Breaking: ನೀರು ಮುಟ್ಟಿದ ದಲಿತ ಬಾಲಕನನ್ನು ಹೊಡೆದು ಕೊಂದ ಶಿಕ್ಷಕ
ಜೈಪುರ, ಆಗಸ್ಟ್ 14: ಕುಡಿಯುವ ನೀರಿನ ಕೊಡವನ್ನು ಮುಟ್ಟಿದ್ದಕ್ಕಾಗಿ ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿದ್ದ ಒಂಬತ್ತು ವರ್ಷದ ದಲಿತ ಬಾಲಕನನ್ನು ಶಿಕ್ಷಕ ಥಳಿಸಿದ್ದು, ಆತ ಮೃತಪಟ್ಟಿರುವ ಘಟನೆ ರಾಜಸ್ಥಾನದ ಸುರಾನಾ ಗ್ರಾಮದಲ್ಲಿ ವರದಿಯಾಗಿದೆ.
ಬಾಲಕನನ್ನು ಥಳಿಸಿದ ಆರೋಪದ ಮೇಲೆ 40 ವರ್ಷದ ಶಿಕ್ಷಕ ಚೈಲ್ ಸಿಂಗ್ ಅವರನ್ನು ಬಂಧಿಸಲಾಗಿದೆ. ಆರೋಪಿಯ ಮೇಲೆ ಕೊಲೆ ಆರೋಪ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕುಡಿಯುವ ನೀರಿನ ಕೊಡವನ್ನು ಮುಟ್ಟಿದ ಎಂದು 9 ವರ್ಷದ ದಲಿತ ಬಾಲಕನನ್ನು ಥಳಿಸಿರುವುದಕ್ಕೆ ಏನು ಕಾರಣ ಎಂಬುವುದನ್ನು ತನಿಖೆ ನಡೆಸಲಾಗುತ್ತಿದೆ? ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 20 ರಂದು ಈ ಘಟನೆ ನಡೆದಿದೆ ಎಂದು ಸಂತ್ರಸ್ತನ ತಂದೆ ದೇವರಾಮ್ ಮೇಘವಾಲ್ ತಿಳಿಸಿದ್ದಾರೆ. ಹೊಡೆತ ತಿಂದ ಬಾಲಕನ ಮುಖಕ್ಕೆ ಗಂಭೀರ ಗಾಯವಾಗಿದ್ದು, ಪ್ರಜ್ಞಾಹೀನನಾಗಿದ್ದಾನೆ. ಬಾಲಕನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದು ಅಲ್ಲಿಂದ ಉದಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಒಂದು ವಾರ ಕಳೆದರೂ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಬಾಲಕನ ಕುಟುಂಬವು ಹೆಚ್ಚಿನ ಚಿಕಿತ್ಸೆಗಾಗಿ ಅಹಮದಾಬಾದ್ಗೆ ಕರೆದೊಯ್ಯಲು ನಿರ್ಧರಿಸಿತ್ತು. ಅಲ್ಲಿ ಬಾಲಕ ಮೃತಪಟ್ಟಿದ್ದಾನೆ.
ಶಿಕ್ಷಕರ ಥಳಿತದಿಂದಾಗಿ ಬಾಲಕನ ಕಣ್ಣುಗಳು ಊದಿಕೊಂಡಿರುವುದು ಮತ್ತು ಮೂಗಿಗೆ ಗಂಭೀರ ಗಾಯಗಳಾಗಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.
ಘಟನೆ ಕುರಿತು ರಾಜ್ಯ ಶಿಕ್ಷಣ ಇಲಾಖೆ ತನಿಖೆ ಆರಂಭಿಸಿದೆ. ಬ್ಲಾಕ್ ಶಿಕ್ಷಣಾಧಿಕಾರಿಗೆ ವರದಿ ಸಲ್ಲಿಸುವಂತೆ ಇಬ್ಬರು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ತಡೆಯಲು ಈ ಪ್ರದೇಶದಲ್ಲಿ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ. ಮೃತನ ಮರಣೋತ್ತರ ಪರೀಕ್ಷೆಗಾಗಿ ಪೊಲೀಸ್ ತಂಡವನ್ನು ಅಹಮದಾಬಾದ್ಗೆ ಕಳುಹಿಸಲಾಗಿದೆ.
ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, 'ಪ್ರಕರಣದ ತ್ವರಿತ ತನಿಖೆಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ಶೀಘ್ರವೇ ನ್ಯಾಯ ದೊರಕಿಸಿಕೊಡಲಾಗುವುದು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೆರವು ನೀಡಲಾಗುವುದು' ಎಂದು ಘೋಷಿಸಿದ್ದಾರೆ.












Click it and Unblock the Notifications