ಕಲಬುರಗಿ-ಬೀದರ್ ಗೆ 75 ಕೋಟಿ ರು ಅನುದಾನ ಬಿಡುಗಡೆ:ಸಿದ್ದರಾಮಯ್ಯ
ಕಲಬುರಗಿ, ಸೆ. 28 : ಕಲಬುರಗಿ ಮತ್ತು ಬೀದರ್ ಜಿಲ್ಲೆಯ ಮಳೆ ಮತ್ತು ಪ್ರವಾಹ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನಡೆಸಿದರು. ಕೆಲ ಪ್ರವಾಹ ಪೀಡಿತ ಪ್ರದೇಶಗಳನ್ನು ಹೆಲಿಕಾಫ್ಟರ್ ಮೂಲಕ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.
ಬಳಿಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಭವಿಸಿರುವ ಹಾನಿಗೆ ತುರ್ತು ಪರಿಹಾರಕ್ಕೆ ಬೀದರ್ ಜಿಲ್ಲೆಗೆ 50 ಕೋಟಿ ಹಾಗೂ ಕಲಬುರಗಿ ಜಿಲ್ಲೆಗೆ 25 ಕೋಟಿ ರು ಅನುದಾನವನ್ನು ಸೆ.28(ಬುಧವಾರ) ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. [ವೈಮಾನಿಕ ಸಮೀಕ್ಷೆ : ಕಲಬುರಗಿ-ಬೀದರ್ ಗೆ ಸಿಎಂ ಸಿದ್ದರಾಮಯ್ಯ ಭೇಟಿ]

ಹೈದರಾಬಾದ್ ಕರ್ನಾಟಕ ಪ್ರದೇಶದ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗುವುದು ಎಂದರು.
ಕಲಬುರಗಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಗೆ ಸಂಬಂಧಪಟ್ಟಂತೆ ನಿಯಮಾವಳಿ ಪ್ರಕಾರ ತುರ್ತು ಪರಿಹಾರವನ್ನು ಬುಧವಾರ 25 ಕೋಟಿ ರೂ. ವಿತರಿಸುವಂತೆ ಆದೇಶಿಸಲಾಗಿದೆ. [ಕಲಬುರಗಿಯಲ್ಲಿ ಜಲಪ್ರಳಯ : 5 ಜನ ರೈತರ ಪ್ರಾಣ ರಕ್ಷಣೆ!]
ಸರ್ಕಾರದಿಂದ ಮ್ಯಾಚಿಂಗ್ ಗ್ರ್ಯಾಂಟ್ ನೀಡುವ ಬಗ್ಗೆ ಯೋಚಿಸಲಾಗುವುದು. ಜಿಲ್ಲೆಯಲ್ಲಿ ಪ್ರಾಥಮಿಕ ವರದಿ ಪ್ರಕಾರ 35 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ಇದಲ್ಲದೇ 1410 ಮನೆಗಳು ಜಖಂ ಆಗಿದ್ದು, ನಿಯಮಾವಳಿ ಪ್ರಕಾರ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ವೈದ್ಯಕೀಯ ಶಿಕ್ಷಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಶರಣಪ್ರಕಾಶ ಪಾಟೀಲ್, ಕಂದಾಯ ಇಲಾಖೆಯ ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ತುಷಾರ್ ಗಿರಿನಾಥ, ಪ್ರಾದೇಶಿಕ ಆಯುಕ್ತ ಅಮ್ಲನ್ ಅದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಉಜ್ವಲ್ಕುಮಾರ್ ಘೋಷ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿರುದ್ಧ ಶ್ರವಣ ಪಿ., ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ಹಾಗೂ ವಿವಿಧ ಇಲಾಖೆಗಳ ಎಲ್ಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications