ಧಾರ್ಮಿಕ ಧ್ವಜದ ಕಿತ್ತಾಟ: ಜೋಧ್ಪುರ್ನಲ್ಲಿ ಸಮುದಾಯಗಳ ಘರ್ಷಣೆಯ ಸುತ್ತಮುತ್ತ
ಜೈಪುರ, ಮೇ 3: ರಾಜಸ್ಥಾನದ ಜೋಧ್ಪುರ್ನಲ್ಲಿ ಧ್ವಜದ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದ್ದು ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮನವಿ ಮಾಡಿಕೊಂಡಿದ್ದಾರೆ.
ಜೋಧ್ಪುರದಲ್ಲಿ ಉದ್ವಿಗ್ನ ಪರಿಸ್ಥಿತಿಯ ನಿರ್ಮಾಣವಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಿಆರ್ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಜೋಧ್ಪುರದಲ್ಲಿ ಹಿಂಸಾತ್ಮಕ ಘರ್ಷಣೆ: ಇಂಟರ್ನೆಟ್ ಸ್ಥಗಿತ
"ಜೋಧ್ಪುರದಲ್ಲಿ ಘರ್ಷಣೆಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾಡಳಿತವು ಸೋಮವಾರ ಮಧ್ಯಾಹ್ನ 1 ರಿಂದ ಮೇ 4ರ ಮಧ್ಯರಾತ್ರಿಯವರೆಗೆ ಕರ್ಫ್ಯೂ ಜಾರಿಗೊಳಿಸುತ್ತದೆ" ಎಂದು ಅಧಿಕೃತ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಮಂಗಳವಾರ 74ನೇ ವರ್ಷಕ್ಕೆ ಕಾಲಿಟ್ಟ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದೇ ರಾಜ್ಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಿದರು.
ಶಾಂತಿ ಕಾಪಾಡುವಂತೆ ಮನವಿ; "ರಾಜಸ್ಥಾನದಲ್ಲಿ ಯಾವುದೇ ರೀತಿ ಅಹಿತಕರ ಘಟನೆಗಳು ಮರುಕಳಿಸದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕಿದೆ. ರಾಜ್ಯದ ನಾಗರಿಕರು ಶಾಂತಿ ಕಾಪಾಡಿಕೊಳ್ಳಬೇಕು" ಎಂದು ಸಿಎಂ ಅಶೋಕ್ ಗೆಹ್ಲೋಟ್ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಜಲೋರಿ ಗೇಟ್ನಲ್ಲಿ ಎರಡು ಸಮುದಾಯಗಳ ನಡುವಿನ ಘರ್ಷಣೆ ದುರದೃಷ್ಟಕರ ಎಂದರು. ಜೋಧ್ಪುರ, ಮಾರ್ವಾರ್ನ ಪ್ರೀತಿ ಮತ್ತು ಸಹೋದರತ್ವದ ಸಂಪ್ರದಾಯವನ್ನು ಗೌರವಿಸಿ, ಶಾಂತಿಯನ್ನು ಕಾಪಾಡಲು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಸ್ಥಾಪಿಸಲು ಸಹಕರಿಸುವಂತೆ ನಾನು ಎಲ್ಲಾ ಪಕ್ಷಗಳಿಗೆ ಮನವಿ ಮಾಡುತ್ತೇನೆ' ಎಂದರು.
ಸರ್ಕಾರದ ವಿರುದ್ಧ ಆರೋಪ; "ರಾಜ್ಯದಲ್ಲಿ ತುಷ್ಟೀಕರಣ ರಾಜಕಾರಣದಿಂದ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇಂತಹ ಘಟನೆಗಳು ಸರ್ಕಾರದ ರಕ್ಷಣೆಯಲ್ಲಿ ನಡೆಯುತ್ತವೆ ಎಂಬುದು ಕರೌಲಿ ಘಟನೆಯಿಂದ ಸ್ಪಷ್ಟವಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಮಾತ್ರ ಇಂತಹ ಘಟನೆಗಳು ಏಕೆ ನಡೆಯುತ್ತವೆ?' ಎಂದು ರಾಜಸ್ಥಾನ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ ಹೇಳಿದ್ದಾರೆ.
ಸಹೋದರತ್ವದ ಸಂದೇಶ ಸಾರಿದ ಸಿಎಂ ಗೆಹ್ಲೋಟ್: "ಶಾಂತಿಯನ್ನು ಕಾಪಾಡಿಕೊಳ್ಳಲು ನಾನು ಜನರಿಗೆ ಮನವಿ ಮಾಡಲು ಬಯಸುತ್ತೇನೆ. ಸಮಾಜ ವಿರೋಧಿ ಅಂಶಗಳೊಂದಿಗೆ ಕಟ್ಟುನಿಟ್ಟಾಗಿ ವ್ಯವಹರಿಸುವಂತೆ ನಾನು ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಸಹೋದರತ್ವವನ್ನು ಕಾಪಾಡಿಕೊಳ್ಳಬೇಕು ಎಂಬುದನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು," ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಮೂವರು ಆರೋಪಿಗಳ ಬಂಧನ: ಜೋಧ್ಪುರ ಘರ್ಷಣೆಗೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಸೋಮವಾರ ಬೆಳಗ್ಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಂದೆಡೆ ಜೋಧ್ಪುರದ ಘರ್ಷಣೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಜಿಪಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಿಎಂ ಅಶೋಕ್ ಗೆಹ್ಲೋಟ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
"ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಧ್ವಜ ಮೆರವಣಿಗೆ ನಡೆಸಲಾಗುವುದು. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಾವು ಧ್ವಜಾರೋಹಣ ಘಟನೆಯ ಕುರಿತು ಪರಿಶೀಲಿಸುತ್ತಿದ್ದೇವೆ" ಎಂದು ಜೋಧ್ಪುರ ಪೊಲೀಸ್ ಕಮಿಷನರ್ ನವಜ್ಯೋತಿ ಗೊಗೋಯ್ ಹೇಳಿದ್ದಾರೆ.
ಜೋಧ್ಪುರ ಘರ್ಷಣೆಯ ಹಿನ್ನೆಲೆ: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತವರೂರು ಜೋಧ್ಪುರದಲ್ಲಿ ಈದ್ ಮತ್ತು ಅಕ್ಷಯ ತೃತೀಯ ಆಚರಣೆಗೆ ಮುನ್ನ ಜಲೋರಿ ಗೇಟ್ ಬಳಿ ಎರಡು ಸಮುದಾಯಗಳ ನಡುವೆ ಧಾರ್ಮಿಕ ಧ್ವಜ ಹಾರಾಟಕ್ಕೆ ಸಂಬಂಧಿಸಿದಂತೆ ಘರ್ಷಣೆ ನಡೆದಿದೆ.
Recommended Video
ಸ್ವಾತಂತ್ರ್ಯ ಹೋರಾಟಗಾರನ ಪ್ರತಿಮೆಯ ಮೇಲೆ ಧಾರ್ಮಿಕ ಧ್ವಜವನ್ನು ಹಾರಿಸುವ ವಿಚಾರದಲ್ಲಿ ಎರಡು ಸಮುದಾಯಗಳು ಪರಸ್ಪರ ಹೊಡೆದಾಡಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಸ್ಥಾನದ ಕರೌಲಿಯಲ್ಲೂ ಏಪ್ರಿಲ್ 2ರಂದು ಕಲ್ಲು ತೂರಾಟ, ಬೆಂಕಿ ಹಚ್ಚುವಿಕೆ ಮತ್ತು ವಿಧ್ವಂಸಕ ಘಟನೆಗಳ ಕುರಿತು ವರದಿಯಾಗಿತ್ತು.