ಉದಯ್ಪುರ ಪ್ರಕರಣ: ಗೆಹ್ಲೋಟ್ ಸರ್ಕಾರದ ವಿರುದ್ಧ ವಸುಂಧರಾ ರಾಜೆ ವಾಗ್ದಾಳಿ
ಉದಯಪುರ ಜೂನ್ 29: ಉದಯಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನೇತೃತ್ವದ ರಾಜಸ್ಥಾನ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ವಸುಂಧರಾ ರಾಜೆ ಟೀಕಿಸಿದ್ದಾರೆ. ಅಶೋಕ್ ಗೆಹ್ಲೋಟ್ ಸರ್ಕಾರದ ಪ್ರಚೋದನೆ ನೀತಿಗಳು ರಾಜ್ಯದಲ್ಲಿ ಕೋಮುಗಲಭೆಗೆ ಕಾರಣವಾಗಿವೆ ಎಂದು ದೂರಿದ್ದಾರೆ. "ಉದಯಪುರದಲ್ಲಿ ಅಮಾಯಕ ಯುವಕರ ಬರ್ಬರ ಹತ್ಯೆಯ ಹಿಂದೆ ರಾಜ್ಯ ಸರ್ಕಾರದ ಪ್ರಚೋದನೆ ಹೆಚ್ಚಿರುವುದು ಸ್ಪಷ್ಟವಾಗಿದೆ. ರಾಜ್ಯ ಸರ್ಕಾರದ ನೀತಿಯಿಂದಾಗಿ ಕೋಮುಗಲಭೆ ಮತ್ತು ರಾಜ್ಯದಲ್ಲಿ ಹಿಂಸಾಚಾರ ಎದ್ದಿದೆ. ಈ ಘಟನೆಯ ಹಿಂದಿರುವ ವ್ಯಕ್ತಿಗಳು ಮತ್ತು ಸಂಘಟನೆಗಳನ್ನು ತಕ್ಷಣವೇ ಬಹಿರಂಗಪಡಿಸಬೇಕು ಮತ್ತು ಬಂಧಿಸಬೇಕು" ಎಂದು ರಾಜೆ ಆಗ್ರಹಿಸಿದ್ದಾರೆ.
ಉದಯ್ಪುರದಲ್ಲಿ ಟೈಲರ್ನ ಭೀಕರ ಹತ್ಯೆಯು ಇಡೀ ರಾಜ್ಯದಲ್ಲಿ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಆಕ್ರೊಶ ಹುಗಿಲೇಳುತ್ತಿದ್ದಂತೆ ರಾಜಸ್ಥಾನ ಸರ್ಕಾರ ಮಂಗಳವಾರ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಒಂದು ತಿಂಗಳ ಕಾಲ CrPC ಯ ಸೆಕ್ಷನ್ 144 ಅನ್ನು ವಿಧಿಸುವುದಾಗಿ ಘೋಷಿಸಿದೆ. ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ. ಈ ತಂಡ ಎಸ್ಐಟಿಯಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ), ವಿಶೇಷ ಕಾರ್ಯಾಚರಣೆ ಗುಂಪು ಅಶೋಕ್ ಕುಮಾರ್ ರಾಥೋಡ್, ಪೊಲೀಸ್ ಮಹಾನಿರೀಕ್ಷಕ (ಐಜಿ), ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್), ಪ್ರಫುಲ್ಲ ಕುಮಾರ್ ಮತ್ತು ಪೊಲೀಸ್ ಅಧೀಕ್ಷಕ (ಎಸ್ಪಿ) ಶ್ರೇಣಿಯ ಅಧಿಕಾರಿ ಮತ್ತು ಹೆಚ್ಚುವರಿ ಎಸ್ಪಿ ಶ್ರೇಣಿಯ ಅಧಿಕಾರಿಗಳನ್ನು ಒಳಗೊಂಡಿದೆ.

ಜಿಲ್ಲೆಯಲ್ಲಿ ಪೊಲೀಸರ ಕಟ್ಟೆಚ್ಚರ
ಮಂಗಳವಾರ ಇಡೀ ರಾಜ್ಯದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಜನರು ಶಾಂತಿ ಕಾಪಾಡುವಂತೆ ಉದಯಪುರ ವಿಭಾಗೀಯ ಆಯುಕ್ತ ರಾಜೇಂದ್ರ ಭಟ್ ಮನವಿ ಮಾಡಿದ್ದಾರೆ. "ಉದಯಪುರದ ಜನರಿಗೆ ಶಾಂತಿ ಕಾಪಾಡುವಂತೆ ನಾವು ಮನವಿ ಮಾಡುತ್ತೇವೆ. ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು" ಎಂದು ಭಟ್ ಹೇಳಿದರು. ರಾಜಸ್ಥಾನದ ಪ್ರತಿ ಜಿಲ್ಲೆಯಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಘಟನೆಯ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ತಂಡ ಉದಯಪುರಕ್ಕೆ ಧಾವಿಸಿದೆ ಎಂದು ಮೂಲಗಳು ತಿಳಿಸಿವೆ.

ಮೋದಿಯವರಿಗೂ ಜೀವ ಬೆದರಿಕೆ
ಬಲಿಪಶು ಟೈಲರ್ ಇತ್ತೀಚೆಗೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಟೀಕೆಗಳನ್ನು ಮಾಡಿದ ಮಾಜಿ ಬಿಜೆಪಿ ವಕ್ತಾರರು. ಈ ಕೊಲೆಯ ನಂತರ ಜನ ನ್ಯಾಯಕ್ಕಾಗಿ ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇನ್ಸ್ಪೆಕ್ಟರ್ ಜನರಲ್ಗಳಿಗೆ ರಾಜ್ಯಾದ್ಯಂತ ಎಚ್ಚರ ವಹಿಸಿದ್ದಾರೆ.
ಹಂತಕರು ಘಟನೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ರಿಯಾಜ್ ಅಖ್ತರ್ ಎಂದು ಗುರುತಿಸಲಾದ ದಾಳಿಕೋರರಲ್ಲಿ ಒಬ್ಬರು ಕನ್ಹಯ್ಯಾ ಲಾಲ್ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದರೆ, ಮತ್ತೊಬ್ಬ ಘೋಸ್ ಮೊಹಮ್ಮದ್ ತನ್ನ ಮೊಬೈಲ್ ಫೋನ್ನಲ್ಲಿ ಅಪರಾಧವನ್ನು ಸೆರೆಹಿಡಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಠಿಣ ಕ್ರಮಕ್ಕೆ ಓವೈಸಿ ಆಗ್ರಹ
ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಂಗಳವಾರ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಇಸ್ಲಾಂ ಧರ್ಮವನ್ನು ಅವಮಾನಿಸಿದ ಆರೋಪದ ಮೇಲೆ ಟೈಲರ್ ಹತ್ಯೆಯನ್ನು ಖಂಡಿಸಿದ್ದಾರೆ. ಇಬ್ಬರು ವ್ಯಕ್ತಿಗಳು ಟೈಲರ್ ಕನ್ಹಯ್ಯಾ ಲಾಲ್ ಅವರ ಕತ್ತು ಸೀಳಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ, ಅಲ್ಲಿ ಅವರು ಇಸ್ಲಾಂ ಧರ್ಮಕ್ಕೆ ಮಾಡಿದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯ ಪ್ರಚಾರದ ಭಾಗವಾಗಿ ಭೋಪಾಲ್ನ ಅಶೋಕ ಗಾರ್ಡನ್ ಪ್ರದೇಶದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ಪ್ರವಾದಿ ಮೊಹಮ್ಮದ್ ವಿರುದ್ಧದ ಹೇಳಿಕೆಗಳಿಂದ ಅಮಾನತುಗೊಂಡ ಬಿಜೆಪಿ ವಕ್ತಾರರನ್ನು ಬಂಧಿಸುವಂತೆ ಒತ್ತಾಯಿಸಿದರು.

ನೂಪುರ್ ಶರ್ಮಾ ವಿರುದ್ಧ ಕ್ರಮಕ್ಕೆ ಓವೈಸಿ ಒತ್ತಾಯ
"ನಾನು (ಉದಯಪುರ) ಘಟನೆಯನ್ನು ಖಂಡಿಸುತ್ತೇನೆ. ಯಾರನ್ನಾದರೂ ಕೊಲ್ಲಲು ಕಾನೂನಿನಲ್ಲಿ ಅವಕಾಶವಿಲ್ಲ. ಯಾರೂ ಇತರರನ್ನು ಕೊಲ್ಲಲು ಸಾಧ್ಯವಿಲ್ಲ. ನಾವು ಕಾನೂನನ್ನು ಕೈಗೆ ತೆಗೆದುಕೊಳ್ಳುವುದಿಲ್ಲ. ಇದೊಂದು ಅಪರಾಧ. ಆದರೆ ನೂಪುರ್ ಶರ್ಮಾ ಅವರನ್ನೂ ಬಂಧಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ'' ಎಂದು ಅವರು ಹೇಳಿದರು.












Click it and Unblock the Notifications