ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ: ರಾಜಸ್ಥಾನ ಕಾಂಗ್ರೆಸ್ ನಿರ್ಣಯ
ಜೈಪುರ, ಸೆ.18: ಕಾಂಗ್ರೆಸ್ನ ರಾಜಸ್ಥಾನ ಘಟಕವು ಶನಿವಾರ ಅವಿರೋಧವಾಗಿ ನಿರ್ಣಯ ಅಂಗೀಕರಿಸಿದ್ದು, ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರನ್ನು ನೇಮಿಸುವಂತೆ ಒತ್ತಾಯಿಸಿದೆ.
ಜೈಪುರದಲ್ಲಿ ನಡೆದ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಸಭೆಯಲ್ಲಿ ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ಮಾಡುವ ನಿರ್ಣಯವನ್ನು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಸ್ತಾಪಿಸಿದರು.
ರಾಹುಲ್ ಗಾಂಧಿಯನ್ನು ಮತ್ತೆ ಪಕ್ಷದ ಆಡಳಿತವನ್ನು ವಹಿಸಿಕೊಳ್ಳುವಂತೆ ಮನವೊಲಿಸುವ ಪ್ರಯತ್ನದಲ್ಲಿ ರಾಜಸ್ಥಾನ ಇಂತಹ ನಿರ್ಣಯವನ್ನು ಅಂಗೀಕರಿಸಿದ ಮೊದಲ ರಾಜ್ಯವಾಗಿದೆ. ಇತರ ರಾಜ್ಯ ಘಟಕಗಳು ಇದನ್ನು ಅನುಸರಿಸುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ಹೇಳುತ್ತಿವೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಈ ಸಭೆ ನಡೆದಿದ್ದು, ಸೆಪ್ಟೆಂಬರ್ 24 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಪ್ರದೇಶ ಕಾಂಗ್ರೆಸ್ ಸಮಿತಿ ಸಭೆಯ ನಂತರ, ರಾಜಸ್ಥಾನದ ಸಚಿವ ಪ್ರತಾಪ್ ಸಿಂಗ್ ಖಚರಿಯಾ ಮಾತನಾಡಿ, 'ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಲು ಮತ್ತು ರಾಜ್ಯದಿಂದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಸದಸ್ಯರನ್ನು ನಾಮನಿರ್ದೇಶನ ಮಾಡಲು ಪಕ್ಷದ ಮುಖ್ಯಸ್ಥರಿಗೆ ಅಧಿಕಾರ ನೀಡುವ ನಿರ್ಣಯವನ್ನು ಕೂಡ ಅಂಗೀಕರಿಸಲಾಗಿದೆ' ಎಂದು ಹೇಳಿದರು.
"ಕಾಂಗ್ರೆಸ್ ಒಂದಾಗಿದ್ದು, ರಾಹುಲ್ ಗಾಂಧಿ ಪರವಾದ ನಿರ್ಣಯವನ್ನು ಮುಖ್ಯಮಂತ್ರಿ ಅವರೇ ಮಂಡಿಸಿದ್ದಾರೆ, ಸದಸ್ಯರು ಒಮ್ಮತದಿಂದ ರಾಜ್ಯದಿಂದ ಹೊಸ ರಾಜ್ಯಾಧ್ಯಕ್ಷ ಮತ್ತು ಎಐಸಿಸಿ ಸದಸ್ಯರನ್ನು ನೇಮಿಸಲು ಕಾಂಗ್ರೆಸ್ ಅಧ್ಯಕ್ಷರಿಗೆ ಬಿಟ್ಟಿದ್ದಾರೆ" ಎಂದು ಸಚಿವ ಪ್ರತಾಪ್ ಸಿಂಗ್ ಖಚರಿಯಾ ಹೇಳಿದರು.

ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ದೆಹಲಿಯಲ್ಲಿದ್ದ ಕಾರಣ ಸಭೆಗೆ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಹಲವಾರು ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಮತ್ತೆ ಪಕ್ಷದ ಮುಖ್ಯಸ್ಥರಾಗಬೇಕೆಂದು ಬಯಸುತ್ತಿದ್ದಾರೆ ಹೇಳಿದ್ದಾರೆ. ಆದಾಗ್ಯೂ, ಪಕ್ಷದ ಆಂತರಿಕ ಮೂಲಗಳು ರಾಹುಲ್ ಗಾಂಧಿ ಅವರು ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ನಿರ್ಧರಿಸಿದ್ದಾರೆ ಎಂದು ಹೇಳುತ್ತಾರೆ.
ಕಳೆದ ತಿಂಗಳು ಅಶೋಕ್ ಗೆಹ್ಲೋಟ್ ಅವರು ರಾಹುಲ್ ಗಾಂಧಿ ಪಕ್ಷದ ಮುಖ್ಯಸ್ಥರಾಗದಿದ್ದರೆ ದೇಶಾದ್ಯಂತ ಪಕ್ಷದ ಸದಸ್ಯರು ನಿರಾಶೆಗೊಳ್ಳುತ್ತಾರೆ ಎಂದು ಹೇಳಿದ್ದರು. ಅಶೋಕ್ ಗೆಹ್ಲೋಟ್ ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ ಎಂಬ ವರದಿಗಳೂ ಇತ್ತಿಚೆಗೆ ಕೇಳಿಬಂದಿತ್ತು.
"ರಾಹುಲ್ ಗಾಂಧಿ ಅಧ್ಯಕ್ಷರಾದರೆ, ಪಕ್ಷವು ಒಗ್ಗಟ್ಟಾಗಿ ಉಳಿಯುತ್ತದೆ" ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದರು.
2019 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ರಾಹುಲ್ ಗಾಂಧಿ ಅವರು ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಸೆ.22 ರಂದು ಅಧಿಸೂಚನೆ ಹೊರಬೀಳಲಿದ್ದು, ಸೆಪ್ಟೆಂಬರ್ 24 ರಿಂದ 30ರ ವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದ್ದು, ಚುನಾವಣೆ ಅಗತ್ಯವಿದ್ದಲ್ಲಿ ಅಕ್ಟೋಬರ್ 17 ರಂದು ನಡೆಯಲಿದೆ. ಅಕ್ಟೋಬರ್ 19 ರಂದು ಫಲಿತಾಂಶ ಹೊರಬೀಳಲಿದೆ.












Click it and Unblock the Notifications