ಮತ್ತೆ ಹರಿಯಿತು ನೆತ್ತರು, ಸೇನಾಧಿಕಾರಿಗಳ ಹತ್ಯೆಗೆ ಪಣತೊಟ್ಟ ಪ್ರಜೆಗಳು!
ಕೈಯಲ್ಲಿ ಚಾಕು, ಗನ್, ಹತ್ಯಾರಗಳು. ಮನೆ ಮನೆಯಲ್ಲೂ ಹೊತ್ತಿದ ದ್ವೇಷದ ಬೆಂಕಿ. ಅಂದಹಾಗೆ ಮ್ಯಾನ್ಮಾರ್ ಸದ್ಯದ ಸ್ಥಿತಿ ಹೀಗಿದೆ. ಸೇನಾ ದಂಗೆ ವಿರುದ್ಧ ಮ್ಯಾನ್ಮಾರ್ನಲ್ಲಿ ಹೊತ್ತಿರುವ ಆಕ್ರೋಶ ತಣ್ಣಗಾಗುತ್ತಿಲ್ಲ. ಜನರು ಸೈಲೆಂಟ್ ಆಗ್ತಿಲ್ಲ, ಅಲ್ಲಿನ ಸೇನಾಧಿಕಾರಿಗಳು ಜನರನ್ನು ಕೊಲ್ಲುವುದನ್ನ ಬಿಡ್ತಿಲ್ಲ. ಹೀಗಾಗಿಯೇ ಜನ ಕಾನೂನನ್ನ ಕೈಗೆ ತೆಗೆದುಕೊಂಡಿದ್ದಾರೆ. ಈವರೆಗೆ 600ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿಸಿರುವ ಸೇನಾಧಿಕಾರಿಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಕೈಯಲ್ಲಿ ವೆಪನ್ಸ್ ಹಿಡಿದುಕೊಂಡು ಸೇನೆ ವಿರುದ್ಧ ತಿರುಗಿಬಿದ್ದಿದ್ದಾರೆ.
ಈ ಕಾರಣಕ್ಕೆ ಪರಿಸ್ಥಿತಿ ಮತ್ತಷ್ಟು ಸೂಕ್ಷ್ಮವಾಗಿದ್ದು, ಹಿಂಸೆ ಮತ್ತಷ್ಟು ಭಾಗಗಳಿಗೆ ಹರಡುವ ಸಾಧ್ಯತೆ ದಟ್ಟವಾಗಿದೆ. ಫೆಬ್ರವರಿ 1ರಂದು ದಂಗೆ ಎದ್ದ ಮ್ಯಾನ್ಮಾರ್ ಮಿಲಿಟರಿ ದೇಶವನ್ನೇ ಅಲುಗಾಡಿಸಿದೆ. ಅಷ್ಟಕ್ಕೂ ಈವರೆಗೂ ಸತ್ತವರ ಸಂಖ್ಯೆ 600ನ್ನ ಮೀರಿಸಿದ್ದು ನಾಪತ್ತೆಯಾದವರ ಸಂಖ್ಯೆ ದೃಢವಾಗಿಲ್ಲ. ಮತ್ತೊಂದ್ಕಡೆ ಮ್ಯಾನ್ಮಾರ್ ಜನ ಜೀವ ಉಳಿಸಿಕೊಳ್ಳಲು ನೆರೆಯ ದೇಶಗಳಿಗೆ ಪಲಾಯನ ಮಾಡು ದುರಂತ ಪರಿಸ್ಥಿತಿ ಎದುರಾಗಿದೆ. ಆದರೆ ನೆರೆಯ ದೇಶಗಳು ಕೂಡ ಮ್ಯಾನ್ಮಾರ್ ಜನರನ್ನ ಹೊರಗೆ ದಬ್ಬುತ್ತಿವೆ. ಹೀಗಾಗಿ ಎಲ್ಲವೂ ಇದ್ದೂ ಅನಾಥರಾಗಿದ್ದಾರೆ ಮ್ಯಾನ್ಮಾರ್ ಜನ.
3ನೇ ಮಹಾಯುದ್ಧಕ್ಕೆ ರಣಕಹಳೆ..?
ಜಗತ್ತಿನಲ್ಲಿ ಕಮ್ಯುನಿಸ್ಟ್ ರಾಷ್ಟ್ರಗಳಿಗೂ, ಅಮೆರಿಕದ ನಾಯಕರಿಗೂ ಜಿದ್ದು ಇದ್ದೇ ಇದೆ. ಅದರಲ್ಲೂ ಮಿಲಿಟರಿ ಆಡಳಿತ ಶುರುವಾಯಿತು ಅಂದರೆ ಸಾಕು, ಅಮೆರಿಕ ಏನಾದರೂ ಒಂದು ಕ್ಯಾತೆ ತೆಗೆದು ಅಲ್ಲಿಗೆ ನುಗ್ಗಿಬಿಡುತ್ತೆ ಎಂಬ ಆರೋಪ ಇದೆ. ಹೀಗೆ ಮ್ಯಾನ್ಮಾರ್ ಮೇಲೂ ಅಮೆರಿಕ ಸೇನೆ ದಾಳಿ ನಡೆಸುವ ಮಾತುಗಳನ್ನು ತಳ್ಳಿ ಹಾಕಲು ಸಾಧ್ಯವಿಲ್ಲ. ಅಕಸ್ಮಾತ್ ಹೀಗೆ ದಾಳಿ ನಡೆದಿದ್ದೇ ಆದರೆ ಪರಿಸ್ಥಿತಿ ಭಯಾನಕವಾಗಲಿದೆ. ಮ್ಯಾನ್ಮಾರ್ ಪಕ್ಕದಲ್ಲೇ ಕೂತಿರುವ ಅಮೆರಿಕ ಪಾಲಿನ ಶತ್ರು ಚೀನಾ ತಿರುಗಿ ಬೀಳಬಹುದು. ಆಗ ಈ ಕೋಳಿ ಜಗಳ 3ನೇ ಮಹಾಯುದ್ಧಕ್ಕೆ ಆಹ್ವಾನ ನೀಡಿದಂತೆ ಆಗುತ್ತದೆ. ಏಕೆಂದರೆ ಈ ಮೊದಲು ನಡೆದಿರುವ ಮಹಾಯುದ್ಧಗಳು ಕೂಡ ಕೋಳಿ ಜಗಳದ ರೀತಿಯೇ ಆರಂಭವಾಗಿದ್ದವು ಎನ್ನುವುದನ್ನ ನೆನಪಿಡಬೇಕು.
ಮಿಲಿಟರಿ ಆಡಳಿತ ಶುರು..!
ಮ್ಯಾನ್ಮಾರ್ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ. ಕಂಡಲ್ಲಿ ಗುಂಡಿಟ್ಟು ಜನರನ್ನ ಕೊಲೆ ಮಾಡುತ್ತಿದೆ ಸೇನೆ.
450ಕ್ಕೂ ಹೆಚ್ಚು ಹೋರಾಟಗಾರರು ಬಲಿ..?
ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 450ಕ್ಕೂ ಹೆಚ್ಚು ಜನರನ್ನು ಮ್ಯಾನ್ಮಾರ್ ಸೇನೆ ಬಲಿಪಡೆದಿರುವ ಆರೋಪವಿದೆ. ಹೀಗಾಗಿ ನಾಗರಿಕರನ್ನ ಕೊಂದು ಹಾಕಿರುವ ಮ್ಯಾನ್ಮಾರ್ ಸೇನೆ ವಿರುದ್ಧ ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಜಾಪ್ರಭುತ್ವವಾದಿ ರಾಷ್ಟ್ರಗಳು ಮ್ಯಾನ್ಮಾರ್ ಮಿಲಿಟರಿ ಕ್ರಮವನ್ನು ಟೀಕಿಸಿವೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಅಲ್ಲಿನ ಸೇನಾಧಿಕಾರಿಗಳು, ಪ್ರತಿಭಟನೆ ನಡೆಸುತ್ತಿರುವ ಜನರ ನಿಯಂತ್ರಣ ಹಾಗೂ ಹೋರಾಟಗಾರನ್ನು ಚದುರಿಸಲು ಬಲಪ್ರಯೋಗ ಮಾಡುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹಲವರು ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಆವರಿಸಿದೆ.
ಗಲ್ಲಿಗೂ ನುಗ್ಗಿದೆ ಮ್ಯಾನ್ಮಾರ್ ಸೇನೆ..!
ಸೇನಾ ಕ್ರಾಂತಿ ಪರ ಹಾಗೂ ವಿರುದ್ಧವಾಗಿ ಹೋರಾಟಗಳು ಭುಗಿಲೆದ್ದಿರುವುದು ಮ್ಯಾನ್ಮಾರ್ನ ತತ್ತರಿಸುವಂತೆ ಮಾಡಿದೆ. ಆದರೆ ಇದನ್ನ ನೋಡಿ ತಣ್ಣಗೆ ಕೂರೋಕೆ ಮ್ಯಾನ್ಮಾರ್ ಈಗ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ. ಮೇಲಾಗಿ ಅಲ್ಲೊಂದು ಸರ್ಕಾರವೇ ಇಲ್ಲ. ಎಲ್ಲವನ್ನೂ ಸೇನಾಧಿಕಾರಿಗಳು ಬಿಗಿ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ಹೀಗಾಗಿ ಪ್ರತಿಭಟನೆ ಮತ್ತು ಹೋರಾಟ ಹತ್ತಿಕ್ಕಲು ಮ್ಯಾನ್ಮಾರ್ನ ಸೇನೆ ಗಲ್ಲಿ ಗಲ್ಲಿಗಳಿಗೂ ಎಂಟ್ರಿ ಕೊಟ್ಟಿದೆ. ಭಾರಿ ಪ್ರಮಾಣದ ಯುದ್ಧ ಪರಿಕರಗಳನ್ನು ತೋರಿಸಿ ಜನರನ್ನ ಬೆದರಿಸುವ ತಂತ್ರ ಅನುಸರಿಸುತ್ತಿದೆ. ಆದರೂ ಜನ ಭಯಪಡದೆ ಹೋರಾಟಕ್ಕೆ ಸಾಥ್ ನೀಡುತ್ತಿದ್ದಾರೆ.
ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?
ಮ್ಯಾನ್ಮಾರ್ನಲ್ಲಿ 2020ರ ನವೆಂಬರ್ನಲ್ಲಿ ಚುನಾವಣೆ ನಡೆದಿತ್ತು. 75 ವರ್ಷದ ಸೂಕಿ ನೇತೃತ್ವದಲ್ಲಿ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಚುನಾವಣೆಯಲ್ಲಿ ಮ್ಯಾನ್ಮಾರ್ ಸಂಸತ್ತಿನ 642 ಸ್ಥಾನಗಳ ಪೈಕಿ ಸೂಕಿ ನೇತೃತ್ವದ ಎನ್ಎಲ್ಡಿ ಪಕ್ಷ 396 ಸ್ಥಾನ ಪಡೆದಿತ್ತು. ಅಂದಹಾಗೆ ಪ್ರಜಾಪ್ರಭುತ್ವದ ಪರ ಗಟ್ಟಿಯಾಗಿ ನಿಂತು ಹೋರಾಟ ನಡೆಸಿದ್ದವರು ಆಂಗ್ ಸಾನ್ ಸೂಕಿ. ಮ್ಯಾನ್ಮಾರ್ನಲ್ಲಿ ಮಿಲಿಟರಿ ಆಡಳಿತ ವಿರುದ್ಧ ಸತತ ಹೋರಾಟ ನಡೆಸಿದ್ದ ಸೂಕಿಗೆ ಇದೀಗ ಹಿನ್ನಡೆಯಾಗಿದೆ. ಸೂಕಿ ಬಂಧನ ಹಲವು ಅನುಮಾನಗಳಿಗೂ ಕಾರಣವಾಗಿದೆ.