ಸೇನೆ ಗುಂಡಿಗೆ 18 ಜನರು ಬಲಿ, ಕಾದ ಕಬ್ಬಿಣವಾದ ಮ್ಯಾನ್ಮಾರ್!
1 ತಿಂಗಳಿಂದಲೂ ಕೊತ ಕೊತ ಕುದಿಯುತ್ತಿರುವ ಮ್ಯಾನ್ಮಾರ್ನಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗಿದೆ. ಪ್ರತಿಭಟನಾಕಾರರ ಮೇಲೆ ಸೇನೆ ಹಾರಿಸಿದ ಗುಂಡಿಗೆ 18 ಹೋರಾಟಗಾರರು ಮೃತಪಟ್ಟಿದ್ದು, ನೂರಾರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೇನೆಯ ಆಡಳಿತ ವಿರೋಧಿಸಿ ಹಲವೆಡೆ ಹೋರಾಟಗಳು ನಡೆಯುತ್ತಿವೆ. ದಿನದಿಂದ ದಿನಕ್ಕೆ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು, ದಿಢೀರ್ ಸೇನೆ ನಡೆಸಿರುವ ದಾಳಿಗೆ 18 ಹೋರಾಟಗಾರರು ಬಲಿಯಾಗಿದ್ದಾರೆ.
ಮ್ಯಾನ್ಮಾರ್ ದಕ್ಷಿಣ ಕರಾವಳಿ ಕೇಂದ್ರವಾದ ದಾವೇ ಭಾಗದಲ್ಲಿ ಭದ್ರತಾಪಡೆಗಳು ನಡೆಸಿದ ದಾಳಿ ಹಾಗೂ ಯಾಂಗೂನ್ ಬಳಿಯ ಬಾಗೊದಲ್ಲಿ ನಡೆದ ಸೇನಾ ದಾಳಿಯಲ್ಲಿ ಸುಮಾರು 18 ಜನರು ಪ್ರಾಣ ಬಿಟ್ಟಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದವರನ್ನ ಚದುರಿಸಲು ಬಲಪ್ರಯೋಗ ಮಾಡಿದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಫೆಬ್ರವರಿ 1ರಂದು ಮ್ಯಾನ್ಮಾರ್ ಸೇನೆ ಪ್ರಧಾನಿ ಸೂಕಿ ನಿವಾಸಕ್ಕೆ ನುಗ್ಗಿತ್ತು.
ಮ್ಯಾನ್ಮಾರ್ ದಂಗೆಯಲ್ಲಿ ಚೀನಾ ಕೈವಾಡ..? ತಜ್ಞರು ಹೇಳೋದು ಏನು ಗೊತ್ತಾ..?
ಆ ಬಳಿಕ ಮ್ಯಾನ್ಮಾರ್ ಪ್ರಧಾನಿ ಆಂಗ್ ಸಾನ್ ಸೂಕಿ ಸೇರಿದಂತೆ ಸೂಕಿ ಸಂಪುಟದ ಸಚಿವರು ಮತ್ತು ಸಂಸದರನ್ನು ಗೃಹ ಬಂಧನದಲ್ಲಿ ಇರಿಸಿತ್ತು. ಇದಾದ ಬಳಿಕ ಮ್ಯಾನ್ಮಾರ್ ಅಕ್ಷರಶಃ ನರಕವಾಗಿದ್ದು, ಸೇನೆ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ.
ಮ್ಯಾನ್ಮಾರ್ ಸೇನೆ ವಿರುದ್ಧ ಆಕ್ರೋಶ
ನಾಗರಿಕರನ್ನು ಕೊಂದು ಹಾಕಿರುವ ಮ್ಯಾನ್ಮಾರ್ ಸೇನೆ ವಿರುದ್ಧ ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅದರಲ್ಲೂ ಪ್ರಜಾಪ್ರಭುತ್ವವಾದಿ ರಾಷ್ಟ್ರಗಳು ಮ್ಯಾನ್ಮಾರ್ ಮಿಲಿಟರಿ ಕ್ರಮವನ್ನು ತೀವ್ರವಾಗಿ ಟೀಕಿಸಿವೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಅಲ್ಲಿನ ಸೇನಾಧಿಕಾರಿಗಳು, ಪ್ರತಿಭಟನೆ ನಡೆಸುತ್ತಿರುವ ಜನರ ನಿಯಂತ್ರಣ ಹಾಗೂ ಹೋರಾಟಗಾರನ್ನು ಚದುರಿಸಲು ಬಲಪ್ರಯೋಗ ಮಾಡುತ್ತಿದ್ದಾರೆ. ಹೀಗೆ ಬಲಪ್ರಯೋಗ ಮಾಡಿದ ಸಂದರ್ಭದಲ್ಲಿ 18 ಜನ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹಲವರು ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಆವರಿಸಿದೆ.
ಗಲ್ಲಿಗೂ ನುಗ್ಗಿದೆ ಮ್ಯಾನ್ಮಾರ್ ಸೇನೆ..!
ಸೇನಾ ಕ್ರಾಂತಿ ಪರ ಹಾಗೂ ವಿರುದ್ಧವಾಗಿ ಹೋರಾಟಗಳು ಭುಗಿಲೆದ್ದಿರುವುದು ಮ್ಯಾನ್ಮಾರ್ನ ತತ್ತರಿಸುವಂತೆ ಮಾಡಿದೆ. ಆದರೆ ಇದನ್ನ ನೋಡಿ ತಣ್ಣಗೆ ಕೂರೋಕೆ ಮ್ಯಾನ್ಮಾರ್ ಈಗ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ. ಮೇಲಾಗಿ ಅಲ್ಲೊಂದು ಸರ್ಕಾರವೇ ಇಲ್ಲ. ಎಲ್ಲವನ್ನೂ ಸೇನಾಧಿಕಾರಿಗಳು ಬಿಗಿ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ಹೀಗಾಗಿ ಪ್ರತಿಭಟನೆ ಮತ್ತು ಹೋರಾಟ ಹತ್ತಿಕ್ಕಲು ಮ್ಯಾನ್ಮಾರ್ನ ಸೇನೆ ಗಲ್ಲಿ ಗಲ್ಲಿಗಳಿಗೂ ಎಂಟ್ರಿ ಕೊಟ್ಟಿದೆ. ಭಾರಿ ಪ್ರಮಾಣದ ಯುದ್ಧ ಪರಿಕರಗಳನ್ನ ತೋರಿಸಿ ಜನರನ್ನ ಬೆದರಿಸುವ ತಂತ್ರ ಅನುಸರಿಸುತ್ತಿದೆ. ಆದರೂ ಜನ ಭಯಪಡದೆ ಹೋರಾಟಕ್ಕೆ ಸಾಥ್ ನೀಡುತ್ತಿದ್ದಾರೆ.
ಸೇನೆಯ ವಿರುದ್ಧ ಮೊಳಗಿದ ಆಕ್ರೋಶ, ಬೀದಿಗಿಳಿದ ಹೋರಾಟಗಾರರಿಂದ ಹಿಂಸಾಚಾರ
ಚೀನಾ ಕೈವಾಡ ಸಾಧ್ಯವೇ ಇಲ್ಲ..!
ಮ್ಯಾನ್ಮಾರ್ ಸೇನಾ ದಂಗೆ ಸ್ವಯಂಪ್ರೇರಿತವಾಗಿದ್ದು, ಯಾರದ್ದೇ ಕೈವಾಡ ಇಲ್ಲ ಎನ್ನುತ್ತಿದ್ದಾರೆ ತಜ್ಞರು. ಸದ್ಯದ ಸ್ಥಿತಿಯಲ್ಲಿ ಚೀನಾ ಮ್ಯಾನ್ಮಾರ್ ವಿಚಾರವಾಗಿ ಮೂಗು ತೂರಿಸಲು ಸಾಧ್ಯವಿಲ್ಲ. ಈಗಾಗಲೇ ಚೀನಾ ವಿರುದ್ಧ ಅಕ್ಕಪಕ್ಕದ ರಾಷ್ಟ್ರಗಳು ಕೋಪಗೊಂಡಿವೆ. ಇಂತಹ ಸಂದರ್ಭದಲ್ಲಿ ಚೀನಾ ಮ್ಯಾನ್ಮಾರ್ ವಿಚಾರಕ್ಕೆ ಕೈಹಾಕುವ ಸಾಹಸ ಮಾಡುವುದಿಲ್ಲ ಎನ್ನುತ್ತಿದ್ದಾರೆ ತಜ್ಞರು. ಇದು ಆತಂರಿಕವಾಗಿ ಮೂಡಿದ ಅಸಮಾಧಾನದ ಫಲ. ಆದರೆ ಮ್ಯಾನ್ಮಾರ್ ಪ್ರಜೆಗಳಿಗೆ ತಪ್ಪು ಸಂದೇಶ ನೀಡಲಾಗುತ್ತಿದೆ ಎಂದು ತಜ್ಞರು ಅಭಿಪ್ರಾಯ ಹೊರಹಾಕಿದ್ದಾರೆ. ತನ್ನ ಬಗ್ಗೆ ಇಷ್ಟೆಲ್ಲಾ ಆರೋಪ ಕೇಳಿಬರುತ್ತಿದ್ದರೂ ಚೀನಾ ಮಾತ್ರ ಪ್ರತಿಕ್ರಿಯೆ ನೀಡಿಲ್ಲ.
ಮಿಲಿಟರಿ ಆಡಳಿತ ಶುರು..!
ಮ್ಯಾನ್ಮಾರ್ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ.
ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?
ಮ್ಯಾನ್ಮಾರ್ನಲ್ಲಿ 2020ರ ನವೆಂಬರ್ನಲ್ಲಿ ಚುನಾವಣೆ ನಡೆದಿತ್ತು. 75 ವರ್ಷದ ಸೂಕಿ ನೇತೃತ್ವದಲ್ಲಿ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಚುನಾವಣೆಯಲ್ಲಿ ಮ್ಯಾನ್ಮಾರ್ ಸಂಸತ್ತಿನ 642 ಸ್ಥಾನಗಳ ಪೈಕಿ ಸೂಕಿ ನೇತೃತ್ವದ ಎನ್ಎಲ್ಡಿ ಪಕ್ಷ 396 ಸ್ಥಾನ ಪಡೆದಿತ್ತು. ಅಂದಹಾಗೆ ಪ್ರಜಾಪ್ರಭುತ್ವದ ಪರ ಗಟ್ಟಿಯಾಗಿ ನಿಂತು ಹೋರಾಟ ನಡೆಸಿದ್ದವರು ಆಂಗ್ ಸಾನ್ ಸೂಕಿ. ಮ್ಯಾನ್ಮಾರ್ನಲ್ಲಿ ಮಿಲಿಟರಿ ಆಡಳಿತ ವಿರುದ್ಧ ಸತತ ಹೋರಾಟ ನಡೆಸಿದ್ದ ಸೂಕಿಗೆ ಇದೀಗ ಹಿನ್ನಡೆಯಾಗಿದೆ. ಸೂಕಿ ಬಂಧನ ಹಲವು ಅನುಮಾನಗಳಿಗೂ ಕಾರಣವಾಗಿದೆ.