Weather Forecast: ಡಿಸೆಂಬರ್ 13ರ ವರೆಗೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ; ಎಲ್ಲಲ್ಲಿ?
Weather Forecast: ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಇದೀಗ ಚಳಿಗಾಲದ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಡಿಸೆಂಬರ್ 10ರಿಂದ 13ರ ವರೆಗೆ ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್ ಸೇರಿದಂತೆ ದಕ್ಷಿಣ ಭಾರತದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 11 ಮತ್ತು 12ರಂದು ಕರಾವಳಿ ಆಂಧ್ರಪ್ರದೇಶ ಮತ್ತು ಇಲ್ಲಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 11ರಿಂದ 13ರ ವರೆಗೆ ಕೇರಳದಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಹಿಮಪಾತ?: ಡಿಸೆಂಬರ್ 8ರಿಂದ 11ರ ವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಹಿಮದ ಜೊತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 8 ಮತ್ತು 9ರಂದು ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗ್ನೇಯ ಬಂಗಾಳಕೊಲ್ಲಿ ಮತ್ತು ಹಿಂದೂ ಮಹಾಸಾಗರದ ಮೇಲೆ ಚಂಡಮಾರುತದ ಪರಿಣಾಮ ಬೀರಲಿದೆ. ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ ಮತ್ತು ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದು ಡಿಸೆಂಬರ್ 11ರ ಸುಮಾರಿಗೆ ಶ್ರೀಲಂಕಾ ಮತ್ತು ತಮಿಳುನಾಡು ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯನ್ನು ತಲುಪುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ದಟ್ಟ ಮಂಜು ಕವಿಯಲಿದೆ?: ಡಿಸೆಂಬರ್ 9ರ ವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದ ಪ್ರತ್ಯೇಕ ಭಾಗಗಳಲ್ಲಿ ತಡರಾತ್ರಿ ಮತ್ತು ಮುಂಜಾನೆ ವೇಳೆ ದಟ್ಟವಾಗಿ ಮಂಜಿನ ವಾತಾವರಣ ಇರಲಿದೆ. ಡಿಸೆಂಬರ್ 8 ರಿಂದ 10ರ ವರೆಗೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಜಾರ್ಖಂಡ್ನಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಡಿಸೆಂಬರ್ 9 ರಿಂದ 12ರ ವರೆಗೆ ಉತ್ತರ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿ ವಾತಾವರಣ ಇರಲಿದೆ. ಡಿಸೆಂಬರ್ 10ರ ವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಡಿಸೆಂಬರ್ 11 ಮತ್ತು 12 ರ ಅವಧಿಯಲ್ಲಿ ಹಿಮಾಚಲ ಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 9ರಿಂದ 13ರ ವರೆಗೆ ಉತ್ತರ ರಾಜಸ್ಥಾನದ ಪ್ರತ್ಯೇಕ ಭಾಗಗಳಲ್ಲಿ ಶೀತ ಹೆಚ್ಚಿರಲಿದೆ ಎಂದು ತಿಳಿಸಿದೆ.
ಮೀನುಗಾರರಿಗೆ ಪ್ರಮುಖ ಸೂಚನೆ: ಚಂಡಮಾರುತ ಹಿನ್ನೆಲೆ ಮೀನುಗಾರರು ಡಿಸೆಂಬರ್ 8ರಿಂದ 11ರ ವರೆಗೆ ಆಗ್ನೇಯ ಬಂಗಾಳ ಕೊಲ್ಲಿಗೆ ಮತ್ತು ಡಿಸೆಂಬರ್ 9ರಿಂದ 12ರ ವರೆಗೆ ನೈರುತ್ಯ ಬಂಗಾಳ ಕೊಲ್ಲಿಗೆ ಹೋಗದಂತೆ ಸೂಚಿಸಲಾಗಿದೆ. ಅಲ್ಲದೆ, ಡಿಸೆಂಬರ್ 11 ಮತ್ತು 12ರಂದು ಪಶ್ಚಿಮ ಬಂಗಾಳ ಕೊಲ್ಲಿಗೆ ಹೋಗಬಾರದು ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ದೆಹಲಿಯ ಹವಾಮಾನ ಮುನ್ಸೂಚನೆ: ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ಕನಿಷ್ಠ ತಾಪಮಾನದಲ್ಲಿ ಭಾರೀ ಕುಸಿತವಾಗಿದೆ. ಡಿಸೆಂಬರ್ 9 ಮತ್ತು 10ರಂದು ಮತ್ತಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಅಲ್ಲದೆ, ಗಾಳಿಯ ಗುಣಮಟ್ಟ ಹದಗೆಡುತ್ತಿದೆ. ಇದರ ಜೊತೆಗೆ ಮಂಜಿನ ವಾತಾವರಣ ನಿರ್ಮಾಣವಾಗುತ್ತಿದ್ದು, ಇದರಿಂದ ಇಲ್ಲಿನ ಜನರು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.












Click it and Unblock the Notifications