ಲಂಕಾ ಆರ್ಥಿಕ ಬಿಕ್ಕಟ್ಟು: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: ವಾಹನಗಳಿಗೆ ಬೆಂಕಿ, ಪೊಲೀಸರಿಗೆ ಗಾಯ
ಕೊಲಂಬೊ ಏಪ್ರಿಲ್ 01: ಹದಗೆಡುತ್ತಿರುವ ಆರ್ಥಿಕ ಬಿಕ್ಕಟ್ಟು ಪರಿಹರಿಸಬೇಕು ಎಂದು ಒತ್ತಾಯಿಸಿ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರ ನಿವಾಸದ ಹೊರಗೆ ನಡೆದ ಪ್ರತಿಭಟನೆ ನಿನ್ನೆ ಹಿಂಸಾಚಾರಕ್ಕೆ ತಿರುಗಿದೆ. ಇದರಿಂದ ಕೊಲಂಬೊದ ಹಲವು ಭಾಗಗಳಲ್ಲಿ ವಿಧಿಸಲಾದ ರಾತ್ರಿಯ ಕರ್ಫ್ಯೂ ಅನ್ನು ಇಂದು ಬೆಳಿಗ್ಗೆ 5 ಗಂಟೆಗೆ ಹಿಂತೆಗೆದುಕೊಳ್ಳಲಾಯಿತು. ಜೊತೆಗೆ ಪೊಲೀಸರು ರಾಜಪಕ್ಸೆ ನಿವಾಸದ ಮುಂದೆ ನಿನ್ನೆ (ಮಾರ್ಚ್ 31) ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 45 ಜನರನ್ನು ಬಂಧಿಸಿದ್ದಾರೆ.
ಜೊತೆಗೆ ಪ್ರತಿಭಟನೆ ವೇಳೆ ಪೊಲೀಸರಿಗೂ ಹಾಗೂ ಪ್ರತಿಭಟನಾಕಾರರಿಗೂ ವಾಗ್ವಾದ ನಡೆದು ಗಲಾಟೆ ಹಿಂಸಾಚಾರಕ್ಕೆ ತಿರುಗಿದೆ. ಈ ವೇಳೆ ಉದ್ರಿಕ್ತ ಪ್ರತಿಭಟನಾಕಾರರು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು ಐವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ ಕೊಲಂಬೊ ಉತ್ತರ, ದಕ್ಷಿಣ, ಕೊಲಂಬೊ ಸೆಂಟ್ರಲ್, ನುಗೆಗೋಡ, ಮೌಂಟ್ ಲ್ಯಾವಿನಿಯಾ ಮತ್ತು ಕೆಲನಿಯಾ ಪೊಲೀಸ್ ವಿಭಾಗಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ನಿನ್ನೆ ರಾಜಧಾನಿಯಲ್ಲಿರುವ ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಪ್ರಯೋಗಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ವಿಡಿಯೋಗಳು ಪುರುಷರು ಮತ್ತು ಮಹಿಳೆಯರು ಮನೆಗೆ ಮುತ್ತಿಗೆ ಹಾಕಲು ಕೂಗುತ್ತಿರುವುದನ್ನು ತೋರಿಸಿವೆ. ಜೊತೆಗೆ ಅಧ್ಯಕ್ಷ ರಾಜಪಕ್ಸೆ ಹಾಗೂ ಅವರ ಕುಟುಂಬದ ಎಲ್ಲಾ ಸದಸ್ಯರು ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದಾರೆ.

ದೇಶವು ಸ್ವಾತಂತ್ರ್ಯದ ನಂತರ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ವಾರಗಳಿಂದ ಆಹಾರ, ಅಗತ್ಯ ವಸ್ತುಗಳು, ಇಂಧನ ಮತ್ತು ಅನಿಲದ ಕೊರತೆಯನ್ನು ಜನ ಎದುರಿಸುತ್ತಿದ್ದಾರೆ. ಇಂಧನವನ್ನು ಆಮದು ಮಾಡಿಕೊಳ್ಳಲು ವಿದೇಶಿ ಕರೆನ್ಸಿಯ ಕೊರತೆಯಿಂದಾಗಿ ದೇಶದ ಹಲವು ಭಾಗಗಳು 13 ಗಂಟೆಗಳವರೆಗೆ ವಿದ್ಯುತ್ ಕಡಿತದಿಂದ ಹೆಣಗಾಡುತ್ತಿವೆ.

ಆರ್ಥಿಕ ಮುಗ್ಗಟ್ಟು, ವಿದೇಶಿ ವಿನಿಮಯ ಕೊರತೆ ಕಾರಣ ವಿದೇಶಗಳಿಂದ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಲಾಗದ ಸ್ಥಿತಿಗೆ ಶ್ರೀಲಂಕಾ ಬಂದು ತಲುಪಿದೆ. ಮಾತ್ರವಲ್ಲದೇ ಆಸ್ಪತ್ರೆಗಳು ಶಸ್ತ್ರಚಿಕಿತ್ಸೆಯನ್ನೇ ಸ್ಥಗಿತಗೊಳಿಸುವ ಹಂತಕ್ಕೆ ತಲುಪಿವೆ. ಅರಿವಳಿಕೆ ನೀಡಲು ಬಳಸುವ ಕೆಲ ಔಷಧ, ಶಸ್ತ್ರಚಿಕಿತ್ಸೆಗೆ ಬೇಕಾದ ಉಪಕರಣ ಮತ್ತು ಕೆಲ ಔಷಧಗಳು ಅಲಭ್ಯವಾಗಿರುವ ಕಾರಣ, ದಾಖಲಾಗಿರುವ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಕೈಗೊಳ್ಳದೇ ಇರುವ ನಿರ್ಧಾರ ಮಾಡಲಾಗಿದೆ.

ತನ್ನ ಬಹುತೇಕ ಅಗತ್ಯಕ್ಕೆ ವಿದೇಶಗಳನ್ನೇ ನಂಬಿರುವ ಶ್ರೀಲಂಕಾ ಇದೀಗ ಸಾಲದ ಸುಳಿಯಲ್ಲಿ ಮುಳುಗಿದೆ. ಆದಾಯದ ಮೂಲವಾದ ಪ್ರವಾಸೋದ್ಯಮ ಮಲಗಿದೆ. ಪರಿಣಾಮ ವಿದೇಶಿ ವಿನಿಮಯ ಪೂರ್ತಿ ಕರಗಿ ಹೋಗಿದೆ. ವಿದೇಶಗಳಿಂದ ವಸ್ತುಗಳ ಖರೀದಿಗೂ ಹಣವಿಲ್ಲದಾಗಿದೆ. ಪರಿಣಾಮ ದೇಶದಲ್ಲಿ ಪ್ರತಿಯೊಂದು ವಸ್ತುವಿನ ಬೆಲೆಯೂ ಗಗನಕ್ಕೇರಿದ್ದು, ಜನಸಾಮಾನ್ಯರ ಬದುಕು ಹೈರಾಣಾಗಿದೆ. ಇದರಿಂದಾಗಿ ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ಮಾಡಲಾಗುತ್ತಿದೆ. ಆರ್ಥಿಕ ಬಿಕ್ಕಟ್ಟು ಪರಿಹರಿಸಬೇಕು ಇಲ್ಲವಾದರೆ ಗೋತಬಯ ರಾಜಪಕ್ಸೆ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಜನ ಒತ್ತಾಯಿಸುತ್ತಿದ್ದಾರೆ.












Click it and Unblock the Notifications