ರಾಹುಲ್ ಗಾಂಧಿ ಭೇಟಿಯಾದ ಬಂಡಾಯ ನಾಯಕ ಸಚಿನ್ ಪೈಲೆಟ್!
ಜೈಪುರ, ಆಗಸ್ಟ್ 10 : ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜಸ್ಥಾನ ಕಾಂಗ್ರೆಸ್ ಬಂಡಾಯ ನಾಯಕ ಸಚಿನ್ ಪೈಲೆಟ್ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಭೇಟಿಯಾಗಿದ್ದಾರೆ. ಆಗಸ್ಟ್ 14ರಿಂದ ರಾಜಸ್ಥಾನ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ.
Recommended Video
ರಾಜಸ್ಥಾನ ಕಾಂಗ್ರೆಸ್ನಲ್ಲಿ ಕೆಲವು ಬದಲಾವಣೆಗಳು ನಡೆಯುವ ಸುಳಿವು ಸಿಕ್ಕಿರುವ ಹಿನ್ನಲೆಯಲ್ಲಿ ದೆಹಲಿಯಲ್ಲಿ ಸಚಿನ್ ಪೈಲೆಟ್ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಭೇಟಿಯಾಗಿದ್ದಾರೆ. ರಾಜ್ಯ ಕಾಂಗ್ರೆಸ್ನಲ್ಲಿನ ಬಣ ರಾಜಕೀಯ ಅಂತ್ಯಗೊಳ್ಳಲಿದೆಯೇ? ಕಾದು ನೋಡಬೇಕು.
ಈ ಸಭೆಯಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಹ ಉಪಸ್ಥಿತರಿದ್ದರೆ? ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಎರಡು ವಾರಗಳ ಹಿಂದೆ ಸಚಿನ್ ಪೈಲೆಟ್ ಪ್ರಿಯಾಂಕಾ ವಾದ್ರಾ ಅವರನ್ನು ಎನ್ಸಿಆರ್ನಲ್ಲಿ ಭೇಟಿಯಾಗಿದ್ದರು ಎಂಬ ಮಾಹಿತಿ ಇದೆ.
ರಾಜಸ್ಥಾನ ಕಾಂಗ್ರೆಸ್ನಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂಬ ಸುದ್ದಿಯನ್ನು ಸಚಿನ್ ಪೈಲೆಟ್ ಬಣ ತಳ್ಳಿ ಹಾಕಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಬದಲಾವಣೆ ಮಾಡಬೇಕು ಎಂಬುದು ಬಣದ ಪ್ರಮುಖ ಬೇಡಿಕೆಯಾಗಿದೆ.

ಮನವೊಲಿಕೆ ಪ್ರಯತ್ನ
ಹಿಂದೆಯೂ ಪ್ರಿಯಾಂಕಾ ವಾದ್ರಾ ಸಚಿನ್ ಪೈಲೆಟ್ ಮನವೊಲಿಕೆಗೆ ಪ್ರಯತ್ನಪಟ್ಟಿದ್ದರು. ಅಶೋಕ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಬೇಕು ಎಂಬ ಬೇಡಿಕೆ ಮುಂದಿಟ್ಟಿರುವ ಸಚಿನ್ ಪೈಲೆಟ್ ಅವರು ಮನವೊಲಿಕೆಗೆ ಒಪ್ಪಿರಲಿಲ್ಲ.

ಆಗಸ್ಟ್ 14ರಿಂದ ಅಧಿವೇಶನ
ರಾಜಸ್ಥಾನ ವಿಧಾನಸಭೆ ಅಧಿವೇಶನ ಆಗಸ್ಟ್ 14ರಿಂದ ಆರಂಭವಾಗಲಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಶ್ವಾಸಮತಯಾಚನೆ ಮಾಡಲಿದ್ದಾರೆ. ಒಂದು ವೇಳೆ ಬಹುಮತ ಸಾಬೀತು ಮಾಡಿದರೆ ಸಚಿನ್ ಪೈಲೆಟ್ ಬಣಕ್ಕೆ ಮುಖಭಂಗವಾಗಲಿದೆ.

ಅಶೋಕ್ ಗೆಹ್ಲೋಟ್ ವಾಗ್ದಾಳಿ
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಚಿನ್ ಪೈಲೆಟ್ ಮತ್ತು ಅವರ ಬಣದ ಶಾಸಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ರಾಜ್ಯದಲ್ಲಿನ ಸರ್ಕಾರವನ್ನು ಅಸ್ಥಿರಗೊಳಿಸಲು ಅವರು ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡುತ್ತಿದ್ದಾರೆ.

ಪರಿಸ್ಥಿತಿ ತಿಳಿಗೊಳಿಸುವ ಯತ್ನ
ಜುಲೈ ತಿಂಗಳಿನಿಂದ ಆರಂಭವಾಗಿರುವ ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು ಅಂತ್ಯಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಆದ್ದರಿಂದ, ಪಕ್ಷದ ಹೈಕಮಾಂಡ್ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನವನ್ನು ಮಾಡುತ್ತಿದೆ. ಎರಡು ದಿನದಲ್ಲಿ ರಾಜ್ಯ ರಾಜಕೀಯದ ಬಗ್ಗೆ ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ.












Click it and Unblock the Notifications