ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿರುವ ಜಗನ್ ಸಹೋದರಿ ವೈಎಸ್ ಶರ್ಮಿಳಾ- ಆಂಧ್ರಪ್ರದೇಶದಲ್ಲಿ ಸಹೋದರನಿಗೆ ಸಹೋದರಿ ಸವಾಲ್
ಹೈದರಾಬಾದ್, ಜುಲೈ 03: ವೈಎಸ್ಆರ್ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಶೀಘ್ರದಲ್ಲೇ ಪಕ್ಷಕ್ಕೆ ಸೇರಬಹುದು ಎಂದು ಆಂಧ್ರಪ್ರದೇಶ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಜ್ಯಸಭಾ ಸಂಸದ ಕೆವಿಪಿ ರಾಮಚಂದ್ರ ರಾವ್ ಭಾನುವಾರ ಹೇಳಿದ್ದಾರೆ.
ಭಾನುವಾರ ರಾತ್ರಿ ಗನ್ನವರಂ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಶರ್ಮಿಳಾ ಶೀಘ್ರದಲ್ಲೇ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ವೈಎಸ್ ರಾಜಶೇಖರ್ ರೆಡ್ಡಿ ಅವರ ಮಗಳನ್ನು ಪಕ್ಷಕ್ಕೆ ಸ್ವಾಗತಿಸಲು ನಾವು ಸಿದ್ಧರಿದ್ದೇವೆ' ಎಂದು ತಿಳಿಸಿದ್ದಾರೆ.

ಕೆವಿಪಿ ರಾಮಚಂದ್ರ ರಾವ್ ಅವರು ಭಾನುವಾರ ಗನ್ನವರಂ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಆಂಧ್ರದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ.
ಶರ್ಮಿಳಾ ಅವರು ಈ ಕುರಿತಾಗಿ ತೆಲಂಗಾಣ ಕಾಂಗ್ರೆಸ್ ನಾಯಕ ಜನಾ ರೆಡ್ಡಿ ಅವರೊಂದಿಗೆ ಮಾತನಾಡಿದ್ದಾರೆ ಎಂದು ವರದಿಯಾಗಿದೆ.
ಏತನ್ಮಧ್ಯೆ, ಆಂಧ್ರಪ್ರದೇಶ ಕಾಂಗ್ರೆಸ್ ನಾಯಕ ಮತ್ತು ಸಿಡಬ್ಲ್ಯೂಸಿ ವಿಶೇಷ ಆಹ್ವಾನಿತ ಚಿಂತಾ ಮೋಹನ್ ಅವರು ಶರ್ಮಿಳಾ ಕಾಂಗ್ರೆಸ್ ಸೇರುವ ಬಗೆಗಿನ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ ಎಂದು ವರದಿಗಳು ತಿಳಿಸಿವೆ.

ಡಿಕೆ ಶಿವಕುಮಾರ್ ಭೇಟಿಯಾಗಿರುವ ಶರ್ಮಿಳಾ
ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನ ಬಳಿಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ವೈಎಸ್ ಶರ್ಮಿಳಾ ಭೇಟಿಯಾಗಿದ್ದರು. ಬೆಂಗಳೂರಿನ ಡಿಕೆ ನಿವಾಸದಲ್ಲಿ ಶರ್ಮಿಳಾ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆ ಬಳಿಕ ಶರ್ಮಿಳಾ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವರದಿಗಳು ಪ್ರಕಟಗೊಳ್ಳುತ್ತಲೇ ಇವೆ.
ಶರ್ಮಿಳಾ ಅವರು ಕಾಂಗ್ರೆಸ್ ಸೇರುವ ಮೂಲಕ ತೆಲಂಗಾಣ ರಾಜಕಾರಣದಲ್ಲಿ ಸಕ್ರಿಯರಾಗಲು ಬಯಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಆದರೆ, ಕಾಂಗ್ರೆಸ್ ನಾಯಕರು ಶರ್ಮಿಳಾ ಅವರು ಆಂಧ್ರಪ್ರದೇಶದಲ್ಲಿ ಸಕ್ರಿಯರಾಗಬೇಕೆಂದು ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಶರ್ಮಿಳಾ ಅವರನ್ನು ಆಂಧ್ರದ ರಾಜಕಾರಣದಲ್ಲಿ ಸಕ್ರಿಯರನ್ನಾಗಿ ಮಾಡುವ ಮೂಲಕ ಅವರ ಸಹೋದರ, ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿಗೆ ತಡೆಯೊಡ್ಡಬಹುದು ಎಂದು ವರಿಷ್ಠಿರು ಚಿಂತನೆ ನಡೆಸಿದ್ದಾರೆ.
ತಮ್ಮ ಸಹೋದರನೊಂದಿಗಿನ ಸಂಬಂಧವು ಇನ್ನಷ್ಟು ಹದಗೆಡಿಸಬಹುದು ಎಂಬ ಕಾರಣದಿಂದ ಶರ್ಮಿಳಾ ಹಿಂಜರಿಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ತೆಲಂಗಾಣದಲ್ಲಿ ಶರ್ಮಿಳಾ ಅವರು ತಮ್ಮದೇ ರಾಜಕೀಯ ಪಕ್ಷವನ್ನು ಕಟ್ಟಿದ್ದಾರೆ. ಇದಾದ ಬಳಿಕ ಸಹೋದರ-ಸಹೋದರಿ ಇಬ್ಬರೂ ಪರಸ್ಪರ ಮಾತುಕತೆ ನಡೆಸುತ್ತಿಲ್ಲ ಎಂದು ತಿಳಿದುಬಂದಿದೆ.
ಇದೇ ತಿಂಗಳು ಕಡಪದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ಭಾಗವಹಿಸಲಿದ್ದಾರೆ.












Click it and Unblock the Notifications