ರಾಜಸ್ಥಾನದಲ್ಲಿ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ
ಜೈಪುರ, ನವೆಂಬರ್ 10:ರಾಜಸ್ಥಾನದಲ್ಲಿ ಸಚಿನ್ ಪೈಲಟ್ ಆಪ್ತರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಗೆ ಸೂಚಿಸಿದೆ.
ವರ್ಷದ ಹಿಂದೆ ನಡೆದ ರಾಜ್ಯ ಸೂತ್ರದಂತೆ, ಸಚಿನ್ ಪೈಲಟ್ ಆಪ್ತರಿಗೆ ಕೂಡಲೇ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಗೆ ಪ್ರಿಯಾಂಕಾ ಗಾಂಧಿ ಹಾಗೂ ಇತರೆ ಕಾಂಗ್ರೆಸ್ ನಾಯಕರು ಕಟ್ಟಪ್ಪಣೆ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ಹೀಗಾಗಿ ರಾಜಸ್ಥಾನದಲ್ಲಿ ಶೀಘ್ರವೇ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಹೆಚ್ಚಿದೆ, ಕಳೆದ ವರ್ಷ ಅಶೋಕ್ ಗೆಹ್ಲೋಟ್ ವಿರುದ್ಧ ಸೆಡ್ಡುಹೊಡೆದು ಭಿನ್ನಮತೀಯ ನಾಯಕರಾಗಿ ಗುರುತಿಸಿಕೊಂಡಿದ್ದ ಸಚಿನ್ ಪೈಲಟ್ 12 ಶಾಸಕರೊಂದಿಗೆ ಪಕ್ಷ ತ್ಯಜಿಸಲು ಮುಂದಾಗಿದ್ದರು, ಆದರೆ ಪ್ರಿಯಾಂಕಾ ವಾದ್ರಾ ಹಾಗೂ ರಾಹುಲ್ ಗಾಂಧಿಯ ಮಧ್ಯಸ್ಥಿಕೆ ಕಾರಣದಿಂದ ಸಚಿನ್ ಪೈಲಟ್ ಪಕ್ಷದಲ್ಲಿಯೇ ಉಳಿದಿದ್ದರು.
ಆಗ ನಡೆದ ರಾಜಿಸಂಧಾನದ ಸೂತ್ರದ ಪ್ರಕಾರ ಪೈಲಟ್ ಆಪ್ತರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕಿತ್ತು. ಆದರೆ ಒಂದು ವರ್ಷವಾದರೂ ಅಶೋಕ್ ಗೆಹ್ಲೋಟ್ ಸಂಪುಟದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ, ಇದರಿಂದ ರಾಜ್ಯಘಟಕದಲ್ಲಿ ಆಗಾಗ ಅಸಮಾಧಾನ ಭುಗಿಲೇಳುತ್ತಲೇ ಇತ್ತು, ಕಳೆದ ತಿಂಗಳು ಮತ್ತೆ ಅಶೋಕ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ಗೆ ದೂರು ನೀಡಿದ್ದ ಪೈಲಟ್ ಮುಖ್ಯಮಂತ್ರಿ ಹುದ್ದೆ ನೀಡುವಂತೆ ಒತ್ತಡ ಹೇರಿದ್ದರು ಎಂದು ತಿಳಿದುಬಂದಿದೆ.
ಆದರೆ ಈ ಹಂತದಲ್ಲಿ ನಾಯಕತ್ವ ಬದಲಾವಣೆಗೆ ಒಪ್ಪದ ಕಾಂಗ್ರೆಸ್ ಹೈಕಮಾಂಡ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನು ವಹಿಸಿಕೊಂಡು ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಆದರೆ ಈ ಬಗ್ಗೆ ಸಚಿನ್ ಪೈಲಟ್ ಯಾವುದೇ ಅಂತಿಮ ನಿರ್ಧಾರ ಮಾಡಿಲ್ಲ ಎಂದು ಹೇಳಲಾಗಿದೆ, ಈಗ ಸಚಿವ ಸಂಪುಟ ಪುನಾರಚನೆ ಮೂಲಕ ಪೈಲಟ್ ಸಮಾಧಾನ ಮಾಡಲು ಕಾಂಗ್ರೆಸ್ ವರಿಷ್ಠರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
2018 ರ ವೇಳೆಗೆ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅಶೋಕ್ ಗೆಹ್ಲೋಟ್, 2018 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ನಂತರ ಮುಖ್ಯಮಂತ್ರಿಯಾದರು. ಈ ಸಂದರ್ಭದಲ್ಲಿ ಕಾಂಗ್ರೆಸ್ಗೆ ನಿರ್ಧಾರ ಕೈಗೊಳ್ಳುವುದು ಭಾರೀ ಇಕ್ಕಟ್ಟಿನ ಸಂದರ್ಭವಾಗಿತ್ತು. ಇದೇ ಸಂದರ್ಭದಲ್ಲಿ ಸಚಿನ್ ಪೈಲಟ್ ಕೂಡಾ ಸರ್ಕಾರದ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಸಚಿನ್ ಪೈಲಟ್ಗೆ ಮಾತ್ರ ಕಾಂಗ್ರೆಸ್ ಪಕ್ಷವನ್ನು ಪುನರ್ ನಿರ್ಮಾಣ ಮಾಡಿದ ಹೆಗ್ಗಳಿಕೆ ಇದೆ. 2013 ರ ರಾಜ್ಯ ಚುನಾವಣೆಯಲ್ಲಿ ಪಕ್ಷ ಸೋತ ಬಳಿಕ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಸಚಿನ್ ಪೈಲಟ್ರನ್ನು ಮಾಡಲಾಯಿತು.