ಹಾಸನದಲ್ಲಿ ಕಾರ್ಯಕರ್ತನನ್ನೇ ಕಣಕ್ಕಿಳಿಸಲು ಪಟ್ಟುಹಿಡಿದ ಎಚ್ಡಿಕೆ: ನಾನು ಸ್ಪರ್ಧಿಸುವುದೇ ಇಲ್ಲವೆಂದ ರೇವಣ್ಣ- ಇನ್ಸೈಡ್ ಸ್ಟೋರಿ
ಬೆಂಗಳೂರು, ಏಪ್ರಿಲ್ 10: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪುತ್ರರಾದ ಹೆಚ್ ಡಿ ಕುಮಾರಸ್ವಾಮಿ ಮತ್ತು ಹೆಚ್ ಡಿ ರೇವಣ್ಣ ನಡುವಿನ ಭಿನ್ನಾಭಿಪ್ರಾಯ ಉಲ್ಬಣಗೊಂಡಿದ್ದು, ಹಾಸನ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಪಟ್ಟು ಹಿಡಿದಿದ್ದಾರೆ.
'ಕ್ಷೇತ್ರದಲ್ಲಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದ ಕಾರ್ಯಕರ್ತರೊಬ್ಬರಿಗೆ ಟಿಕೆಟ್ ನೀಡಲಾಗುವುದು' ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳುತ್ತಿದ್ದಾರೆ.

ಭವಾನಿ ರೇವಣ್ಣಗೆ ಟಿಕೆಟ್ ನೀಡುವುದರ ಕುರಿತು ಮಾತನಾಡಿದ ಕುಮಾರಸ್ವಾಮಿ ಈ ವಿಚಾರವನ್ನು ಮತ್ತೆ ಪ್ರಸ್ತಾಪಿಸಿದ್ದಾರೆ.
'ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುವುದು ಸರಿಯಲ್ಲ. ಟಿಕೆಟ್ ವಿಚಾರವಾಗಿ ಚರ್ಚಿಸಿ ಇತ್ಯರ್ಥ ಪಡಿಸುತ್ತೇವೆ. ಎಲ್ಲವೂ ಸರಿ ಹೋಗುತ್ತದೆ' ಎಂದು ಅವರು ಭರವಸೆ ನೀಡಿದರು.
ಇದೇ ವೇಳೆ ತಮ್ಮ ಪತ್ನಿ ಭವಾನಿ ಅವರಿಗೆ ಹಾಸನ ಟಿಕೆಟ್ ನೀಡದಿದ್ದರೆ ಹೊಳೆನರಸೀಪುರದಿಂದ ಸ್ಪರ್ಧಿಸುವುದಿಲ್ಲ ಎಂದು ರೇವಣ್ಣ ಬೆದರಿಕೆ ಹಾಕಿದ್ದಾರೆ ಎಂದು 'ಡೆಕ್ಕನ್ ಹೆರಾಲ್ಡ್' ವರದಿ ಮಾಡಿದೆ.
ರೇವಣ್ಣ ಶುಕ್ರವಾರ ತಡರಾತ್ರಿ ಹಾಸನದಲ್ಲಿ ತಮ್ಮ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸರಣಿ ಸಭೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ರೇವಣ್ಣ ಮತ್ತು ಭವಾನಿ ಕ್ರಮವಾಗಿ ಹೊಳೆನರಸೀಪುರ ಮತ್ತು ಹಾಸನದಿಂದ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆಯೂ ಚರ್ಚೆ ನಡೆದಿದೆ ಎಂದೂ ವರದಿಯಾಗಿದೆ. ಪಕ್ಷದ ವರಿಷ್ಠ ಹೆಚ್ ಡಿ ದೇವೇಗೌಡರು ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ದೇವೇಗೌಡರ ರಂಗಪ್ರವೇಶ
ಪುತ್ರರ ನಡುವಿನ ಭಿನ್ನಾಭಿಪ್ರಾಯ ಹೆಚ್ಚಾಗಿದ್ದರ ಪರಿಣಾಮವಾಗಿ ಜೆಡಿಎಸ್ ವರಿಷ್ಠ ದೇವೇಗೌಡರು ರಂಗಪ್ರವೇಶ ಮಾಡಿದ್ದಾರೆ.
ಭವಾನಿ ರೇವಣ್ಣ ಅವರಿಗೆ ಟಿಕೆಟ್ ನಿರಾಕರಿಸಿದರೆ ಹಾಸನದಿಂದ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಹೆಚ್ ಡಿ ರೇವಣ್ಣ ಕುಟುಂಬ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ಶನಿವಾರ ಹಾಸನದ ಮುಖಂಡರ ಜೊತೆ ಸಭೆ ನಡೆಸಿ ಯಾವುದೇ ವೇದಿಕೆಯಲ್ಲಿ ಈ ಬಗ್ಗೆ ಚರ್ಚೆ ನಡೆಸದಂತೆ ಒತ್ತಾಯಿಸಿದ್ದಾರೆ.
ಹಾಸನ ವಿಧಾನಸಭಾ ಟಿಕೆಟ್ ವಿಚಾರದಲ್ಲಿ ಪಕ್ಷದ ನಿರ್ಧಾರವನ್ನು ಪಾಲಿಸುವಂತೆ ರೇವಣ್ಣ ಮತ್ತು ಪುತ್ರರಿಗೆ ಸೂಚಿಸಿದರು. ಈ ಬೆಳವಣಿಗೆಯನ್ನು 'ಡೆಕ್ಕನ್ ಹೆರಾಲ್ಡ್' ಖಚಿತಪಡಿಸಿರುವ ಪಕ್ಷದ ಹಿರಿಯ ಮುಖಂಡರೊಬ್ಬರು, 'ದೇವೇಗೌಡರು ರೇವಣ್ಣ ಮತ್ತು ಪುತ್ರರು ಸೇರಿದಂತೆ ಎಲ್ಲರೂ ಮೌನವಾಗಿರುವಂತೆ ಒತ್ತಾಯಿಸಿದ್ದಾರೆ ಮತ್ತು ಸಮಸ್ಯೆಯನ್ನು ಜಟಿಲಗೊಳಿಸಬೇಡಿ' ಎಂದು ಹೇಳಿದ್ದಾರೆ.
'ಹಾಸನಕ್ಕೆ ಪಕ್ಷವು ಈಗಾಗಲೇ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದು, ಅದನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ' ಎಂದು ದೇವೇಗೌಡರು ತಿಳಿಸಿದ್ದಾರೆ.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 2023ರ ಚುನಾವಣೆಯ ಅಭ್ಯರ್ಥಿಗಳು ಮತ್ತು ಟಿಕೆಟ್ ಆಕಾಂಕ್ಷಿಗಳೊಂದಿಗೆ ಆನ್ಲೈನ್ ಸಭೆ ನಡೆಸಿ ಚುನಾವಣಾ ನೀತಿ ಸಂಹಿತೆ ಕುರಿತು ಮಾಹಿತಿ ನೀಡಿದ್ದಾರೆ.
ಕರ್ನಾಟಕ ವಿಧಾನಸಭೆಗೆ ಮೇ 10 ರಂದು ಮತದಾನ ನಡೆಯಲಿದ್ದು ಮೂರು ದಿನಗಳ ಬಳಿಕ ಫಲಿತಾಂಶ ಹೊರಬರಲಿದೆ. ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, 166 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಬೇಕಿದೆ.












Click it and Unblock the Notifications