‘ಸಾಯುವವರೆಗೂ ಶೂಟ್ ಮಾಡಿ’: ಹೇಗಿತ್ತು ಗೊತ್ತಾ ಅಲ್ಲಿ ಸೇನೆಯ ದೌರ್ಜನ್ಯ..?
ಪೊಲೀಸರ ಕೈಗೆ ಸಬ್ಮಷಿನ್ ಗನ್ ಕೊಟ್ಟು, ಪ್ರತಿಭಟನೆ ನಡೆಸುವವರನ್ನು ಸಾಯುವವರೆಗೂ ಬಿಡಬೇಡಿ ಅಂತಾ ಮ್ಯಾನ್ಮಾರ್ ಸೇನಾಧಿಕಾರಿಗಳು ಆದೇಶ ನೀಡಿದ್ದರಂತೆ. ಮ್ಯಾನ್ಮಾರ್ ಮಿಲಿಟರಿ ದೌರ್ಜನ್ಯದಿಂದ ದೇಶ ಬಿಟ್ಟು ಭಾರತಕ್ಕೆ ಓಡಿ ಬಂದ ಮ್ಯಾನ್ಮಾರ್ನ ಪೊಲೀಸ್ ಅಧಿಕಾರಿಗಳು ಈ ಆಘಾತಕಾರಿ ವಿಚಾರ ತಿಳಿಸಿದ್ದಾರೆ.
ಮ್ಯಾನ್ಮಾರ್ನಲ್ಲಿ ಹೋರಾಟ ಹತ್ತಿಕ್ಕಲು ಸೇನೆ ಹಿಂಸೆಗೆ ಇಳಿದಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಮಾತನಾಡಿರುವ ಮ್ಯಾನ್ಮಾರ್ ಪೊಲೀಸ್ ಅಧಿಕಾರಿ ಥಾ ಪೆಂಗ್, ಖಂಪತ್ ಟೌನ್ನಲ್ಲಿ ಪ್ರತಿಭಟನಾಕಾರರನ್ನ ಓಡಿಸಲು ಸೇನೆ ನಮಗೆ ಸಬ್ಮಷಿನ್ ಗನ್ ನೀಡಿತ್ತು. ಪ್ರತಿಭಟನಾಕಾರರು ಸಾಯುವವರೆಗೂ ಗುಂಡುಗಳನ್ನ ಹಾರಿಸಿ ಎಂದು ಮಿಲಿಟರಿ ಅಧಿಕಾರಿಗಳು ಆದೇಶಿಸಿದ್ದರು ಅಂತಾ ಆರೋಪ ಮಾಡಿದ್ದಾರೆ ಥಾ ಪೆಂಗ್.
ಮತ್ತೊಂದು ಉತ್ತರ ಕೊರಿಯಾ ಆಗುತ್ತಾ ಮ್ಯಾನ್ಮಾರ್, ಪ್ರಜೆಗಳಲ್ಲಿ ಆತಂಕ..!
ಸೇನೆ ಹೇಳಿದಂತೆ ಕೇಳಲು ಒಪ್ಪದ ಪೊಲೀಸರ ಮೇಲೂ ದೌರ್ಜನ್ಯ ನಡೆದಿದೆ. ನನಗೂ ಇದೇ ರೀತಿ ಸಂಕಷ್ಟ ಇತ್ತು. ಈ ಕಾರಣಕ್ಕೆ ಅಲ್ಲಿಂದ ನಾನು ರಾತ್ರೋ ರಾತ್ರಿ ಎಸ್ಕೇಪ್ ಆದೆ ಎಂಬುದನ್ನ ಥಾ ಪೆಂಗ್ ವಿವರಿಸಿದ್ದಾರೆ.
ಪೊಲೀಸರನ್ನು ವಾಪಸ್ ಕಳಿಸಿ..!
ಕೆಲ ದಿನಗಳ ಹಿಂದೆ ಭಾರತಕ್ಕೆ ಓಡಿ ಬಂದಿರುವ ಮ್ಯಾನ್ಮಾರ್ ಪೊಲೀಸರನ್ನು ವಶಕ್ಕೆ ನೀಡಿ ಎಂದು ಒತ್ತಾಯಿಸಿ ಮ್ಯಾನ್ಮಾರ್ ಪತ್ರ ಬರೆದಿತ್ತು. ಉಭಯ ರಾಷ್ಟ್ರಗಳ ಸಂಬಂಧ ಮುಂದುವರಿಯಲು ಪೊಲೀಸ್ ಅಧಿಕಾರಿಗಳನ್ನು ಮ್ಯಾನ್ಮಾರ್ಗೆ ಹಸ್ತಾಂತರಿಸಿ ಅಂತಾ ಮಿಜೋರಾಂ ರಾಜ್ಯದ ಚಂಪೈ ಜಿಲ್ಲೆಯ ಉಪ ಆಯುಕ್ತೆಗೆ ಮ್ಯಾನ್ಮಾರ್ನ ಅಧಿಕಾರಿಗಳು ಪತ್ರ ಬರೆದಿದ್ದರು. ಪತ್ರ ಬರೆದ ಕೆಲವೇ ದಿನದಲ್ಲಿ ಆಘಾತಕಾರಿ ಅಂಶ ಬಯಲಾಗಿದೆ. ಭಾರತಕ್ಕೆ ಓಡಿ ಬಂದಿರುವ ಮ್ಯಾನ್ಮಾರ್ ಪೊಲೀಸರು ಅಲ್ಲಿನ ಭಯಾನಕ ಸ್ಥಿತಿಯನ್ನು ಬಿಡಿಸಿಟ್ಟಿದ್ದಾರೆ. ಮ್ಯಾನ್ಮಾರ್ ಜನರ ಸದ್ಯದ ಪರಿಸ್ಥಿತಿ ಹಾಗೂ ಹಿಂಸೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ.
ಹೋರಾಟಗಾರನ್ನು ಚದುರಿಸಲು ಬಲಪ್ರಯೋಗ
ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಜನರನ್ನು ಮ್ಯಾನ್ಮಾರ್ ಸೇನೆ ಬಲಿಪಡೆದಿರುವ ಆರೋಪವಿದೆ. ಹೀಗಾಗಿ ನಾಗರಿಕರನ್ನ ಕೊಂದು ಹಾಕಿರುವ ಮ್ಯಾನ್ಮಾರ್ ಸೇನೆ ವಿರುದ್ಧ ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಜಾಪ್ರಭುತ್ವವಾದಿ ರಾಷ್ಟ್ರಗಳು ಮ್ಯಾನ್ಮಾರ್ ಮಿಲಿಟರಿ ಕ್ರಮವನ್ನು ಟೀಕಿಸಿವೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಅಲ್ಲಿನ ಸೇನಾಧಿಕಾರಿಗಳು, ಪ್ರತಿಭಟನೆ ನಡೆಸುತ್ತಿರುವ ಜನರ ನಿಯಂತ್ರಣ ಹಾಗೂ ಹೋರಾಟಗಾರನ್ನು ಚದುರಿಸಲು ಬಲಪ್ರಯೋಗ ಮಾಡುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹಲವರು ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಆವರಿಸಿದೆ.
ಭಾರತದಲ್ಲಿ ಮ್ಯಾನ್ಮಾರ್ ನಿರಾಶ್ರಿತರ ಸಂಖ್ಯೆ ಹೆಚ್ಚಳ ನಿರೀಕ್ಷೆ
ಮಿಲಿಟರಿ ಆಡಳಿತ ಶುರು..!
ಮ್ಯಾನ್ಮಾರ್ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ.
ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?
ಮ್ಯಾನ್ಮಾರ್ನಲ್ಲಿ 2020ರ ನವೆಂಬರ್ನಲ್ಲಿ ಚುನಾವಣೆ ನಡೆದಿತ್ತು. 75 ವರ್ಷದ ಸೂಕಿ ನೇತೃತ್ವದಲ್ಲಿ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಚುನಾವಣೆಯಲ್ಲಿ ಮ್ಯಾನ್ಮಾರ್ ಸಂಸತ್ತಿನ 642 ಸ್ಥಾನಗಳ ಪೈಕಿ ಸೂಕಿ ನೇತೃತ್ವದ ಎನ್ಎಲ್ಡಿ ಪಕ್ಷ 396 ಸ್ಥಾನ ಪಡೆದಿತ್ತು. ಅಂದ ಹಾಗೆ ಪ್ರಜಾಪ್ರಭುತ್ವದ ಪರ ಗಟ್ಟಿಯಾಗಿ ನಿಂತು ಹೋರಾಟ ನಡೆಸಿದ್ದವರು ಆಂಗ್ ಸಾನ್ ಸೂಕಿ. ಮ್ಯಾನ್ಮಾರ್ನಲ್ಲಿ ಮಿಲಿಟರಿ ಆಡಳಿತ ವಿರುದ್ಧ ಸತತ ಹೋರಾಟ ನಡೆಸಿದ್ದ ಸೂಕಿಗೆ ಇದೀಗ ಹಿನ್ನಡೆಯಾಗಿದೆ. ಸೂಕಿ ಬಂಧನ ಹಲವು ಅನುಮಾನಗಳಿಗೂ ಕಾರಣವಾಗಿದೆ.
ಮ್ಯಾನ್ಮಾರ್ ದಂಗೆಯಲ್ಲಿ ಚೀನಾ ಕೈವಾಡ..? ತಜ್ಞರು ಹೇಳೋದು ಏನು ಗೊತ್ತಾ..?
ಗಲ್ಲಿಗೂ ನುಗ್ಗಿದೆ ಮ್ಯಾನ್ಮಾರ್ ಸೇನೆ..!
ಸೇನಾ ಕ್ರಾಂತಿ ಪರ ಹಾಗೂ ವಿರುದ್ಧವಾಗಿ ಹೋರಾಟಗಳು ಭುಗಿಲೆದ್ದಿರುವುದು ಮ್ಯಾನ್ಮಾರ್ನ ತತ್ತರಿಸುವಂತೆ ಮಾಡಿದೆ. ಆದರೆ ಇದನ್ನ ನೋಡಿ ತಣ್ಣಗೆ ಕೂರೋಕೆ ಮ್ಯಾನ್ಮಾರ್ ಈಗ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ. ಮೇಲಾಗಿ ಅಲ್ಲೊಂದು ಸರ್ಕಾರವೇ ಇಲ್ಲ. ಎಲ್ಲವನ್ನೂ ಸೇನಾಧಿಕಾರಿಗಳು ಬಿಗಿ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ಹೀಗಾಗಿ ಪ್ರತಿಭಟನೆ ಮತ್ತು ಹೋರಾಟ ಹತ್ತಿಕ್ಕಲು ಮ್ಯಾನ್ಮಾರ್ನ ಸೇನೆ ಗಲ್ಲಿ ಗಲ್ಲಿಗಳಿಗೂ ಎಂಟ್ರಿ ಕೊಟ್ಟಿದೆ. ಭಾರಿ ಪ್ರಮಾಣದ ಯುದ್ಧ ಪರಿಕರಗಳನ್ನ ತೋರಿಸಿ ಜನರನ್ನ ಬೆದರಿಸುವ ತಂತ್ರ ಅನುಸರಿಸುತ್ತಿದೆ. ಆದರೂ ಜನ ಭಯಪಡದೆ ಹೋರಾಟಕ್ಕೆ ಸಾಥ್ ನೀಡುತ್ತಿದ್ದಾರೆ.