ಗೆಹ್ಲೋಟ್ ಭೇಟಿಯಾದ ಸಚಿನ್ ಪೈಲೆಟ್ ಬಣದ ಶಾಸಕ!
ಜೈಪುರ, ಆಗಸ್ಟ್ 10 : ರಾಜಸ್ಥಾನ ಕಾಂಗ್ರೆಸ್ನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಆಗಸ್ಟ್ 14ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮೊದಲು ನಡೆಯುತ್ತಿರುವ ಬೆಳವಣಿಗೆಗಳು ಕುತೂಹಲಕ್ಕೆ ಕಾರಣವಾಗಿವೆ.
ಸೋಮವಾರ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿನ್ ಪೈಲೆಟ್ ಬಣದ ಶಾಸಕ ಬಾವ್ವಾರ್ ಲಾಲ್ ಶರ್ಮಾ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭೇಟಿ ಮಾಡಿದರು. ಭೇಟಿಯ ಬಳಿಕ ಮಾಧ್ಯಮ ಜೊತೆ ಮಾತನಾಡಲು ಅವರು ನಿರಾಕರಿಸಿದರು.
ನವದೆಹಲಿಯಲ್ಲಿ ರಾಜಸ್ಥಾನ ಕಾಂಗ್ರೆಸ್ ಬಂಡಾಯ ನಾಯಕ ಸಚಿನ್ ಪೈಲೆಟ್ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಭೇಟಿ ಮಾಡಿದ್ದಾರೆ. ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ಮುಂದೆ ಏನಾಗಲಿದೆ? ಎಂಬುದು ಕುತೂಹಲ ಮೂಡಿಸಿದೆ.

ರಾಜಸ್ಥಾನ ಕಾಂಗ್ರೆಸ್ನಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂಬ ಸುಳಿವು ದೊರಕಿರುವ ಹಿನ್ನಲೆಯಲ್ಲಿ ಸಚಿನ್ ಪೈಲೆಟ್ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸಚಿನ್ ಪೈಲೆಟ್ ಮತ್ತು ಗೆಹ್ಲೋಟ್ ಬೆಂಬಲಿಸುವ ಶಾಸಕರು ಹೋಟೆಲ್ನಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.
ಸೋಮವಾರ ಬೆಳಗ್ಗೆ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅಶೋಕ್ ಗೆಹ್ಲೋಟ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅಶೋಕ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ ತಮ್ಮನ್ನು ಮುಖ್ಯಮಂತ್ರಿ ಮಾಡಬೇಕು ಎಂಬುದು ಸಚಿನ್ ಪೈಲೆಟ್ ಅವರ ಬೇಡಿಕೆಯಾಗಿದೆ.
ಆಗಸ್ಟ್ 14ರಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಮಾಡಲು ಅಶೋಕ್ ಗೆಹ್ಲೋಟ್ ಸಿದ್ಧವಾಗುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸಚಿನ್ ಪೈಲೆಟ್ ಬಣದಲ್ಲಿ ಚಟುವಟಿಕೆ ಬಿರುಸಾಗಿದೆ.












Click it and Unblock the Notifications