ಆತುರದ ನಿರ್ಧಾರ ಬೇಡ: ಕುಸ್ತಿಪಟುಗಳ ಬೆಂಬಲಕ್ಕೆ ಬಂದ 1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡ
ನವದೆಹಲಿ, ಜೂನ್ 02: ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್ಐ) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಗಳು ಕೇಳಿಬಂದಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಲಂಫಿಕ್ಸ್ ಪದಕ ವಿಜೇತರು ಕಳೆದ ತಿಂಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಬ್ರಿಜ್ ಭೂಷನ್ ವಿರುದ್ಧ ದೆಹಲಿ ಪೊಲೀಸರು ಎರಡು ಎಫ್ಐಆರ್ ದಾಖಲಿಸಿದ್ದಾರೆ.
ದೆಹಲಿ ಪೊಲೀಸರು ತನಿಖೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬ ಆರೋಪಗಳನ್ನು ಕುಸ್ತಿಪಟುಗಳು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಗಂಗಾ ನದಿಯಲ್ಲಿ ತಮ್ಮ ಪದಕಗಳನ್ನು ಮುಳುಗಿಸಲು ತೆರಳಿದ್ದರು. ಆದರೆ, ಕುಸ್ತಿಪಟುಗಳನ್ನು ಮನವೊಲಿಸಿರು ರೈತ ನಾಯಕರು ಕೇಂದ್ರ ಸರ್ಕಾರಕ್ಕೆ ಐದು ದಿನಗಳ ಗಡುವು ನೀಡಿದ್ದಾರೆ.

ಕುಸ್ತಿಪಟುಗಳಿಗೆ ಸಾರ್ವಜನಿಕರು, ವಿರೋಧ ಪಕ್ಷಗಳ ನಾಯಕರು ಹಾಗೂ ರೈತ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ಇರ್ಫಾನ್ ಪಠಾಣ್ ಹಾಗೂ ಹರಭಜನ್ ಸಿಂಗ್ ಅವರು ಕುಸ್ತಿಪಟುಗಳ ಬೆಂಬಲಕ್ಕೆ ಬಂದಿದ್ದಾರೆ.
1983ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡವೂ ಸಹ ಕುಸ್ತಿಪಟುಗಳ ಬೆಂಬಲಕ್ಕೆ ನಿಂತಿದೆ. 1983 ರ ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ಸದಸ್ಯರು ಶುಕ್ರವಾರ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿದ್ದಾರೆ. ಯಾವುದೇ ಅಥ್ಲೀಟ್ಗಳು ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಒತ್ತಾಯಿಸಿದ್ದಾರೆ. ಅವರು ಕಷ್ಟಪಟ್ಟು ಗಳಿಸಿದ ಪದಕಗಳನ್ನು ಪವಿತ್ರ ಗಂಗಾ ನದಿಗೆ ಎಸೆಯುವಂತಹ ತೀವ್ರವಾದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಕಪಿಲ್ ದೇವ್ ನೇತೃತ್ವದ ತಂಡದ ಸದಸ್ಯರು ಹೇಳಿದ್ದಾರೆ.
ಮಹಿಳಾ ಕುಸ್ತಿಪಟುಗಳ ಲೈಂಗಿಕ ಶೋಷಣೆ ಆರೋಪದ ಮೇಲೆ ಡಬ್ಲ್ಯುಎಫ್ಐ ಮುಖ್ಯಸ್ಥ ಬಿರ್ಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ.

'ನಮ್ಮ ಚಾಂಪಿಯನ್ ಕುಸ್ತಿಪಟುಗಳನ್ನು ಅಮಾನುಷವಾಗಿ ನಡೆಸುತ್ತಿರುವ ದೃಶ್ಯಗಳಿಂದ ನಾವು ದುಃಖಿತರಾಗಿದ್ದೇವೆ ಮತ್ತು ವಿಚಲಿತರಾಗಿದ್ದೇವೆ. ಅವರು ಕಷ್ಟಪಟ್ಟು ಗಳಿಸಿದ ಪದಕಗಳನ್ನು ಗಂಗಾ ನದಿಗೆ ಎಸೆಯಲು ಯೋಚಿಸುತ್ತಿದ್ದಾರೆ. ಇದಕ್ಕೆ ನಾವು ಹೆಚ್ಚು ಕಳವಳಗೊಂಡಿದ್ದೇವೆ' ಎಂದು 1983 ರ ವಿಶ್ವಕಪ್ ವಿಜೇತ ತಂಡವು ಪತ್ರವನ್ನು ಬಿಡುಗಡೆ ಮಾಡಿದೆ. ಆ ಪದಕಗಳು ವರ್ಷಗಳ ಪ್ರಯತ್ನ ಹಾಗೂ ತ್ಯಾಗದ ಫಲವಾಗಿ ಬಂದಿದೆ. ಅವುಗಳು ರಾಷ್ಟ್ರದ ಹೆಮ್ಮೆ ಎಂದು ಹೇಳಿದೆ.
'ಈ ವಿಷಯದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ನಾವು ಅವರನ್ನು ಒತ್ತಾಯಿಸುತ್ತೇವೆ. ಅವರ ಮಾತುಗಳನ್ನು ಆಲಿಸಿ ಶೀಘ್ರವಾಗಿ ಪರಿಹಾರ ನೀಡಲಾಗುತ್ತದೆಂದು ನಂಬಿದ್ದೇವೆ. ನೆಲದ ಕಾನೂನು ಮೇಲುಗೈ ಸಾಧಿಸಲಿ' ಎಂದು ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ತಂಡ ಮನವಿ ಮಾಡಿದೆ. ಕ್ರಿಕೆಟ್ ಐಕಾನ್ಗಳಾದ ಸುನಿಲ್ ಗವಾಸ್ಕರ್ ಮತ್ತು ಮೊಹಿಂದರ್ ಅಮರನಾಥ್ ಸಹ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ಅನುಮತಿಯಿಲ್ಲದೆ ಹೊಸ ಸಂಸತ್ ಭವನದ ಕಡೆಗೆ ಮೆರವಣಿಗೆ ನಡೆಸಿದ್ದಕ್ಕಾಗಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಬಂಧಿಸಲಾಗಿತ್ತು. ಮಧ್ಯ ದೆಹಲಿಯಲ್ಲಿ ಅವರ ಪ್ರತಿಭಟನಾ ಸ್ಥಳವನ್ನು ತೆರವುಗೊಳಿಸಿದಾಗ ಭಾನುವಾರ ಹಿಂಸಾಚಾರ ನಡೆದಿತ್ತು.












Click it and Unblock the Notifications