Breaking News: ಉದ್ಯಮಿ ಮೆಹುಲ್ ಚೋಕ್ಸಿ ಜಾಮೀನು ಅರ್ಜಿ ತಿರಸ್ಕರಿಸಿದ ಮ್ಯಾಜಿಸ್ಟ್ರೇಟ್ ಕೋರ್ಟ್
ನವದೆಹಲಿ, ಜೂನ್ 03: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಬಹು ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿಗೆ ಅಕ್ರಮವಾಗಿ ದೇಶವನ್ನು ಪ್ರವೇಶಿಸಿದ ಪ್ರಕರಣದಲ್ಲಿ ಜಾಮೀನು ನೀಡುವುದಕ್ಕೆ ಡೊಮಿನಿಕಾ ಮ್ಯಾಜಿಸ್ಟ್ರೇಟ್ ಕೋರ್ಟ್ ನಿರಾಕರಿಸಿದೆ.
ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಹೈಕೋರ್ಟ್ ಮೊರೆ ಹೋಗುವುದಾಗಿ ಉದ್ಯಮಿ ಮೆಹುಲ್ ಚೋಕ್ಸಿ ಪರ ವಕೀಲ ವಿಜಯ್ ಅಗರ್ವಾಲ್ ತಿಳಿಸಿದ್ದಾರೆ. ಇದಕ್ಕೂ ಮೊದಲು ನಡೆದ ಹೈಕೋರ್ಟ್ ವಿಚಾರಣೆಯಲ್ಲಿ ಉದ್ಯಮಿ ಮೆಹುಲ್ ಚೋಕ್ಸಿ ಅನ್ನು ಭಾರತಕ್ಕೆ ಗಡಿಪಾರು ಮಾಡಲಾಗುವುದು ಎಂದು ಡೊಮಿನಿಕಾ ಸರ್ಕಾರ ತಿಳಿಸಿತ್ತು.
ಉದ್ಯಮಿ ಮೆಹುಲ್ ಚೋಕ್ಸಿ ಬಂಧನದ ಹಿಂದೆ ಪ್ರಣಯ ಪ್ರವಾಸದ ಕಥೆ!
ಭಾರತದ ಬ್ಯಾಂಕಿಗೆ ವಂಚಿಸಿರುವ 62 ವರ್ಷದ ಆರೋಪಿ ಸಲ್ಲಿಸಿರುವ ಅರ್ಜಿ ಸಮರ್ಥನೀಯಲ್ಲ. ನ್ಯಾಯಾಲಯವು ಈ ಅರ್ಜಿಯನ್ನು ವಿಚಾರಣೆಗೊಳಪಡಿಸಬಾರದು ಎಂದು ಡೊಮಿನಿಕಾ ಪಬ್ಲಿಕ್ ಪ್ರಾಸಿಕ್ಯೂಷನ್ ವಾದ ಮಂಡಿಸಿದೆ. ಭಾರತವು ಈಗಾಗಲೇ ಅವರನ್ನು ಗಡೀಪಾರು ಮಾಡುವಂತೆ ಕೋರಿದ್ದು, ಮೆಹುಲ್ ಚೋಕ್ಸಿ ಭಾರತೀಯ ಪ್ರಜೆಯಾಗಿ ಮುಂದುವರಿಯಲಿದ್ದಾರೆ ಎಂದು ಡೊಮಿನಿಕಾ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು.
ಮ್ಯಾಜಿಸ್ಟ್ರೇಟ್ ಕೋರ್ಟಿಗೆ ಹಾಜರುಪಡಿಸಿ ಎಂದಿದ್ದ ಹೈಕೋರ್ಟ್:
ಉದ್ಯಮಿ ಮೆಹುಲ್ ಚೋಕ್ಸಿ ಅನ್ನು ಅಕ್ರಮವನ್ನು ಬಂಧಿಸಲಾಗಿದ್ದು, ಅದಾಗಿ 72 ಗಂಟೆಗಳಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಎದುರಿಗೆ ಹಾಜರುಪಡಿಸಬೇಕಿತ್ತು. ಆದರೆ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿಲ್ಲ ಎನ್ನುವುದು ದೃಢಪಟ್ಟಿದೆ ಎಂದು ಚೋಕ್ಸಿ ಪರ ವಕೀಲ ವಿಜಯ್ ಅಗರ್ವಾಲ್ ತಿಳಿಸಿದ್ದಾರೆ. ಇದರ ಜೊತೆಗೆ ಸ್ಥಳೀಯ ಸಮಯ 4 ಗಂಟೆಯೊಳಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸುವಂತೆ ನೀಡಿರುವ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿದ್ದಾರೆ. ಭಾರತೀಯ ಸರ್ಕಾರ ಹಾಗೂ ಗಡೀಪಾರು ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆದಿಲ್ಲ ಎನ್ನುವ ಬಗ್ಗೆ ಹಲವು ಸ್ಥಳೀಯ ಮಾಧ್ಯಮಗಳ ವರದಿಗಳ ಬಗ್ಗೆ ಅವರು ಮಾತನಾಡಿದ್ದರು.