ಕಲಬುರಗಿ-ಬೀದರ್ ನಲ್ಲಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ 3000 ಕೋಟಿ ರೂ ಬಿಡುಗಡೆ

ಕಲಬುರಗಿ, ಸೆಪ್ಟೆಂಬರ್ 17: ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ 3000 ಕೋಟಿ ರೂ. ಗಳ ವೆಚ್ಚದಲ್ಲಿ ಕೃಷಿ ಮತ್ತು ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಕಾಗಿಣಾ ನದಿಗೆ ಹೊಂದಿಕೊಂಡು 10 ಏತ ನೀರಾವರಿ ಯೋಜನೆಯ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇಂದು ಕಲಬುರಗಿ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ಯೋಜನೆಯ ಕುರಿತು ಮಾಹಿತಿ ನೀಡಿ, ಇದರಿಂದ ಬೀದರ್ ಮತ್ತು ಕಲಬುರಗಿ ಜಿಲ್ಲೆಯ ರೈತರ ಲಕ್ಷಾಂತರ ಎಕರೆ ಭೂಮಿಗೆ ನೀರಿನ ಪೂರೈಕೆ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕಟಿಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇಂದು ಸುಮಾರು 1115.32 ಕೋಟಿ ರೂ. ಗಳ ಬೃಹತ್ ಮೊತ್ತದ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಾಗಿದೆ. "ಕಲ್ಯಾಣ ಕರ್ನಾಟಕ" ಪ್ರಾಂತ್ಯದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ನಮ್ಮ ಸರ್ಕಾರದ ಪ್ರಮುಖ ಗುರಿಗಳಲ್ಲಿ ಒಂದು ಎಂದರು.

 ವರ್ಷದ ಹಿಂದೆ ಕಲ್ಯಾಣ ಕರ್ನಾಟಕ ಮರು ನಾಮಕರಣ

ವರ್ಷದ ಹಿಂದೆ ಕಲ್ಯಾಣ ಕರ್ನಾಟಕ ಮರು ನಾಮಕರಣ

ಸರ್ದಾರ ವಲ್ಲಭಭಾಯಿ ಪಟೇಲರ ಅಚಲ ನಿರ್ಧಾರದಿಂದ ಹೈದರಾಬಾದ ಕರ್ನಾಟಕ ಪ್ರದೇಶವು 1948ರ ಸೆಪ್ಟೆಂಬರ್ 17 ರಂದು ಭಾರತ ಒಕ್ಕೂಟ ವ್ಯವಸ್ಥೆಯಲ್ಲಿ ವಿಲೀನವಾಯಿತು. ನಿಜಾಮರ ಹಿಡಿತದಿಂದ ಈ ಪ್ರದೇಶವನ್ನು ಮುಕ್ತಗೊಳಿಸಲು ಬಹುದೊಡ್ಡ ಹೋರಾಟವೇ ನಡೆಯಿತು. ಆ ಹೋರಾಟದಲ್ಲಿ ತ್ಯಾಗ ಮತ್ತು ಬಲಿದಾನ ಮಾಡಿದ ಎಲ್ಲಾ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸಿ ಗೌರವ ಸಮರ್ಪಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೆ ಕಳೆದ ವರ್ಷ ಇದೇ ದಿನ ಹೈದರಾಬಾದ್-ಕರ್ನಾಟಕ ಪ್ರದೇಶವನ್ನು "ಕಲ್ಯಾಣ ಕರ್ನಾಟಕ" ಎಂದು ಮರು ನಾಮಕರಣ ಮಾಡಿ ಇಲ್ಲಿನ ಬಹುಜನರ ಒತ್ತಾಸೆ ಈಡೇರಿಸಲಾಗಿದೆ. ಪ್ರದೇಶದ ವ್ಯಾಪ್ತಿಯಲ್ಲಿ ಕೃಷಿ, ಶಿಕ್ಷಣ, ಸಾಹಿತ್ಯ, ಸ್ವಯಂ ಉದ್ಯೋಗ, ಆರೋಗ್ಯ, ಯುವಜನ ಮತ್ತು ಮಹಿಳಾ ಸಬಲೀಕರಣ, ಗ್ರಾಮ ಸಬಲೀಕರಣ ಹೀಗೆ ನಾನಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲೆಂದೇ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಕಚೇರಿ ಸ್ಥಾಪಿಸಿದ್ದು, ಸಂಘದ ಚಟುವಟಿಕೆ ತೀವ್ರಗೊಳಿಸಲು 300 ಕೋಟಿ ರೂ. ಅನುದಾನ ಬಿಡುಗಡೆಗೆ ಅನುಮೋದನೆ ನೀಡಿ ಈಗಾಗಲೇ 100 ಕೋಟಿ ರೂ. ಸಂಘಕ್ಕೆ ಬಿಡುಗಡೆ ಮಾಡಿದೆ ಎಂದರು.

 ಗೊಂಬೆ ಕೈಗಾರಿಕೆಯಿಂದ ಜನರಿಗೆ ಉದ್ಯೋಗ

ಗೊಂಬೆ ಕೈಗಾರಿಕೆಯಿಂದ ಜನರಿಗೆ ಉದ್ಯೋಗ

ಕೊಪ್ಪಳ ಜಿಲ್ಲೆಯಲ್ಲಿ ಚೀನಾ ದೇಶದ ಮಾದರಿಯಲ್ಲಿ ವಿಶ್ವಮಟ್ಟದ ಗೊಂಬೆ ತಯಾರಿಕಾ ಕೈಗಾರಿಕೆಗಳನ್ನು ಆಕರ್ಷಿಸಲು 'ಗೊಂಬೆ ತಯಾರಿಕಾ ಕ್ಲಸ್ಟರ್ ಸ್ಥಾಪಿಸಲಾಗುತ್ತಿದೆ. ಕೊಪ್ಪಳದಲ್ಲಿ 400 ಎಕರೆ ಪ್ರದೇಶದಲ್ಲಿ ಗೊಂಬೆ ತಯಾರಿಕಾ ವಿಶೇಷ ಆರ್ಥಿಕ ವಲಯ ಮತ್ತು ದೇಶಿಯ ಉತ್ಪಾದನಾ ವಲಯ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕಾಗಿ 1500 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಮುಂದಿನ 3 ರಿಂದ 5 ವರ್ಷಗಳಲ್ಲಿ 20,000 ಜನರಿಗೆ ಉದ್ಯೋಗ ಕಲ್ಪಿಸಲಿದೆ ಎಂದರು.

ರಾಯಚೂರು ಜಿಲ್ಲೆಯ ಗೋಲಪಲ್ಲಿಯಲ್ಲಿ 1,200 ಮೆಗಾ ವ್ಯಾಟ್ ಸಾಮರ್ಥ್ಯದ 10,000 ಕೋಟಿ ರೂ.ಗಳ ವೆಚ್ಚದಲ್ಲಿ ಜಲ ವಿದ್ಯುತ್ ಯೋಜನೆಯು ಪರಿಶೀಲನಾ ಹಂತದಲ್ಲಿದ್ದು, ನೆರೆ ರಾಜ್ಯದ ಜೊತೆ ಮಾತುಕತೆ ನಡೆದಿದೆ ಎಂದು ತಿಳಿಸಿದರು.

 7.15 ಎಕರೆ ಪ್ರದೇಶದಲ್ಲಿ ಜಯದೇವ ಆಸ್ಪತ್ರೆ ಸ್ಥಾಪನೆ

7.15 ಎಕರೆ ಪ್ರದೇಶದಲ್ಲಿ ಜಯದೇವ ಆಸ್ಪತ್ರೆ ಸ್ಥಾಪನೆ

ಲಕ್ಷಾಂತರ ಜನರ ಹೃದಯದಲ್ಲಿ ಬದುಕಿನ ಸೆಲೆ ಚಿಮ್ಮಿಸುವ ಕೆಲಸ ಮಾಡುತ್ತಿರುವ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖೆಯ 300 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಸಂಕೀರ್ಣ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ಮಾಡಲಾಗಿದೆ. 7.15 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಈ ಆಸ್ಪತ್ರೆ ನಿರ್ಮಾಣಕ್ಕೆ 150 ಕೋಟಿ ರೂ. ವ್ಯಯ ಮಾಡಲಾಗುತ್ತಿದೆ. ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತವಾದ ಆಸ್ಪತ್ರೆ ಇದಾಗಲಿದ್ದು, ಕಲಬುರಗಿ ಭಾಗದ ಜನರಿಗೆ ಬಹಳ ಉಪಯುಕ್ತವಾಗಲಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಲು ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಲು ಬೆಂಗಳೂರಿನ ರೂಪೇನ ಅಗ್ರಹಾರದಲ್ಲಿ 1 ಎಕರೆ ಪ್ರದೇಶದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಲು ಉದ್ದೇಶಿಸಿ ಇಂದು ನಿವೇಶನ ಹಂಚಿಕೆ ಪತ್ರವನ್ನು ಕೆ.ಕೆ.ಆರ್.ಡಿ.ಬಿ. ಮಂಡಳಿಗೆ ವಿತರಿಸಿದೆ. ಮುಂದಿನ ಒಂದು ವರ್ಷದಲ್ಲಿ ಕಟ್ಟಡವನ್ನು ಮಂಡಳಿಯಿಂದ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

 ಬಲ್ಕ್ ಡ್ರಗ್ ಪಾರ್ಕ್ ಸ್ಥಾಪನೆಗೆ ಪ್ರಸ್ತಾವನೆ

ಬಲ್ಕ್ ಡ್ರಗ್ ಪಾರ್ಕ್ ಸ್ಥಾಪನೆಗೆ ಪ್ರಸ್ತಾವನೆ

ಭಾರತ ಸರ್ಕಾರದ 'ಬಲ್ಕ್ ಡ್ರಗ್ ಪಾರ್ಕ್ ಉತ್ತೇಜನ' ಯೋಜನೆಯಡಿ ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾ ಪ್ರದೇಶದ 1510 ಎಕರೆ ಪ್ರದೇಶದಲ್ಲಿ ಬಲ್ಕ್ ಡ್ರಗ್ ಪಾರ್ಕ್ ಸ್ಥಾಪಿಸುವ ಕುರಿತು ಭಾರತ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಯೋಜನೆಯ ಅಭಿವೃದ್ಧಿ ವೆಚ್ಚವು 1446 ಕೋಟಿ ರೂ ಎಂದು ಅಂದಾಜಿಸಲಾಗಿದ್ದು, ಅದರಲ್ಲಿ ಭಾರತ ಸರ್ಕಾರದ ಪಾಲು ರೂ.1000 ಕೋಟಿ ಸಿಗುವ ನಿರೀಕ್ಷೆ ಇದೆ ಎಂದರು.

ಮುಂಬರುವ ನಾಲ್ಕು ತಿಂಗಳಲ್ಲಿ ಬಸವ ಕಲ್ಯಾಣ ಪ್ರಾಧಿಕಾರದ ಆಶ್ರಯದಲ್ಲಿ, ಎಲ್ಲ ಕಾನೂನಿನ ಪ್ರಕ್ರಿಯೆ ಪೂರ್ಣಗೊಳಿಸಿ, ಅನುಭವ ಮಂಟಪ ಕಾರ್ಯಾರಂಭ ಮಾಡಲಾಗುವುದು ಎಂದು ಹೇಳಿದರು. ಇದೇ ಸಂದರ್ಭ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಪ್ರದೇಶದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯುಳ್ಳ ಕೈಪಿಡಿಯನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು. ಸ್ವಾತಂತ್ರ್ಯ ಹೋರಾಟಗಾರರಾದ ವೆಂಕಟರಾವ ಅರ್ಜುನರಾವ್ ಶಿಂಧೆ, ಶಿವಲಿಂಗಪ್ಪ ಬಸಲಿಂಗಪ್ಪ ಪಾಟೀಲ್, ಭೀಮರಾವ ರೇವಣಸಿದ್ದಪ್ಪ ಕೊಟ್ಟರಗಿ, ವಿಜಯಕುಮಾರ ಪ್ರಭಾಕರ್ ತಡಕಲ್ ಹಾಗೂ ಶಂಕರೆಪ್ಪ ರಾಮಶೆಟ್ಟಪ್ಪ ಹುಗ್ಗಿ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+