ಇಬ್ಬರು ಕಾಂಗ್ರೆಸ್ ಹಿರಿಯ ನಾಯಕರನ್ನು ಸೋಲಿಸಲು ಬಿಜೆಪಿ ಪಣ!
ಬೆಂಗಳೂರು, ಜನವರಿ 08 : 2019ರ ಲೋಕಸಭಾ ಚುನಾವಣೆಯಲ್ಲಿ ಇಬ್ಬರು ಹಿರಿಯ ಕಾಂಗ್ರೆಸ್ ನಾಯಕರನ್ನು ಸೋಲಿಸಲು ಬಿಜೆಪಿ ಪಣ ತೊಟ್ಟಿದೆ. ಇಬ್ಬರು ನಾಯಕರು ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದವರು ಎಂಬುದು ಗಮನಿಸಬೇಕಾದ ಅಂಶ.
ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರನ್ನು ಸೋಲಿಸಬೇಕು ಎಂದು ತಂತ್ರ ರೂಪಿಸುತ್ತಿದೆ.
ಈ ಇಬ್ಬರು ನಾಯಕರ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂದು ತೀರ್ಮಾನಿಸಲಾಗಿದ್ದು, ಬಿಜೆಪಿ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದರೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ಗೆ ಮುಜುಗರ ಉಂಟು ಮಾಡಿದಂತಾಗುತ್ತದೆ.
ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಕಲಬುರಗಿ ಕ್ಷೇತ್ರದ ಸಂಸದರು. ಸುಶೀಲ್ ಕುಮಾರ್ ಶಿಂಧೆ ಅವರು ಮಹಾರಾಷ್ಟ್ರ-ಕರ್ನಾಟಕ ಗಡಿಯ ಸೊಲ್ಲಾಪುರದಿಂದ ಕಣಕ್ಕಿಳಿಯಲಿದ್ದಾರೆ. ಆದ್ದರಿಂದ, ಇಬ್ಬರನ್ನು ಸೋಲಿಸಲು ಬಿಜೆಪಿ ತಂತ್ರ ರೂಪಿಸಿದೆ.

3ನೇ ಬಾರಿ ಗೆಲುವಿನ ನಿರೀಕ್ಷೆ
ಗುಲ್ಪರ್ಗ (ಕಲಬುರಗಿ) ಕ್ಷೇತ್ರದಿಂದ 2 ಬಾರಿ ಲೋಕಸಭೆಗೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಈ ಬಾರಿ ಅವರು ಮೂರನೇ ಬಾರಿಗೆ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. 9 ಬಾರಿ ವಿಧಾನಸಭೆಗೆ, 2 ಬಾರಿ ಲೋಕಸಭೆಗೆ ಆಯ್ಕೆಯಾಗುವ ಮೂಲಕ ಸೋಲಿಲ್ಲದ ಸರದಾರ ಎಂದು ಖ್ಯಾತಿ ಪಡೆದಿರುವ ಅವರನ್ನು ಸೋಲಿಸುವುದು ಬಿಜೆಪಿ ಗುರಿಯಾಗಿದೆ.

ಖರ್ಗೆ ವಿರುದ್ಧ ಅಭ್ಯರ್ಥಿ ಯಾರು?
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. 2014ರ ಚುನಾವಣೆಯಲ್ಲಿ ರೇವುನಾಯಕ್ ಬೆಳಮಗಿ ಅವರು ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿದ್ದರು. 432460 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈಗ ಅವರು ಜೆಡಿಎಸ್ ಪಕ್ಷದಲ್ಲಿದ್ದಾರೆ. ಆದ್ದರಿಂದ, ಪ್ರಬಲ ಅಭ್ಯರ್ಥಿಗಾಗಿ ಪಕ್ಷ ಹುಡುಕಾಟ ನಡೆಸಬೇಕಿದೆ.

ಸುಶೀಲ್ ಕುಮಾರ್ ಶಿಂಧೆ
ಮಹಾರಾಷ್ಟ್ರದ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಸೊಲ್ಲಾಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. 2014ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಅವರು 368205 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈ ಬಾರಿಯೂ ಅವರೇ ಕ್ಷೇತ್ರದ ಅಭ್ಯರ್ಥಿಯಾಗುವುದು ಖಚಿತವಾಗಿದೆ.

ಸ್ವಾಮೀಜಿ ಕಣಕ್ಕೆ?
ಸೊಲ್ಲಾಪುರ ಕ್ಷೇತ್ರದ ಹಾಲಿ ಸಂಸದರು ಶರದ್ ಬನಸೋಡೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಸ್ವಾಮೀಜಿಯೊಬ್ಬರನ್ನು ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಸೊಲ್ಲಾಪುರದ ಅಕ್ಕಲಕೋಟೆ ತಾಲೂಕಿನ ಗೌಡಗಾಂವ ಮಠದ ಡಾ.ಜಯಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅಭ್ಯರ್ಥಿಯಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಮೋದಿ ಪ್ರಚಾರದ ಭಾಷಣ
ಕಲಬುರಗಿ ಮತ್ತು ಸೊಲ್ಲಾಪುರ ಲೋಕಸಭಾ ಕ್ಷೇತ್ರದಲ್ಲಿ 2014ರಲ್ಲಿ ನರೇಂದ್ರ ಮೋದಿ ಅವರು ಪ್ರಚಾರ ಭಾಷಣ ಮಾಡಿದ್ದರು. ಸೊಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದರೆ ಕಲಬುರಗಿಯಲ್ಲಿ ಸೋತಿದ್ದರು. ಈ ಬಾರಿಯೂ ಎರಡೂ ಕ್ಷೇತ್ರದಲ್ಲಿ ಮೋದಿ ಪ್ರಚಾರ ನಡೆಸುವ ಸಾಧ್ಯತೆ ಇದೆ.












Click it and Unblock the Notifications