Breaking; ಶ್ರೀಲಂಕಾದಲ್ಲಿ ಹೊಸದಾಗಿ ಚುನಾವಣೆ ನಡೆಸಲು ಕರೆ
ಕೊಲಂಬೊ, ಮೇ 02; ಆರ್ಥಿಕ ಮುಗ್ಗಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕು ಎಂಬ ಆಗ್ರಹ ಕೇಳಿ ಬಂದಿದೆ. ದೇಶದ ಹಲವು ಪ್ರದೇಶಗಳಲ್ಲಿ ಜನರು ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.
ಭಾನುವಾರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಎಸ್ಎಲ್ಎಫ್ಪಿ ಪಕ್ಷದ ಮುಖ್ಯಸ್ಥ ಮತ್ತು ಶ್ರೀಲಂಕಾದ ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, "ದೇಶದಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕು" ಎಂದು ಒತ್ತಾಯಿಸಿದರು.
"ದೇಶ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವಾಗ ರಾಜಕಾರಣಿಗಳು ಜನರ ಪರವಾಗಿ ನಿಲ್ಲಬೇಕು. ದೇಶದ ಜನರು, ರೈತರು, ಕಷ್ಟದ ಪರಿಸ್ಥಿತಿ ಎದುರಿಸುತ್ತಿರುವಾಗ ಸರ್ಕಾರ ಅವರ ಪರವಾಗಿ ಏನೂ ಮಾಡಲಿಲ್ಲ. ಸರ್ಕಾರ ಅಧಿಕಾರದಿಂದ ಕೆಳಗಿಳಿಯುವ ತನಕ ನಾನು ಸಹ ರಸ್ತೆಯಲ್ಲಿ ಹೋರಾಟ ಮಾಡುತ್ತೇನೆ" ಎಂದು ಘೋಷಣೆ ಮಾಡಿದರು.

"ಜನರು ನಾನಾ ವಿಧವಾದ ಸಂಕಷ್ಟಗಳನ್ನು ಎದುರಿಸುತ್ತಿರುವಾಗ ನಾನು ಮನೆಯಲ್ಲಿ ಕೂರೂವುದಿಲ್ಲ. ಕಾರ್ಮಿಕರು, ರೈತರ ತಮ್ಮ ಸಮಸ್ಯೆಗಳನ್ನು ಸರ್ಕಾರಕ್ಕೆ ಹೇಳಿದರೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ" ಎಂದು ಮೈತ್ರಿಪಾಲ ಸಿರಿಸೇನಾ ಆರೋಪಿಸಿದರು.
ವಿದೇಶಿ ವಿನಿಮಯದ ಕೊರತೆಯ ಕಾರಣ ದ್ವೀಪರಾಷ್ಟ್ರ ಶ್ರೀಲಂಕಾ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದೆ. ವಿದೇಶಗಳಿಂದ ಪಡೆದ ಸಾಲವನ್ನು ಸಹ ಮರುಪಾವತಿ ಮಾಡದ ಸ್ಥಿತಿಯಲ್ಲಿದೆ. ಜನರು ಬೀದಿಗಿಳಿದು ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.












Click it and Unblock the Notifications