ರಾಜಸ್ಥಾನ ಪುರೋಹಿತನ ಹತ್ಯೆಗೆ ಸಿಎಂ ಅಶೋಕ್ ಗೆಹ್ಲೋಟ್ ಖಂಡನೆ
ಜೈಪುರ್, ಅಕ್ಟೋಬರ್.09: ರಾಜಸ್ಥಾನದ ಕರೌಲಿ ಗ್ರಾಮದಲ್ಲಿ ರಾಧಾ ಕೃಷ್ಣ ದೇವಸ್ಥಾನದ ಟ್ರಸ್ಟ್ ಗೆ ಸೇರಿದ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಅರ್ಚಕರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆಗೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಂಡನೆ ವ್ಯಕ್ತಪಡಿಸಿದ್ದಾರೆ.
ಕರೌಲಿಯ ಸಪೋತ್ರಾದಲ್ಲಿ ಪುರೋಹಿತ ಬಾಬುಲಾಲ್ ವೈಷ್ಣವ್ ಜಿ ಅವರ ಹತ್ಯೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಸುಸಂಸ್ಕೃತ ಸಮಾಜದಲ್ಲಿ ಇಂತಹ ದುಷ್ಕೃತ್ಯಗಳಿಗೆ ಸ್ಥಾನವಿಲ್ಲ. ರಾಜಸ್ಥಾನ ಸರ್ಕಾರವು ಈ ದುಃಖದ ಸಮಯದಲ್ಲಿ ಶೋಕ ಕುಟುಂಬದ ಜೊತೆಗಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ದೇವಸ್ಥಾನ ಭೂ ವಿವಾದ: ಅರ್ಚಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ
"ಪುರೋಹಿತ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅಪರಾಧಿಗಳ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆಯೇ ವಿನಃ ಯಾವುದೇ ಕಾರಣಕ್ಕೂ ಅವರನ್ನು ಬಿಡುವುದಿಲ್ಲ" ಎಂದು ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
ಏನಿದು ಪುರೋಹಿತನ ಹತ್ಯೆ ಪ್ರಕರಣ?
ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ದೇಗುಲದ ಅರ್ಚರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಘಟನೆ ಹಿನ್ನೆಲೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೈಪುರ್ ನಿಂದ 177 ಕಿ.ಮೀ ದೂರದಲ್ಲಿರುವ ಕರೌಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ರಾಧಾ-ಕೃಷ್ಣ ದೇವಸ್ಥಾನಕ್ಕೆ ಸೇರಿದ 5.2 ಎಕರೆ ಭೂಮಿಗಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ವಿರೋಧಿ ಗುಂಪಿನ ಸದಸ್ಯರು ದೇವಸ್ಥಾನದ ಅರ್ಚಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.
ಕಳೆದ ಬುಧವಾರ ರಾಧಾ-ಕೃಷ್ಣ ದೇವಸ್ಥಾನದ ಅರ್ಚಕ ಬಾಬು ಲಾಲ್ ವೈಷ್ಣವ್ ಎಂಬುವವರ ಮೇಲೆ ಮೀನಾ ಸಮುದಾಯದ ವಿರೋಧಿ ಗುಂಪಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅರ್ಚಕರನ್ನು ಆಸ್ಪತ್ರೆಗೆ ದಾಖಲಿಸಲಾಗಿಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಅರ್ಚಕರು ಪ್ರಾಣ ಬಿಟ್ಟಿದ್ದಾರೆ.