ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆ; ದೊಡ್ಡ ಸುಳಿವು ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಭಾರತದ ಮೇಲೆ ಕೆಟ್ಟ ಕಣ್ಣು ಹಾಕಿದವರಿಗೆ ಸೂಕ್ತ ಉತ್ತರ ಕೊಡುವುದು ಮತ್ತು ಸಶಸ್ತ್ರ ಪಡೆಗಳ ಜೊತೆ ಕೆಲಸ ಮಾಡುವುದು ತಮ್ಮ ಜವಾಬ್ದಾರಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಉಂಟಾಗಿರುವ ಬೆನ್ನಲ್ಲೇ ರಕ್ಷಣಾ ಸಚಿವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ಮಾಡಿದ್ದ ಉಗ್ರರು 26 ಪ್ರವಾಸಿಗರನ್ನು ಹತ್ಯೆ ಮಾಡಿದ್ದರು. ದಾಲಿ ಮಾಡಿದ ಭಯೋತ್ಪಾದಕರು ಪಾಕಿಸ್ತಾನದ ಜೊತೆ ನಂಟು ಹೊಂದಿದ್ದಾರೆ ಎಂದು ಭಾರತ ಸರ್ಕಾರ ಹೇಳಿದ್ದು, ಉಗ್ರರ ದಾಳಿಗೆ ಕಠಿಣ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದೆ.

ಭಾನುವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, "ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ನೀವು ಬಯಸುವುದು ಖಂಡಿತವಾಗಿಯೂ ಸಂಭವಿಸುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ" ಎಂದು ಹೇಳಿದರು. ಭಯೋತ್ಪಾದನಾ ದಾಳಿಗೆ ಪಾಕಿಸ್ತಾನದ ವಿರುದ್ಧ ಪ್ರತಿಕ್ರಿಯೆ ನೀಡಬೇಕು ಎಂದು ದೇಶಾದ್ಯಂತ ಜನರು ಮಾತನಾಡುತ್ತಿರುವುದನ್ನು ನೆನಪಿಸಿದರು.
ಸೂಕ್ತ ಉತ್ತರ ಕೊಡುವುದು ನಮ್ಮ ಜವಾಬ್ದಾರಿ
ರಕ್ಷಣಾ ಸಚಿವರಾಗಿ, ನನ್ನ ಸೈನಿಕರೊಂದಿಗೆ ಕೆಲಸ ಮಾಡುವುದು ಮತ್ತು ದೇಶದ ಗಡಿಗಳ ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವುದು ನನ್ನ ಜವಾಬ್ದಾರಿಯಾಗಿದೆ. ನಮ್ಮ ದೇಶದ ಮೇಲೆ ಕೆಟ್ಟ ಕಣ್ಣು ಹಾಕುವವರಿಗೆ ಸಶಸ್ತ್ರ ಪಡೆಗಳೊಂದಿಗೆ ಕೆಲಸ ಮಾಡುವ ಮೂಲಕ ಸೂಕ್ತ ಉತ್ತರವನ್ನು ನೀಡುವುದು ನನ್ನ ಜವಾಬ್ದಾರಿ ಎಂದು ರಾಜನಾಥ್ ಸಿಂಗ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಜನರಿಗೆ ಚನ್ನಾಗಿ ತಿಳಿದಿದೆ. ಅವರ ಕಾರ್ಯಶೈಲಿ, ದೃಢನಿಶ್ಚಯ ಮತ್ತು ಅವರು ತಮ್ಮ ಜೀವನದಲ್ಲಿ ಅಪಾಯಗಳನ್ನು ತೆಗೆದುಕೊಳ್ಳಲು ಕಲಿತಿರುವ ಬಗ್ಗೆ ದೇಶದ ಜನರಿಗೆ ಗೊತ್ತಿದೆ ಎಂದರು.
ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಎಲ್ಲಾ ಪಾಕಿಸ್ತಾನಿಯರ ವೀಸಾವನ್ನು ರದ್ದುಗೊಳಿಸಿದ್ದು ವಾಪಸ್ ತೆರಳುವಂತೆ ಸೂಚನೆ ಕೊಟ್ಟಿದೆ. ಎರಡೂ ದೇಶಗಳ ನಡುವಿನ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಲಾಗಿದೆ.
ದಾಳಿಯ ಬಳಿಕ ಹಲವು ದಿನಗಳಿಂದ ಪಾಕಿಸ್ತಾನಿ ಪಡೆಗಳು ನಿಯಂತ್ರಣ ರೇಖೆಯ (ಎಲ್ಒಸಿ) ಉದ್ದಕ್ಕೂ ಹಲವು ಬಾರಿ ಕದನ ವಿರಾಮವನ್ನು ಉಲ್ಲಂಘಿಸಿವೆ. ಭಾರತೀಯ ಪಡೆಗಳು ಗುಂಡಿನ ದಾಳಿಯೊಂದಿಗೆ ಪ್ರತಿಕ್ರಿಯೆ ನೀಡಿವೆ.












Click it and Unblock the Notifications