ಸೋನಿಯಾ ಗಾಂಧಿ ಭೇಟಿಯಾದ ಜಗನ್ ಸಹೋದರಿ ಶರ್ಮಿಳಾ!
ನವದೆಹಲಿ, ಆಗಸ್ಟ್ 31; ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಹೋದರಿ ವೈ. ಎಸ್. ಶರ್ಮಿಳಾ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭೇಟಿ ಮಾಡಿದರು. ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿರುವಾಗ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಗುರುವಾರ ನವದೆಹಲಿಯಲ್ಲಿ ವೈಎಸ್ರ್ ತೆಲಂಗಾಣ ಪಕ್ಷದ ಮುಖ್ಯಸ್ಥೆ ವೈ. ಎಸ್. ಶರ್ಮಿಳಾ ಸೋನಿಯಾ ಗಾಂಧಿ ಭೇಟಿ ಮಾಡಿದರು. ಕಾಂಗ್ರೆಸ್ ಪಕ್ಷದ ಜೊತೆ ವೈಎಸ್ರ್ ತೆಲಂಗಾಣ ಪಕ್ಷ ವಿಲೀನವಾಗಲಿದೆ ಎಂಬ ಸುದ್ದಿಗಳು ಹಬ್ಬಿವೆ.

ತೆಲಂಗಾಣ ಕಾಂಗ್ರೆಸ್ನ ಮುಖ್ಯಸ್ಥ ರೇವಂತ್ ರೆಡ್ಡಿ, ವೈಎಸ್ರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನುವ ಸುದ್ದಿ ಇದೆ. ಈ ಹಿನ್ನಲೆಯಲ್ಲಿ ಶರ್ಮಿಳಾ ಪತಿಯ ಜೊತೆ ಸೋನಿಯಾ ಗಾಂಧಿ ಭೇಟಿ ಮಾಡಿದರು.
ವೈ. ಎಸ್. ಶರ್ಮಿಳಾ ಆಂಧ್ರ ಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ವಿರುದ್ದ ಕೆಲಸ ಮಾಡಲು ಸಿದ್ಧರಿಲ್ಲ. ಆದ್ದರಿಂದ ತೆಲಂಗಾಣದಲ್ಲಿ ಅವರ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡುವುದು ಬೇಡ ಎನ್ನುವುದು ರೇವಂತ್ ರೆಡ್ಡಿ ಅಭಿಪ್ರಾಯವಾಗಿದೆ.
ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ. ಎಸ್. ರಾಜಶೇಖರ ರೆಡ್ಡಿ ಅಭಿಮಾನಿಗಳಾದ ತೆಲಂಗಾಣದ ಕೆಲವು ಕಾಂಗ್ರೆಸ್ ನಾಯಕರು ವೈಎಸ್ರ್ ತೆಲಂಗಾಣ ಮತ್ತು ಕಾಂಗ್ರೆಸ್ ಪಕ್ಷ ವಿಲೀನದ ಪರವಾಗಿದ್ದಾರೆ.
ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ವೈಎಸ್ರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿ ಕಾಂಗ್ರೆಸ್ ಟಿಕೆಟ್ನಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದಾರೆ.
ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರೋಧದ ನಡುವೆಯೇ ತೆಲಂಗಾಣ ವಿಧಾನಸಭೆ ಚುನಾವಣೆಗಾಗಿಯೇ ವೈ. ಎಸ್. ಶರ್ಮಿಳಾ ವೈಎಸ್ರ್ ತೆಲಂಗಾಣ ಎಂಬ ಪಕ್ಷವನ್ನು ಸ್ಥಾಪನೆ ಮಾಡಿದರು. ರಾಜ್ಯದಲ್ಲಿ ಪಾದಯಾತ್ರೆ ನಡೆಸುವ ಮೂಲಕ ಚುನಾವಣೆ ಸಿದ್ಧತೆ ಆರಂಭಿಸಿದ್ದಾರೆ.
ಸೋನಿಯಾ ಗಾಂಧಿ ಭೇಟಿ ಬಳಿಕ ಮಾತನಾಡಿದ ವೈ. ಎಸ್. ಶರ್ಮಿಳಾ, "ನಾನು ತೆಲಂಗಾಣ ರಾಜ್ಯದ ಜನರ ಒಳಿತಿಗಾಗಿ ಸದಾ ಕೆಲಸ ಮಾಡುತ್ತೇನೆ. ಕೆಸಿಆರ್ ಕೌಂಟ್ ಡೌನ್ ಶುರುವಾಗಿದೆ ಎಂದು ಮಾತ್ರ ನಾನು ಹೇಳಬಲ್ಲೆ" ಎಂದರು.
ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿ ಮಾಡುತ್ತಿದೆ. ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿ ರೇವಂತ್ ರೆಡ್ಡಿ ಸಲಹೆಗಳನ್ನು ಪಡೆಯುತ್ತಿದ್ದಾರೆ.
ಕೆಲವು ದಿನಗಳ ಹಿಂದೆ ವೈಎಸ್ರ್ ತೆಲಂಗಾಣ ಪಕ್ಷದ ಮುಖ್ಯಸ್ಥೆ ವೈ. ಎಸ್. ಶರ್ಮಿಳಾ ಡಿ. ಕೆ. ಶಿವಕುಮಾರ್ ಭೇಟಿಯಾಗಿದ್ದರು. ಕರ್ನಾಟಕ ಚುನಾವಣೆಯಲ್ಲಿ ಜಯಗಳಿಸಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷ ಪಕ್ಕದ ತೆಲಂಗಾಣದಲ್ಲಿಯೂ ಸರ್ಕಾರ ರಚನೆ ಮಾಡಲು ತಂತ್ರ ರೂಪಿಸುತ್ತಿದೆ.
ಕಾಂಗ್ರೆಸ್ ಪಕ್ಷದ ಜೊತೆ ವೈಎಸ್ರ್ ತೆಲಂಗಾಣ ಪಕ್ಷ ವಿಲೀನವಾದರೆ ತೆಲಂಗಾಣ ಚುನಾವಣೆಯಲ್ಲಿ ಸಹಾಯಕವಾಗಲಿದೆ ಎಂದು ವೈ. ಎಸ್. ಶರ್ಮಿಳಾ ನಿರೀಕ್ಷಿಸಿದ್ದಾರೆ. ವಿಲೀನ ಪ್ರಕ್ರಿಯೆ ವಿಳಂಬವಾದಲ್ಲಿ ವಿರೋಧ ಪಕ್ಷಗಳಿಗೆ ಸಹಾಯಕವಾಗಲಿದೆ ಎಂದು ಅಂದಾಜಿಸಿದ್ದಾರೆ.
ಸದ್ಯ ತೆಲಂಗಾಣದಲ್ಲಿ ಬಿಆರ್ಎಸ್ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಮುಖ್ಯಮಂತ್ರಿ. ವಿರೋಧ ಪಕ್ಷಗಳ ಪ್ರಕಾರ ಅವರು ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್ ರಾಜ್ಯದ ಚುನಾವಣೆಯಲ್ಲಿ ಅಧಿಕಾರ ಹಿಡಿಯಬೇಕು ಎಂದು ತಯಾರಿ ನಡೆಸುತ್ತಿವೆ.












Click it and Unblock the Notifications