊಲೀಸರ ತಂಡಗಳು ಬೋಟ್ಗಳ ಮೂಲಕ ನಿರಂತರವಾಗಿ ಗಂಗಾನದಿಯಲ್ಲಿ ಗಸ್ತು ಹೊಡೆಯುತ್ತಿವೆ. ಯಾವುದೇ ಅಘಾತಕಾರಿ ಘಟನೆ ಸಂಭವಿಸಿದರೂ ಕೂಡ ತಕ್ಷಣ ಕಾರ್ಯಪ್ರವೃತ್ತರಾಗಲು ಸಜ್ಜಾಗಿದ್ದಾರೆ.












Click it and Unblock the Notifications