ಹಿಜಾಬ್ ವಿವಾದ: ಭಾರತೀಯ ರಾಯಭಾರಿಗಳನ್ನು ಕರೆಸಿ ಅಸಮಾಧಾನ ಹೊರಹಾಕಿದ ಪಾಕಿಸ್ತಾನ
ಇಸ್ಲಾಮಾಬಾದ್ ಫೆಬ್ರವರಿ 11: ಕರ್ನಾಟಕದ ಉಡುಪಿ ಕಾಲೇಜಿನಲ್ಲಿ ಶುರುವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಕರ್ನಾಟಕದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದೆ. ಅಲ್ಲದೇ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ವಿದ್ಯಾರ್ಥಿಗಳ ನಡುವೆ ಶುರುವಾದ ವಿವಾದ ಈಗ ರಾಜಕೀಯ ತಿರುವು ಪಡೆದುಕೊಂಡಿದೆ.
ಕರ್ನಾಟದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಕುರಿತಾಗಿ ನೆರೆಯ ಪಾಕಿಸ್ತಾನ ಮತ್ತೊಮ್ಮೆ ಕ್ಯಾತೆ ತೆಗೆದಿದೆ. ತನ್ನ ದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಉಪ ಅಧಿಕಾರಿಗಳನ್ನು ಕರೆಸಿಕೊಂಡ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ, ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ಪ್ರಶ್ನಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.
ಭಾರತ ದೇಶದ ವಿಷಯಗಳಲ್ಲಿ ಮೂಗು ತೂರಿಸುವುದನ್ನು ಮುಂದುವರೆಸಿರುವ ಪಾಕಿಸ್ತಾನ, ಹಿಜಾಬ್ ವಿವಾದವನ್ನು ಧಾರ್ಮಿಕ ಅಸಹಿಷ್ಣುತೆ, ಮುಸ್ಲಿಮರ ಮೇಲಿನ ದಬ್ಬಾಳಿಕೆ, ತಾರತಮ್ಯ ಎಂದು ಕರೆದಿದೆ.

ಇದಕ್ಕೂ ಮೊದಲು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಶಿ ಹಿಜಾಬ್ ಧರಿಸುವುದು ಮುಸ್ಲಿಂ ಬಾಲಕಿಯರ ಹಕ್ಕು, ಅದನ್ನು ತಡೆಯುವುದು ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಭಾರತದ ರಾಯಭಾರಿಯನ್ನು ಕರೆಸಿಕೊಂಡು ಪಾಕಿಸ್ತಾನ ಅಸಮಾಧಾನ ಹೊರಹಾಕಿದೆ.
ಆಧಾರ ರಹಿತ ಆರೋಪ ಎಂದ ಭಾರತದ ಅಧಿಕಾರಿಗಳು
ಕರ್ನಾಟಕದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ವಿದೇಶಾಂಗ ಕಚೇರಿಯ ಎಲ್ಲಾ ಆರೋಪಗಳನ್ನು ಭಾರತದ ರಾಯಭಾರ ಕಚೇರಿ ತಳ್ಳಿಹಾಕಿದೆ. ಭಾರತೀಯ ಅಧಿಕಾರಿಗಳು ಪಾಕಿಸ್ತಾನದ ಹೇಳಿಕೆಗಳನ್ನು "ಆಧಾರ ರಹಿತ' ಮತ್ತು "ಭಾರತವು ಜಾತ್ಯತೀತ ದೇಶ' ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರರು ಹೊರಡಿಸಿದ ಹೇಳಿಕೆಯಲ್ಲಿ, "ಕರ್ನಾಟಕದಲ್ಲಿ ಆರ್ಎಸ್ಎಸ್- ಬಿಜೆಪಿ ಸಂಯೋಜನೆಯು ಮುನ್ನಡೆಸುತ್ತಿರುವ ಹಿಜಾಬ್ ವಿರೋಧಿ ಅಭಿಯಾನದ ಬಗ್ಗೆ ಪಾಕಿಸ್ತಾನದ ತೀವ್ರ ಕಳವಳವನ್ನು ಭಾರತ ಸರ್ಕಾರಕ್ಕೆ ತಿಳಿಸಲು ಅಧಿಕಾರಿಗಳನ್ನು ಒತ್ತಾಯಿಸಲಾಗಿದೆ. ಮುಸ್ಲಿಂ ಜನರನ್ನು ಹೊರಗಿಡುವ ಮತ್ತು ಮುಸ್ಲಿಂ ಮಹಿಳೆಯರನ್ನು ಅಮಾನವೀಯಗೊಳಿಸುವ ಮತ್ತು ರಾಕ್ಷಸೀಕರಿಸುವ ಬಹುಸಂಖ್ಯಾತ ಅಜೆಂಡಾದ ಗುರಿಯಾಗಿದೆ ಎಂದು ಹೇಳಿದೆ.
ಕರ್ನಾಟಕದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವ ಅಪರಾಧಿಗಳನ್ನು ಭಾರತ ಸರ್ಕಾರವು ವಿಚಾರಣೆಗೆ ಒಳಪಡಿಸಬೇಕು ಮತ್ತು ಮುಸ್ಲಿಂ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ವಿಚಾರಣೆಯನ್ನು ಆರಂಭಿಸಿದ ಹೈಕೋರ್ಟ್ ವಿಸ್ತೃತ ನ್ಯಾಯಪೀಠ, ಹಿಜಾಬ್ ಮತ್ತು ಕೇಸರಿ ಶಾಲು ಸೇರಿದಂತೆ ಯಾವುದೇ ಧರ್ಮವನ್ನು ಸೂಚಿಸುವ ವಸ್ತ್ರವನ್ನು ಧರಿಸಲು ಯಾವ ವಿದ್ಯಾರ್ಥಿ ಮೇಲೂ ಒತ್ತಡ ಹೇರಬಾರದು ಎಂದು ಮೌಖಿಕವಾಗಿ ಹೇಳಿದೆ. ಆ ಕುರಿತು ಆದೇಶ ನೀಡುವುದಾಗಿ ಹೇಳಿರುವ ನ್ಯಾಯಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮಧ್ಯಾಹ್ನಕ್ಕೆ ಮುಂದೂಡಿದೆ.
ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನೀಸಾ ಅವರಿದ್ದ ತ್ರಿಸದಸ್ಯ ಪೀಠ ಸುಮಾರು ಎರಡು ಗಂಟೆಗಳ ಕಾಲ ವಾದ- ಪ್ರತಿವಾದವನ್ನು ಆಲಿಸಿತು.
ಬಳಿಕ "ಶಾಲಾ-ಕಾಲೇಜುಗಳು ಆರಂಭವಾಗಲಿ, ವಿಷಯ ನ್ಯಾಯಾಲಯದ ಮುಂದಿದೆ, ಕೋರ್ಟ್ ಆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಅಲ್ಲಿಯವರೆರೆಗೆ ಹಿಜಾಬ್ ಆಗಲಿ ಅಥವಾ ಕೇಸರಿ ಶಾಲು ಆಗಲಿ ಯಾವುದೇ ಧರ್ಮಕ್ಕೆ ಸಂಬಂಧಿಸಿದ ವಸ್ತುಗಳನ್ನು ಧರಿಸುವಂತಿಲ್ಲ ಮತ್ತು ಆ ಕುರಿತು ಯಾರೂ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬಾರದು. ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಮರಳಬೇಕು ಎಂಬುದು ಕೋರ್ಟ್ ಆಶಯವಾಗಿದೆ,'' ಎಂದು ಮೌಖಿಕವಾಗಿ ಆದೇಶಿಸಿತು.












Click it and Unblock the Notifications